ಅನುದಾನರಹಿತ ಖಾಸಗಿ ಶಾಲಾ-ಕಾಲೇಜು ಶಿಕ್ಷಕರನ್ನು ಶಿಕ್ಷಕರ ಕಲ್ಯಾಣ ನಿಧಿಯ ಅಜೀವ ಸದಸ್ಯರನ್ನಾಗಿ ನೇಮಕ

Update: 2021-04-20 13:01 GMT

ಬೆಂಗಳೂರು, ಎ.20: ಖಾಸಗಿ ಅನುದಾನರಹಿತ ಶಾಲಾ ಕಾಲೇಜುಗಳ ಶಿಕ್ಷಕರನ್ನು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಅಜೀವ ಸದಸ್ಯರನ್ನಾಗಿ ನೇಮಕ ಮಾಡಿಕೊಂಡು ಅನುದಾನರಹಿತ ಶಿಕ್ಷಕರತ್ತ ಸರಕಾರ ಎಂಬ ಧ್ಯೇಯದೊಂದಿಗೆ ನಿಧಿಯ ಸೌಲಭ್ಯಗಳನ್ನು ವಿಸ್ತರಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೋನದಂತಹ ಸಂಕಷ್ಟ ಕಾಲದಲ್ಲಿ ಖಾಸಗಿ ಶಿಕ್ಷಕರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಹೀಗಾಗಿ ಅನುದಾನರಹಿತ ಶಿಕ್ಷಕರಿಗೆ ಕಷ್ಟ ಕಾಲದಲ್ಲಿ ತತ್‍ಕ್ಷಣದ ನೆರವಿಗೆ ಶಿಕ್ಷಣ ನಿಧಿಯ ಸದಸ್ಯತ್ವ ನೀಡಿ ಆ ಮೂಲಕ ನಿಧಿಯಿಂದ ಸರಕಾರಿ ಹಾಗೂ ಅನುದಾನಿತ ಶಿಕ್ಷಕರಿಗೆ ದೊರೆಯುವಂತಹ ಸೌಲಭ್ಯ ನೀಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

1995-2000ರ ಅವಧಿಯಲ್ಲಿ ಪ್ರಾರಂಭವಾದ ಕನ್ನಡ ಮಾಧ್ಯಮ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಅನುದಾನಕ್ಕೊಳಪಡಿಸಬೇಕಾದ ಅವಶ್ಯಕತೆ ಇದೆ. ಇದಕ್ಕೆ ವಾರ್ಷಿಕ ಸುಮಾರು 200-250 ಕೋಟಿ ರೂ. ಒದಗಿಸಬೇಕೆಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದೇನೆ. ಬಜೆಟ್ ಪೂರ್ವ ಚರ್ಚೆಯಲ್ಲಿಯೂ ಈ ಕುರಿತು ಪ್ರಸ್ತಾವನೆ ಮಂಡಿಸಲಾಗಿತ್ತು. ಆದರೆ ಪ್ರತಿಕೂಲ ಆರ್ಥಿಕ ಪರಿಸ್ಥಿತಿ ನಮ್ಮನ್ನು ಕಟ್ಟಿ ಹಾಕಿದೆ. ಮುಂದಿನ ದಿನಗಳಲ್ಲಿ ಇದನ್ನು ಆದ್ಯತೆ ಮೇರೆಗೆ ಮಾಡಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿಕ್ಷಕ ಕಲ್ಯಾಣ ನಿಧಿಯಿಂದ ನೀಡಲಾಗುವ ಸೌಲಭ್ಯಗಳು

- ಶಿಕ್ಷಕರಿಗೆ ಅಪಘಾತ ಮತ್ತು ಮರಣ ಪರಿಹಾರ ಸೌಲಭ್ಯ ನೀಡಲಾಗುತ್ತದೆ.

- ಶಿಕ್ಷಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಧನಸಹಾಯ (ನಿವೃತ್ತ ಶಿಕ್ಷಕರೂ ಸೇರಿ),

- ಶಿಕ್ಷಕರು ಮತ್ತು ಅವರ ಅವಲಂಬಿತರಿಗೆ ವೈದ್ಯಕೀಯ ಧನ ಸಹಾಯ,

- ಶಿಕ್ಷಕರ ಮಕ್ಕಳಿಗೆ ಪ್ರತಿಭಾ ವಿದ್ಯಾರ್ಥಿ ವೇತನ.

- ಶಿಕ್ಷಕರಿಗೆ ತಾಲೂಕು, ಜಿಲ್ಲಾ, ರಾಜ್ಯ ಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆಗೆ ಅವಕಾಶ

- ಶಿಕ್ಷಕರಿಗೆ ರಾಜ್ಯ, ಜಿಲ್ಲಾ ಮಟ್ಟದ ಪ್ರಶಸ್ತಿಗಳು,

- ಲ್ಯಾಟ್‍ಪಾಟ್, ಟ್ಯಾಬ್ ಖರೀದಿಗಾಗಿ ಶಿಕ್ಷಕರಿಗೆ ಬಡ್ಡಿರಹಿತ ಧನ ಸಹಾಯ,

- ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಶಿಕ್ಷಕರ ಮಕ್ಕಳ ಬ್ಯಾಂಕ್‍ನ ಶೈಕ್ಷಣಿಕ ಸಾಲದ ಮರುಪಾವತಿ, ಸೇರಿದಂತೆ ಹಲವು ಸೌಲಭ್ಯಗಳು ದೊರೆಯಲಿವೆ.

ಖಾಸಗಿ ಶಾಲೆಗಳು ವರ್ಷದಿಂದ ಅನುಭವಿಸುತ್ತಿರುವ ಶಾಲಾ ಸುರಕ್ಷಿತ ನಿಯಮಗಳನ್ನು ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿಯೇ ಮತ್ತಷ್ಟು ಸರಳೀಕರಣಗೊಳಿಸುತ್ತಿದ್ದೇವೆ. ವಿಧಾನಪರಿಷತ್ ಸದಸ್ಯ ಎಸ್.ವಿ.ಸಂಕನೂರ ನೇತೃತ್ವದ ಸಮಿತಿ ಸಂಬಂಧಿಸಿದ ಎಲ್ಲ ಪಾಲುದಾರರೊಂದಿಗೆ ಚರ್ಚಿಸಿ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ವರದಿ ಸಿದ್ಧಪಡಿಸುತ್ತಿದೆ.

-ಸುರೇಶ್‍ ಕುಮಾರ್, ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News