ಕೊರೋನ ನಿಯಮ ಉಲ್ಲಂಘಿಸುತ್ತಿರುವ ಪ್ರಧಾನಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಾಗಲಿ: ಬಡಗಲಪುರ ನಾಗೇಂದ್ರ

Update: 2021-04-19 16:56 GMT

ಮೈಸೂರು,ಎ.19: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ರಾಜಕಾರಣಿಗಳು ಕೊರೋನ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ನ್ಯಾಯಾಲಯ ಸ್ವಯಂ ಪ್ರೇರಿತ ದೂರು ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೋನ ಸೋಂಕಿನ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಕೊರೋನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಉಪದೇಶ ನೀಡುವ ಪ್ರಧಾನಿ ನರೇಂದ್ರ ಮೋದಿಯವರೇ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ ಹೆಚ್ಚು ಜನ ಸೇರಿಸಿ, ಪ್ರಶಂಸೆ ವ್ಯಕ್ತಪಡಿಸಿ ತಾವೇ ರೂಪಿಸಿದ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಇಂತಹ ಬೇಜವಾಬ್ದಾರಿ ಪ್ರಧಾನಿಯನ್ನು ಈ ದೇಶ ಹಿಂದೆಂದೂ ಕಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಪದೇ ಪದೇ ದೇಶ ಮಾನ, ಮಾರ್ಯದೆಯನ್ನು ಕಳೆಯುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆ, ಹೇಸಿಗೆ ಇದ್ದರೆ ಈ ರೀತಿ ಮಾಡುತ್ತಿರಲಿಲ್ಲ. ಈ ದೇಶದ ಕಾನೂನನ್ನು ಗೌರವಿಸುವ ಅಧಿಕಾರಿಗಳು ಅವರ ಮೇಲೆ ಕೋವಿಡ್ ನಿಯಮ ಉಲ್ಲಂಘನೆಗಾಗಿ ಪ್ರಕರಣ ದಾಖಲಿಸಬೇಕು. ನ್ಯಾಯಾಲಯವಾದರೂ ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಳ್ಳಬೇಕು ಎಂದು ನಾಗೇಂದ್ರ ಆಗ್ರಹಿಸಿದರು. 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವರು ಹಾಗೂ ವಿರೋಧ ಪಕ್ಷದ ಮುಖಂಡರು ಕೂಡ ಉಪಚುನಾವಣೆ ಸಂದರ್ಭದಲ್ಲಿ ಕೊರೋನ ನಿಬಂಧನೆಗಳನ್ನು ಗಾಳಿಗೆ ತೂರಿದ್ದಾರೆ. ಇವರಗಳ ಮೇಲೂ ಯಾವುದೇ ಕ್ರಮ ಜರುಗಿಸದೇ ಇರುವುದು ನಮ್ಮ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಕಾರ್ಯಾಂಗದ ನಿಶ್ಯಕ್ತತನವನ್ನು ತೋರಿಸುತ್ತದೆ ಎಂದು ಖಂಡಿಸಿದ್ದಾರೆ. 

2ನೇ ಅಲೆಯ ಮನ್ಸೂಚನೆಯನ್ನು ಗ್ರಹಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾದ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದ್ದರಿಂದಲೇ ಕೊರೋನ ಅತಿ ವೇಗವಾಗಿ ಹರಡುತ್ತಿದೆ. ಈಗ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಸಿಗುತ್ತಿಲ್ಲ. ಆಕ್ಸಿಜನ್ ಕೊರತೆ ಎದುರಾಗಿದೆ. ಈಗಲಾದರೂ ಸರ್ಕಾರ ಮಾನವೀಯತೆಯಿಂದ ವರ್ತಿಸಿ ಜನರ ರಕ್ಷಣೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು. 

ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ನೀಗಿಸಬೇಕು. ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ಮೀಸಲಿಡಬೇಕು. ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತ್ಸೆ ನೀಡಬೇಕು, ಕೊರೋನ ಲಸಿಕೆಯ ಕೊರತೆಯನ್ನು ತಕ್ಷಣವೇ ನಿಗಿಸಿ ಪ್ರತಿಯೊಬ್ಬರಿಗೂ ಕೊರೋನ ಲಸಿಕೆ ಹಾಕಿಸಬೇಕು. ಕೊರೋನ ಸಂಕಷ್ಟದಲ್ಲಿ ಅತ್ಯಂತ ಕಷ್ಟಕ್ಕೆ ಒಳಗಾಗಿರುವ ರೈತ ಸಮುದಾಯಕ್ಕೆ ಕೃಷಿ ಸಾಲಗಳನ್ನು ವಿಸ್ತರಿಸಬೇಕು. ಕೃಷಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿಗಾಗಿ ಯೋಜನೆಯನ್ನು 200 ದಿನಕ್ಕೆ ವಿಸ್ತರಿಸಬೇಕು. ಪಡಿತರ ವ್ಯವಸ್ಥೆಯನ್ನು ಹೆಚ್ಚು ಮಾಡಬೇಕು ಎಂದು ಕೋರಿದರು.  

ಎ.23ರಂದು ಎಲ್ಲ ಸಂಸದರ ಕಚೇರಿ ಮುಂದೆ ಪಿಕೆಟಿಂಗ್: ನರೇಂದ್ರ ಮೋದಿ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳುತ್ತಲೇ ಕೃಷಿ ಉತ್ಪನ್ನಗಳ ವೆಚ್ಚನ್ನು ಪ್ರತಿ ವರ್ಷ ದ್ವಿಗುಣಗೊಳಿಸುತ್ತಿದ್ದಾರೆ. ಗೊಬ್ಬರದ ಬೆಲೆಯನ್ನು ಏರಿಸಿ ಕೃಷಿಕರು ಕೃಷಿಯಿಂದಲೇ ವಿಮುಖವಾಗುವಂತೆ ಹುನ್ನಾರ ನಡೆಸಿದ್ದಾರೆ. ಇಂತಹ ಹುನ್ನಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಎ.23ರಂದು ರಾಜ್ಯದ ಎಲ್ಲ ಸಂಸದರ ಕಚೇರಿಗಳ ಮುಂದೆ ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಪಿಕೆಟಿಂಗ್ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. 

ಎಸ್ಕಾಂಗಳ ಮುಂದೆಯೂ ಪ್ರತಿಭಟನೆ: ಕೃಷಿ ಪಂಪ್‍ಸೆಟ್‍ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದಿರುವುದನ್ನು ಖಂಡಿಸಿ ಟ್ರಾನ್ಸ್ ಫಾರ್ಮ್ ದುರಸ್ತಿ ಮತ್ತು ಅಳವಡಿಕೆ ವಿಳಂಬವನ್ನು ಪ್ರತಿಭಟಿಸಿ ಎಸ್ಕಾಂಗಳ ಭ್ರಷ್ಟಾಚಾರವನ್ನು ವಿರೋಧಿ ಪ್ರತಿ ಜಿಲ್ಲೆಯಲ್ಲೂ ಎಸ್ಕಾಂ ಕಚೇರಿಗಳ ಮುಂದೆ ಶೀಘ್ರದಲ್ಲೇ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. 

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಪಿ.ಮರಂಕಯ್ಯ, ರೈತ ಮುಖಂಡ ಎನ್.ಪ್ರಸನ್ನ ಗೌಡ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜು, ದಲಿತ ಸಂಘರ್ಷ ಸಮಿತಿಯ ಕಲ್ಲಹಳ್ಳಿ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News