ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ನಡೆಸಿ, ಸೋಂಕಿತರಿಗೆ ಕೂಡಲೇ ಚಿಕಿತ್ಸೆ ನೀಡಿ: ಸಚಿವ ಬೊಮ್ಮಾಯಿ

Update: 2021-04-21 15:53 GMT

ಉಡುಪಿ, ಎ.21: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ತ್ವರಿತವಾಗಿ ಸೋಂಕಿತರನ್ನು ಪತ್ತೆ ಹಚ್ಚಿ, ಕೂಡಲೇ ಅವರಿಗೆ ಚಿಕಿತ್ಸೆ ಆರಂಬಿಸುವುದರ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಹರಡುವುದನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಿಲರ್ಕ್ಷಿಸಿದರೆ ಸೋಂಕು ವ್ಯಾಪಕವಾಗಿ ಹರಡಲಿದೆ ಎಂದು ರಾಜ್ಯದ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಬುಧವಾರ ಬೆಂಗಳೂರಿನ ವಿಕಾಸಸೌಧದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ತೆಗೆದು ಕೊಂಡಿರುವ ಕ್ರಮಗಳ ಕುರಿತ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಪ್ರಸ್ತುತ ಜಿಲ್ಲೆಯಲ್ಲಿ ಪ್ರತೀ ದಿನ 3000 ಪರೀಕ್ಷೆಗಳನ್ನು ನಡೆಸುತ್ತಿದ್ದು ಈ ಪ್ರಮಾಣವನ್ನು 4000ಕ್ಕೆ ಹೆಚ್ಚಿಸಿ, ಪರೀಕ್ಷೆ ವರದಿಯ ವಿವರಗಳನ್ನು ಶೀಘ್ರದಲ್ಲಿ ಪಡೆದು, ಸ್ವಾಬ್ ಸಂಗ್ರಹದ ಪರೀಕ್ಷೆಯನ್ನು ಅವಶ್ಯವಿದ್ದಲ್ಲಿ ಜಿಲ್ಲೆಯ ಖಾಸಗಿ ಲ್ಯಾಬ್‌ಗಳ ಮೂಲಕ ಸಹ ನಡೆಸಿ, ಸೋಂಕಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಿ ಅವರ ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಪ್ರತೀ ಸೋಂಕಿತರ ಪ್ರಾಥಮಿಕ ಸಂಪರ್ಕದ 30 ಮಂದಿಯ ಕೋವಿಡ್ ಪರೀಕ್ಷೆ ನಡೆಸಿ. ಎಲ್ಲಾ ನಗರ ವ್ಯಾಪ್ತಿಯಲ್ಲಿ ಟೆಸ್ಟಿಂಗ್‌ಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಿ. ಆಸ್ಪತ್ರೆಗಳಲ್ಲಿ ದಾಖಲಾದ ಸೋಂಕಿತರ ಚಿಕಿತ್ಸೆಗೆ ಹೆಚ್ಚಿನ ಕಾಳಜಿ ವಹಿಸಿ, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆಯದಂತೆ ಎಚ್ಚರ ವಹಿಸಿ ಎಂದು ಸಚಿವ ಬೊಮ್ಮಾಯಿ ಸೂಚನೆ ನೀಡಿದರು.

ಕೋವಿಡ್ ದೃಡಪಟ್ಟು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ಸುಧಾರಣೆಯನ್ನು ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಆಗಿಂದಾಗ್ಗೆ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಅವರು ಮನೆ ಬಿಟ್ಟು ಹೊರಗೆ ತಿರುಗಾಡದಂತೆ ನಿಗಾ ವಹಿಸಬೇಕು ಎಂದರು.

ಕರೋನ ನಿಯಂತ್ರಣಕ್ಕಾಗಿ ಜಾರಿಗೆ ತರಲಾಗಿರುವ ರಾತ್ರಿ ಹಾಗೂ ವೀಕೆಂಡ್ ಕೊರೋನ ಕರ್ಪ್ಯೂವನ್ನು ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವದರೊಂದಿಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಸಾರ್ವಜನಿಕರು ಹೆಚ್ಚು ಹೆಚ್ಚು ಒಂದೆಡೆ ಸೇರದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಗೆ ಸೂಚನೆ ನೀಡಿದರು.

