×
Ad

ಕರ್ಫ್ಯೂ ವೇಳೆ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ: ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ

Update: 2021-04-23 20:35 IST

ಬೆಂಗಳೂರು, ಎ.23: ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ, ಜನತಾ ಕರ್ಫ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆಯನ್ನಾಗಲಿ ತೊಂದರೆಯನ್ನಾಗಲಿ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೂವು, ಹಣ್ಣು ದವಸ ಧಾನ್ಯ ಮಾರುಕಟ್ಟೆಗೆ ಸಾಗಿಸಲು ಆರ್.ಟಿ.ಓ ಸೇರಿದಂತೆ ಯಾರೂ ತೊಂದರೆ ಮಾಡಬಾರದು. ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲಿ ಯಾವುದೆ ಇಲಾಖೆಯಾಗಲಿ ತೊಂದರೆ ಮಾಡಬಾರದು ಎಂದು ಸೂಚಿಸಿದರು.

ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು, ರಸಗೊಬ್ಬರ ಅಂಗಡಿಗಳಿಗಾಗಲಿ, ರೈತ ಸಂಪರ್ಕ ಕೇಂದ್ರಗಳಿಗಾಗಲಿ, ಬಿತ್ತನೆ ಕಾರ್ಯಕ್ಕಾಗಲಿ ಯಾರೂ ತೊಂದರೆಯನ್ನುಂಟು ಮಾಡಬಾರದು. ಕೆಲವು ಕಡೆ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಿಳಿದು ಬಂದಿದೆ. ಹೀಗೆ ಮಾಡಿರುವುದು ತಪ್ಪು ಎಂದು ಬಿ.ಸಿ.ಪಾಟೀಲ್ ಹೇಳಿದರು.

ಎಲ್ಲ ಇಲಾಖೆಗಳು ಎಲ್ಲ ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕಾರ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರಬಾರದು. ಕೊರೋನ ಸುರಕ್ಷತೆ, ಸುರಕ್ಷಿತ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕೆಂದು ಬಿ.ಸಿ.ಪಾಟೀಲ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News