ಜಲಶಕ್ತಿ ಯೋಜನೆ ಮೂಲಕ ಅಂರ್ತಜಲ ವೃದ್ಧಿಸಿ: ದಿನಕರ ಬಾಬು

Update: 2021-04-22 14:30 GMT

ಉಡುಪಿ, ಎ.22: ಜಲಶಕ್ತಿ ಯೋಜನೆಯ ಮೂಲಕ ಮಳೆ ನೀರನ್ನು ಸಂಗ್ರಹಿಸಿ ಜಿಲ್ಲೆಯಲ್ಲಿ ಅಂರ್ತಜಲ ಮಟ್ಟವನ್ನು ವೃಧ್ದಿಸಲು ಎಲ್ಲಾ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಬೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಎಲ್ಲಾ ಗ್ರಾಮಗಳಲ್ಲಿರುವ ಕೆರೆಗಳ ಹೊಳೆತ್ತುವಿಕೆ, ಬಾವಿಗಳ ನಿರ್ಮಾಣ, ಕೊಳವೆ ಬಾವಿಗಳಿಗೆ ಜಲ ಮರುಪೂರಣ, ತೋಡುಗಳ ನಿರ್ಮಾಣ ಮಾಡುವ ಮೂಲಕ ಮಳೆ ನೀರನ್ನು ಸಂಗ್ರಹಿಸಿ ಅಂರ್ತಜಲವನ್ನು ವೃದ್ದಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ. ಮಹಾತ್ಮ ಗಾಂಧೀ ಉದ್ಯೋಗ ಖಾತರಿ ಯೋಜನೆಯಡಿ ಈ ಕಾರ್ಯಕ್ರಮಗಳನ್ನು ಕೈಗೊಳ್ಳಲು ಅವಕಾಶವಿದ್ದು, ಇದರಿಂದ ಮಾನವ ದಿನಗಳ ಸೃಷ್ಠಿ ಸಹ ಸಾಧ್ಯವಾಗಲಿದೆ ಎಂದು ಎಲ್ಲಾ ಅಧಿಕಾರಿಗಳಿಗೆ ದಿನಕರ ಬಾಬು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಈ ಯೋಜನೆಯಡಿ ಇದುವರೆಗೆ 65 ಕೆರೆಗಳ ಹೊಳು ತೆಗೆಯಲಾಗಿದೆ ಎಂದರು.

ಕೋವಿಡ್ ಲಸಿಕೆ ಪಡೆಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿ, ಸೋಂಕು ತಗುಲಿದರೆ ಅದರ ತೀವ್ರತೆ ಕಡಿಮೆಯಿರಲಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ. ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಿ. ಲಸಿಕೆ ಕೊರತೆಯಾಗದಂತೆ ಎಚ್ಚರವಹಿಸಿ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾರ್ವಜನಿಕರಿಗೆ ಜಗೃತಿ ಮೂಡಿಸಿ ಎಂದು ಅರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆಗಳನ್ನು ನೀಡಿದರು.

ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿಗೆ ಭಿತ್ತನೆ ಬೀಜ ಮತ್ತು ರಸಗೊಬ್ಬರದ ಸೂಕ್ತ ದಾಸ್ತಾನು ಹೊಂದಿರುವಂತೆ ಸೂಚಿ ಸಿದ ದಿನಕರ ಬಾಬು, ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುತ್ತಿರುವ ಬಗ್ಗೆ ಮಾಹಿತಿ ಪಡೆದರು. ಕಾರ್ಕಳ ತಾಲೂಕು ಸೂಡಾ ಗ್ರಾಮದ ಪಿಲಾರ್ ಖಾನ್ ರಸ್ತೆ ಅಭಿವೃದ್ಧಿ ಕಾಮಗಾರಿ ಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ದಿನಕರ ಬಾಬು ಸೂಚಿಸಿದರು.

ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶೋಭಾ ಜಿ ಪುತ್ರನ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News