ರಾಜ್ಯದಲ್ಲಿ ಆಮ್ಲಜನಕ ಕೊರತೆ ಇಲ್ಲ: ಸಚಿವ ಡಾ.ಸುಧಾಕರ್

Update: 2021-04-18 16:12 GMT

ಬೆಂಗಳೂರು, ಎ. 18: ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆ ಮೀಸಲಿಡುವ ವಿಚಾರದಲ್ಲಿ ಸಮಾಧಾನ ಆಗಿಲ್ಲ. ರಾಜ್ಯ ಸರಕಾರದ ಆದೇಶವನ್ನು ಖಾಸಗಿ ಆಸ್ಪತ್ರೆಗಳು ಪಾಲಿಸದಿದ್ದರೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ರವಿವಾರ ನಗರದಲ್ಲಿನ ಸಕ್ರ ಆಸ್ಪತ್ರೆ, ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿ, ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಕೋವಿಡ್‍ಗೆ ಶೇ.50ರಷ್ಟು ಹಾಸಿಗೆ ಮೀಸಲಿಡುವ ಆದೇಶ ಯಾರೆಲ್ಲ ಪಾಲಿಸಿದ್ದಾರೆ ಎಂದು ಪರಿಶೀಲಿಸಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯವರು ಶೇ.50 ಹಾಸಿಗೆ ನೀಡಿಲ್ಲ. ಹೀಗಾಗಿ ಆಸ್ಪತ್ರೆಯವರಿಗೆ ತೀಕ್ಷ್ಣವಾಗಿ ಸೂಚನೆ ನೀಡಲಾಗಿದೆ ಎಂದರು.

ಖಾಸಗಿ ಆಸ್ಪತ್ರೆಗಳು ಹಾಸಿಗೆ ನೀಡುವ ವಿಚಾರದಲ್ಲಿ ನನಗೆ ಸಮಾಧಾನ ಆಗಿಲ್ಲ. ಕೆಲ ದೊಡ್ಡ ಆಸ್ಪತ್ರೆಗಳು ಹಾಸಿಗೆ ನೀಡಿಲ್ಲ. ಖಾಸಗಿ ಆಸ್ಪತ್ರೆಯವರು ಈ ಆದೇಶ ಪಾಲಿಸದಿದ್ದರೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ಇಂತಹ ಸ್ಥಿತಿ ನಿರ್ಮಿಸುವುದು ಬೇಡ ಎಂದು ಸಚಿವ ಸುಧಾಕರ್ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ, ಸಿಬ್ಬಂದಿ ಕೊರತೆ ಇರುತ್ತದೆ. ಈ ಎಲ್ಲ ಅಂಶಗಳನ್ನು ನೋಡಿಕೊಂಡು ಖಾಸಗಿ ಆಸ್ಪತ್ರೆಗಳೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಲ ನ್ಯೂನತೆಗಳು ಬರಬಹುದು. ಆಮ್ಲಜನಕ, ರೆಮಿಡಿಸ್ವಿರ್ ಔಷಧ ಪೂರೈಕೆ, ಹಾಸಿಗೆ ಹೆಚ್ಚಳ, ಹೋಟೆಲ್ ಗಳಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಆಮ್ಲಜನಕ ಕೊರತೆ ಇಲ್ಲ: ರಾಜ್ಯದಲ್ಲಿ ಆಮ್ಲಜನಕ ಕೊರತೆ ಇಲ್ಲ. ಇದಕ್ಕೆ ಸಂಬಂಧಿಸಿದಂತೆ ವಲಯವಾರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈಗ ಇರುವ 800 ಮೆಟ್ರಿಕ್ ಟನ್ ಆಮ್ಲಜನಕ ಜೊತೆಗೆ 300 ಟನ್‍ಗೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಅಗತ್ಯವಿರುವಷ್ಟು ಆಮ್ಲಜನಕ ನೀಡಲಾಗುವುದು ಎಂದು ಕೈಗಾರಿಕಾ ವಲಯದವರು ಹೇಳಿದ್ದಾರೆ ಎಂದು ಅವರು ತಿಳಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅನೌಪಚಾರಿಕವಾಗಿ ನಾಳೆ(ಎ.19)ಯ ಸಭೆಗೆ ಪೂರ್ವಭಾವಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಕೋವಿಡ್ ಸ್ಥಿತಿಗತಿ ಬಗ್ಗೆ ವಿವರ ಪಡೆದಿದ್ದಾರೆ ಎಂದ ಅವರು, ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲ ಬಿಗಿ ಕ್ರಮ ಕೈಗೊಳ್ಳುವುದು ಅವಶ್ಯ. ನಾಳೆಯ ಸರ್ವಪಕ್ಷ ಸಭೆ ಬಳಿಕ ಎಲ್ಲವೂ ನಿರ್ಧಾರವಾಗಲಿದೆ ಎಂದರು.

ಕೋವಿಡ್ ಎರಡನೇ ಅಲೆ ವೇಗವಾಗಿದ್ದು, ಜನರು ಮುನ್ನೆಚ್ಚರಿಕೆ ಕ್ರಮ ವಹಿಸಲೇಬೇಕು. ವಾಸ್ತವ ಅರ್ಥ ಮಾಡಿಕೊಳ್ಳಬೇಕು, ನಿರ್ಲಕ್ಷ್ಯ ತೋರಬಾರದು. ಕೊರೊನಾ ಪ್ರಕರಣ ಸಂಖ್ಯೆ ನೋಡಿಕೊಂಡು ಹಾಸಿಗೆ ಎಷ್ಟು ಬೇಕೆಂದು ನಿರ್ಧರಿಸಲಾಗುತ್ತದೆ. ಜನರ ಕಷ್ಟದಲ್ಲಿ, ಸರಕಾರದ ಹೋರಾಟದಲ್ಲಿ ಖಾಸಗಿ ಆಸ್ಪತ್ರೆಗಳು ಭಾಗಿಯಾಗಬೇಕು ಎಂದು ಸಚಿವ ಸುಧಾಕರ್ ಇದೇ ವೇಳೆ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News