ಎಲ್ಲಾ ಚುನಾವಣೆಗಳನ್ನು ಮುಂದೂಡಿ, ವಿಜಯೋತ್ಸವ ಮೊಟಕುಗೊಳಿಸಿ: ಪ್ರಧಾನಿ ಮೋದಿಗೆ ದೇವೇಗೌಡ ಪತ್ರ

Update: 2021-04-26 13:05 GMT

ಬೆಂಗಳೂರು, ಎ.26: ಕೊರೋನ ಸೋಂಕು ನಿಯಂತ್ರಣಕ್ಕಾಗಿ ಎಲ್ಲ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಆರು ತಿಂಗಳ ಕಾಲ ಮುಂದೂಡಿ, ಚುನಾವಣಾ ವಿಜಯೋತ್ಸವನ್ನು ಮೊಟಕುಗೊಳಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಎಚ್.ಡಿ.ದೇವೇಗೌಡ, ಮುಂದಿನ ಆರು ತಿಂಗಳ ಕಾಲ ಹೆಚ್ಚು ಜನಸಂಖ್ಯೆ ಸೇರುವ ಕಾರ್ಯಕ್ರಮವನ್ನು ರದ್ದುಪಡಿಸುವುದು ಸೇರಿ ಕೊರೋನ ನಿಯಂತ್ರಣಕ್ಕೆ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.

ಈ ತಿಂಗಳಿನಲ್ಲಿ ಚುನಾವಣೆ ನಡೆದ ರಾಜ್ಯಗಳಲ್ಲಿ ಚುನಾವಣಾ ವಿಜಯೋತ್ಸವವನ್ನು ಮೊಟಕುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಿ, ಎಲ್ಲ ಉಪ ಚುನಾವಣೆಗಳು ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಆರು ತಿಂಗಳುಗಳ ಕಾಲ ಮುಂದೂಡಬೇಕೆಂದು ಅವರು ಹೇಳಿದ್ದಾರೆ.

ಈ ಅವಧಿಯಲ್ಲಿ, ಚುನಾವಣಾ ಆಯೋಗವು ಸುರಕ್ಷಿತವಾಗಿ ಚುನಾವಣೆಗಳನ್ನು ನಡೆಸಲು ಹೊಸ ನಿಯಮಗಳನ್ನು ರೂಪಿಸಬಹುದು ಮತ್ತು ಏಕಕಾಲದಲ್ಲಿ, ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕಾಗಿದೆ ಎಂದು ದೇವೇಗೌಡ ತಿಳಿಸಿದ್ದಾರೆ.

ಸಾಂಕ್ರಾಮಿಕ ನಿಯಂತ್ರಣ ಹಾಗೂ ಲಸಿಕೆ ಕಾರ್ಯಕ್ರಮಗಳನ್ನು ಹೆಚ್ಚಿಸಿ, ಜನರ ಪ್ರಾಣವನ್ನು ಉಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಳ್ಳುವ ಎಲ್ಲ ರಚನಾತ್ಮಕ ನಿರ್ಧಾರಗಳನ್ನು ಬೆಂಬಲಿಸುವುದಾಗಿ ಹೇಳಿದ ದೇವೇಗೌಡ, ಈ ಸಂದರ್ಭದಲ್ಲಿ ಕ್ಷಿಪ್ರ ಗತಿಯಲ್ಲಿ ಕಾರ್ಯಪ್ರವೃತ್ತರಾಗಬೇಕಾಗಿದೆ. ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಯನ್ನು ಜಿಲ್ಲಾ ಆಸ್ಪತ್ರೆಗಳಿಗೆ ನೀಡಬೇಕಾಗಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವಾರ್ ರೂಮ್ ಆಗಬೇಕಾಗಿದೆ ಎಂದರು.

ಪ್ರಸ್ತುತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳತ್ತ ಮಾತ್ರ ಗಮನ ಹರಿಸಲಾಗುತ್ತಿದೆ. ಆದರೆ, ಜನಸಂಖ್ಯೆ ಕಡಿಮೆ ಇರುವ ಜಿಲ್ಲೆಗಳು ಮತ್ತು ತಾಲೂಕು ಕೇಂದ್ರಗಳಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ. ಹಳ್ಳಿ ಕ್ಲಸ್ಟರ್ ಗಳತ್ತ ತುರ್ತಾಗಿ ಗಮನಹರಿಸಬೇಕಾದ ಅಗತ್ಯವಿದೆ. ಈ ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲ ಸರಕಾರಿ ಇಲಾಖೆಗಳ ಪಾತ್ರ ಮಹತ್ವದ್ದಾಗಿದೆ. ಲಸಿಕೆ ಬಗ್ಗೆ ಇನ್ನೂ ಸ್ಪಷ್ಟ ಸಂದೇಶ ಇಲ್ಲದಂತಾಗಿದೆ. ಲಸಿಕೆಯಿಂದ ನಾವು ಮಾತ್ರವಲ್ಲದೇ, ನಮ್ಮವರನ್ನು ಕೂಡಾ ಕಾಪಾಡಬೇಕಾಗಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News