ಕರೋನ ಪೀಡಿತರು ತೀವ್ರ ನಿಗಾ ಟಕದಲ್ಲಿ ಚಿಕಿತ್ಸೆ ಪಡೆಯುವುದು ಅವಶ್ಯವೆಂದು ಕಂಡುಬಂದಲ್ಲಿ ತಕ್ಷಣದಲ್ಲಿಯೇ ಖಾಸಗಿ ಆಸ್ಪತ್ರೆಗಳಲ್ಲಿ ಎಬಿಆರ್‌ಕೆ ಅಡಿಯಲ್ಲಿ ಚಿಕಿತ್ಸೆ ಪಡೆಯಲು ಶಿಪಾರಸ್ಸು ಮಾಡಬೇಕೆಂದ ಅವರು ಸಾಮಾನ್ಯ ರೋಗಿಗಳಾಗಿದ್ದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸುರಕ್ಷಿತ ಅಂತರ ಉಲ್ಲಂಘನೆಯಾಗುವ ಕಾರ್ಯಕ್ರಮಗಳಿಗೆ ಅನುಮತಿ ನೀಡಬೇಡಿ. ಧಾರ್ಮಿಕ ಕಾರ್ಯಗಳನ್ನು ದೇವಾಲಯದೊಳಗೆ ನಿಗದಿತ ಸಂಖ್ಯೆಗೆ ಸೀಮಿತಗೊಳಿಸಿ ಆಚರಣೆ ನಡೆಸಿ. ಮೆರವಣಿಗೆಗೆ ಅವಕಾಶ ನೀಡಬೇಡಿ. ಕುಂಭಮೇಳದಂತಹ ಮಹಾ ಆಚರಣೆಯನ್ನೆ ಪ್ರಧಾನಮಂತ್ರಿಗಳು ಮೊಟಕುಗೊಳಿಸಿದ್ದಾರೆ . ಅಲ್ಲದೇ ಸುಪ್ರಸಿದ್ಧ ಬೆಂಗಳೂರು ಕರಗವನ್ನೂ ಸಹ ನಿಲ್ಲಿಸಲಾಗಿದೆ. ಕೋವಿಡ್ ನಿಯಮಾವಳಿ ಉಲ್ಲಂಘನೆ ಆಗದಂತೆ ಧಾರ್ಮಿಕ ಕಾರ್ಯಕ್ರಮ ನಡೆಸಿ ಎಂದು ಸಚಿವರು ಸೂಚನೆಗಳನ್ನು ನೀಡಿದರು.

ಪ್ರಸ್ತುತ ಮುಂಬೈ ಲಾಕ್‌ಡೌನ್ ಆಗಿರುವ ಕಾರಣ ಅಲ್ಲಿಂದ ಹೆಚ್ಚಿನ ಸಂಖ್ಯೆಯಲ್ಲಿ ಹಾಗೂ ಕೇರಳದಿಂದ ಸಹ ನಾಗರಿಕರು ಜಿಲ್ಲೆಗೆ ಆಗಮಿಸುತ್ತಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕು ಉಲ್ಬಣಗೊಳ್ಳುವ ಸಾಧ್ಯತೆಗಳಿವೆ. ಹೊರಗಿನಿಂದ ಬಂದವರ ಸ್ವಾಬ್ ಸಂಗ್ರಹಿಸಿ ಪರೀಕ್ಷೆ ನಡೆಸಿ. ಜಿಲ್ಲೆಗೆ ಅಗತ್ಯಕ್ಕನುಗುಣವಾಗಿ ರೆಮಿಡಿಸಿವರ್ ಮತ್ತು ಕೋವಿಡ್ ಲಸಿಕೆಯನ್ನು ಸರಬರಾಜು ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಆಕ್ಷಿಜನ್ ಕೊರತೆಯಾಗದಂತೆ ಎಚ್ಚರವಹಿಸಿ. ಮೀನುಗಾರಿಕೆಗೆ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳಿ ಎಂದು ಸಚಿವರು ಹೇಳಿದರು.

ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಅಗತ್ಯವಿದ್ದಲ್ಲಿ ವೈದ್ಯಕೀಯ ಸಿಬ್ಬಂದಿ ವರ್ಗ ಒಳಗೊಂಡಂತೆ ಇತರೆ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವನ್ನು ಬಳಕೆ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಎರಡನೇ ಅಲೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಮೀಸಲಿಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಬಾಗಾಧಿಕಾರಿ ರಾಜು, ಡಿಹೆಚ್‌ಓ ಡಾ.ಸುದೀರ್ ಚಂದ್ರ ಸೂಡಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News