×
Ad

ದ.ಕ. ಜಿಲ್ಲೆಯಲ್ಲಿ ವೈದ್ಯೆ ಸಹಿತ ಮೂವರು ಕೋವಿಡ್ ಗೆ ಬಲಿ, 486 ಮಂದಿಗೆ ಸೋಂಕು ದೃಢ

Update: 2021-04-27 22:02 IST
ಸಾಂದರ್ಭಿಕ ಚಿತ್ರ

ಮಂಗಳೂರು,ಎ.27: ದ.ಕ.ಜಿಲ್ಲೆಯಲ್ಲಿ ಮಂಗಳವಾರ ಕೊರೋನಕ್ಕೆ ವೈದ್ಯೆ ಸಹಿತ ಮೂವರು ಬಲಿಯಾಗಿದ್ದಾರೆ. ಇದರಲ್ಲಿ ಮಂಗಳೂರಿನ ಇಬ್ಬರು ಮತ್ತು ಸುಳ್ಯ ತಾಲೂಕಿನ ಒಬ್ಬರು ಸೇರಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 751ಕ್ಕೇರಿದೆ.

ಈ ಮಧ್ಯೆ ಮಂಗಳವಾರ 486 ಕೊರೋನ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಇದರೊಂದಿಗೆ 42,065 ಪಾಸಿಟಿವ್ ಪ್ರಕರಣಗಳು ಕಂಡು ಬಂದಂತಾಗಿದೆ. ಮಂಗಳವಾರ 225 ಮಂದಿ ಚಿಕಿತ್ಸೆ ಪಡೆದು ಮನೆಗೆ ಮರಳುವುದರೊಂದಿಗೆ ಈವರೆಗೆ 37,024 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ.

ಜಿಲ್ಲೆಯಲ್ಲಿ ಈವರೆಗೆ 7,24,128 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 6,82,763 ಮಂದಿಯ ವರದಿ ನೆಗೆಟಿವ್ ಬಂದಿ್ದು, 4,290 ಸಕ್ರಿಯ ಪ್ರಕರಣವಿದೆ.

ಜಿಲ್ಲೆಯಲ್ಲಿ ಮಂಗಳವಾರ 4 ಕಡೆಗಳಲ್ಲಿ ಕಂಟೈನ್‌ಮೆಂಟ್ ವಲಯ ಘೋಷಿಸಿಲಾಗಿದೆ. ಕೊಣಾಜೆ ಬಳಿ ಮನೆಯೊಂದರ 5 ಮಂದಿಗೆ, ನಿಡ್ಡೋಡಿ ಬಳಿ ಅಕ್ಕಪಕ್ಕದ 2 ಮನೆಯ 8 ಮಂದಿಗೆ, ಕಲ್ಲಮುಂಡ್ಕೂರು ಬಳಿ ಅಕ್ಕಪಕ್ಕದ ಮನೆಯ 16 ಮಂದಿಗೆ ಮತ್ತು ಮಂಚಿ ಬಳಿ ಮನೆಯೊಂದರ 5 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಆ ವಲಯವನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 37ಕ್ಕೇರಿದೆ.

ದಂಡ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದುದಕ್ಕೆ ಸಂಬಂಧಿಸಿ ಈವರೆಗೆ 49,281 ಪ್ರಕರಣ ದಾಖಲಿಸಿ 51,34,180 ರೂ. ದಂಡ ವಸೂಲಿ ಮಾಡಲಾಗಿದೆ.

ಮಂಗಳವಾರ ಜಿಲ್ಲೆಯಲ್ಲಿ 8,166 ಮಂದಿ ಕೋವಿಡ್ ಲಸಿಕೆ ಪಡೆದುಕೊಂಡರು. ಮಂಗಳವಾರ ಜಿಲ್ಲೆಗೆ 15 ಸಾವಿರ ಡೋಸ್ ಕೋವಿಶೀಲ್ಡ್ ಲಸಿಕೆ ಬಂದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸುಮಾರು 20 ಸಾವಿರ ಡೋಸ್ ಲಸಿಕೆ ಲಭ್ಯವಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದ ಮಲಪ್ಪುರಂ ನಿವಾಸಿ ಗರ್ಭಿಣಿ ವೈದ್ಯೆಯೊಬ್ಬರು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಲ್ಲಿ ಎಂಬಿಬಿಎಸ್ ವೈದ್ಯರಾಗಿ ಸೇವೆ ಸಲ್ಲಿಸಿ ಬಳಿಕ ವಿವಾಹವಾಗಿ ಮಲಪ್ಪುರಂನಲ್ಲಿ ವಾಸವಾಗಿದ್ದರು. ಅವರ ಮನೆಯಲ್ಲಿ ಎಲ್ಲರಿಗೂ ಜ್ವರ ಬಂದ ಕಾರಣ ಗರ್ಭಿಣಿಯಾಗಿದ್ದ ವೈದ್ಯೆಯು ಕೆಲವು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ರಾತ್ರಿಯಿಂದಲ್ಲೇ ಈ ವೈದ್ಯೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟರು. ಅವರಿಗೆ ಕೋವಿಡ್ ಸೋಂಕು ತಗಲಿತ್ತು ಎಂದು ಆರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News