ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ರ ಆಪ್ತ ಸಹಾಯಕ ಕೊರೋನದಿಂದ ನಿಧನ

Update: 2021-04-19 09:42 GMT

ಬೆಂಗಳೂರು, ಎ.19: ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರ ಆಪ್ತ ಸಹಾಯಕ ಎಚ್‌.ಜೆ.ರಮೇಶ್‌ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಕೋವಿಡ್‌ ಸೋಂಕಿಗೆ ಪಾಸಿಟಿವ್ ಆಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಎಚ್‌.ಜೆ.ರಮೇಶ್‌ ಅವರಿಗೆ ಎ.13ರಂದು ಕೋವಿಡ್‌ ಸೋಂಕು ತಗಲಿರುವುದು ದೃಢಪಟ್ಟಿತ್ತು. ಬಳಿಕ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರತರದ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದ ಅವರು ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ 9:30ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.  

ರಮೇಶ್‌ ಅವರು ಸಚಿವರ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.

ರಮೇಶ್‌ ಮೃತಪಟ್ಟ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುರೇಶ್‌ಕುಮಾರ್‌, ‘ನಮ್ಮ ಕ್ಷೇತ್ರದ (ರಾಜಾಜಿನಗರ) ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ ನನ್ನ ಆಪ್ತ ಸಹಾಯಕ ಎಚ್‌.ಜೆ. ರಮೇಶ್ ಇನ್ನಿಲ್ಲ. ರಮೇಶ್ ಸುಮಾರು ಎಂಟು ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ’ಎಂದು ಕಂಬನಿ ಮಿಡಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News