ಬಾಲಕಿಯ ಮಾನಭಂಗಕ್ಕೆ ಯತ್ನ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ
ಉಡುಪಿ, ಎ. 23: ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಳು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮಾನಭಂಗಕ್ಕೆ ಯತ್ನ ಪ್ರಕರಣ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ.
ಅಜಿತ್ ಶೆಟ್ಟಿ(34) ಶಿಕ್ಷೆಗೆ ಗುರಿಯಾಗಿರುವ ಆರೋಪಿ. ಈತ 2015ರಲ್ಲಿ ತನ್ನ ನೆರೆಮನೆಯ ಪರಿಶಿಷ್ಟ ಜಾತಿಯ 15 ವರ್ಷ ಪ್ರಾಯದ ಬಾಲಕಿಯನ್ನು ಸಾರ್ವಜನಿಕ ಬಾವಿ ಬಳಿ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿದ್ದನು. ಈ ಬಗ್ಗೆ ಅಜಿತ್ ಶೆಟ್ಟಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಂ.ಮಂಜುನಾಥ್ ಶೆಟ್ಟಿ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
13 ಸಾಕ್ಷಿದಾರರ ಪೈಕಿ ನ್ಯಾಯಾಲಯದಲ್ಲಿ 12 ಮಂದಿ ವಿಚಾರಣೆ ನಡೆದಿದ್ದು ಸಂತ್ರಸ್ತೆ ಹಾಗೂ ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆಯನ್ನು ಆಲಿಸಿದ ನ್ಯಾಯಾಧೀಶೆ ಎರ್ಮಾಳು ಕಲ್ಪನಾ, ಆರೋಪಿಗೆ ಪೋಕ್ಸೋ ಕಾಯ್ದೆಯಡಿ 3 ವರ್ಷ ಜೈಲುಶಿಕ್ಷೆ ಮತ್ತು 10 ಸಾವಿರ ರೂ. ದಂಡ, ಜೀವ ಬೆದರಿಕೆ ಹಾಕಿದ್ದಕ್ಕೆ 1 ವರ್ಷ ಜೈಲು, 1,500ರೂ. ದಂಡ ವಿಧಿಸಿ ಆದೇಶ ನೀಡಿದರು.
ದಂಡದಲ್ಲಿ 5 ಸಾವಿರ ರೂ. ಸರಕಾರಕ್ಕೆ ಹಾಗೂ 6,500ರೂ. ಹಣ ಸಂತ್ರಸ್ತೆಗೆ ನೀಡಲು ಮತು ಕಾನೂನು ಸೇವಾ ಪ್ರಾಧಿಕಾರದ ಮೂಲಕ ಸಂತ್ರಸ್ತೆಗೆ 25 ಸಾವಿರ ರೂ. ನೀಡಲು ನ್ಯಾಯಾಲಯ ಆದೇಶಿಸಿತು. ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.