ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಹಾಸಿಗೆ ಒದಗಿಸುವುದು ಖಾತರಿಪಡಿಸಿ: ಸಿಎಂ ಯಡಿಯೂರಪ್ಪ

Update: 2021-04-22 15:13 GMT

ಬೆಂಗಳೂರು, ಎ.22: ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಹಾಸಿಗೆಗಳನ್ನು ಒದಗಿಸುವುದನ್ನು ಖಾತರಿ ಪಡಿಸಬೇಕು. ಆಯಾ ವಲಯಗಳ ಡಿಸಿಪಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಗುರುವಾರ ತಮ್ಮ ಸರಕಾರಿ ನಿವಾಸ ಕಾವೇರಿಯಲ್ಲಿ ಬೆಂಗಳೂರು ಕೋವಿಡ್ ನಿರ್ವಹಣೆ ಕುರಿತು ಹಿರಿಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ವರ್ಚುಯಲ್ ಸಭೆ ನಡೆಸಿದರು.

ನೋಡಲ್ ಅಧಿಕಾರಿಗಳು ಆಯಾ ವಲಯದ ಕೋವಿಡ್ ನಿರ್ವಹಣೆಗೆ ಸಂಪೂರ್ಣ ಜವಾಬ್ದಾರರು. ಅವರು ಎಲ್ಲ ಸಮಸ್ಯೆಗಳ ಕುರಿತು ಸ್ಪಂದಿಸಬೇಕು. ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಗೆ ಸ್ಥೈರ್ಯ ತುಂಬುವಂತೆ ಸಚಿವರು ಹಾಗೂ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಚಿತಾಗಾರಗಳಿಗೆ ಶವ ಸಾಗಿಸುವ ಆಂಬ್ಯುಲೆನ್ಸ್‍ಗಳು ತಾಸುಗಟ್ಟಲೆ ಸರದಿಯಲ್ಲಿ ನಿಲ್ಲುವುದರಿಂದ ಶವಗಳನ್ನು ಸಾಗಿಸಲು ಆಂಬ್ಯುಲೆನ್ಸ್ ಗಳ ಕೊರತೆ ಆಗಿರುವ ಹಿನ್ನೆಲೆಯಲ್ಲಿ ಶವಗಳನ್ನು ಇರಿಸಲು ಚಿತಾಗಾರಗಳಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸೂಚಿಸಿದರು.

ನಗರದಲ್ಲಿ ಫೀವರ್ ಕ್ಲಿನಿಕ್‍ಗಳನ್ನು ಬಲಪಡಿಸಿ, ಜ್ವರ, ಮತ್ತಿತರ ಲಕ್ಷಣ ಹೊಂದಿರುವವರ ಪರೀಕ್ಷೆ ಹಾಗೂ ಸೂಕ್ತ ಮಾರ್ಗದರ್ಶನ ನೀಡಬೇಕು. ಇದರಿಂದ ಅಗತ್ಯವಿರುವವರಿಗೆ ಮಾತ್ರ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.

ಸಹಾಯವಾಣಿಗಳನ್ನು ಇನ್ನಷ್ಟು ಬಲಪಡಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಸೂಚಿಸಿದ ಮುಖ್ಯಮಂತ್ರಿ, ಹೋಮ್ ಐಸೋಲೇಷನ್‍ನಲ್ಲಿ ಇರುವವರ ಚಿಕಿತ್ಸೆ, ಟೆಲಿ ಕನ್ಸಲ್ಟೇಷನ್ ಒದಗಿಸಲು ಹಾಗೂ ಅವರ ಮೇಲೆ ನಿಗಾ ವಹಿಸಲು ಆದ್ಯತೆ ನೀಡುವಂತೆ ಅವರು ತಿಳಿಸಿದರು.

ಕೋವಿಡ್ ನಿರ್ವಹಣೆಯಲ್ಲಿ ಸಾಧ್ಯವಿರುವಲ್ಲಿ ಸ್ವಯಂ ಸೇವಕರ ನೆರವು ಪಡೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್.ಅಶೋಕ್, ಎಸ್.ಸುರೇಶ್ ಕುಮಾರ್, ವಿ.ಸೋಮಣ್ಣ, ಎಂ.ಟಿ.ಬಿ.ನಾಗರಾಜ್, ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಗರದಲ್ಲಿ ಈಗಾಗಲೇ ಆಕ್ಸಿಜನ್ ಪೂರೈಕೆ ಮತ್ತು ಔಷಧ ಕೊರತೆಯ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಜೊತೆಗೆ ಲಸಿಕೆಗಳ ಕೊರತೆಯೂ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಭೆಗೆ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News