ಕೋವಿಡ್ ದೃಢಪಟ್ಟ ಸುಮಾರು 3 ಸಾವಿರ ಮಂದಿಯ ಮೊಬೈಲ್ ಸ್ವಿಚ್ಡ್ ಆಫ್: ಸಚಿವ ಆರ್.ಅಶೋಕ್

Update: 2021-04-29 08:12 GMT

ಬೆಂಗಳೂರು, ಎ.28: ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಸೋಂಕಿತರನ್ನು ನೋಡಿಕೊಳ್ಳಲು ವೈದ್ಯರು, ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಯಾರು ಆತಂಕ ಪಡುವ ಅಗತ್ಯವಿಲ್ಲವೆಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಾಸರಹಳ್ಳಿ ವಲಯ ವ್ಯಾಪ್ತಿಯ ಬಾಗಲಗುಂಟೆ ವಾರ್ಡ್ ಸಂಖ್ಯೆ-14ರಲ್ಲಿ ಬರುವ ಕಾರ್ಮಿಕ ಭವನದಲ್ಲಿ ಸ್ಥಾಪಿಸಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಸೋಂಕಿತರಿಗೆ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ 12 ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದ್ದು, ದಾಸರಹಳ್ಳಿ ವಲಯದ ಕಾರ್ಮಿಕ ಭವನದಲ್ಲಿ ಇಂದು 127 ಹಾಸಿಗೆ ಸಾಮರ್ಥ್ಯದ ಕೋವಿಡ್ ಆರೈಕೆ ಕೇಂದ್ರವನ್ನು ತೆರೆಯಲಾಗಿದ್ದು, ಅದರಲ್ಲಿ 10 ಆಕ್ಸಿಜನ್ ಹಾಸಿಗೆಗಳನ್ನು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದ್ದಾರೆ.

ಕಾರ್ಮಿಕ ಭವನದಲ್ಲಿ ಕೋವಿಡ್ ಆರೈಕೆ ಕೇಂದ್ರ ಸುಸಜ್ಜಿತವಾಗಿದ್ದು, ವೈದ್ಯರು ಹಾಗೂ ಸಿಬ್ಬಂದಿಯನ್ನು ಎರಡು ಪಾಳಿಯಲ್ಲಿ ನಿಯೋಜನೆ ಮಾಡಲಾಗಿದೆ. ಒಂದು ಪಾಳಿಯಲ್ಲಿ 14 ಮಂದಿ ಕೆಲಸ ಮಾಡಲಿದ್ದಾರೆ. ಸೋಂಕಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಶೌಚಾಲಯ, ಸ್ನಾನದ ಕೊಠಡಿ, ಅಡುಗೆ ವ್ಯವಸ್ಥೆ, ಊಟ ಮಾಡುವ ಕೊಠಡಿ, ಮನರಂಜನಾ ಕೊಠಡಿ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಸೋಂಕು ದೃಢಪಟ್ಟು ಎಸಿಮ್ಟಮ್ಯಾಟಿಕ್ ಇದ್ದು ಮನೆಯಲ್ಲಿ ಉಳಿಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಇಲ್ಲದಿರುವವರು ಕೋವಿಡ್ ಆರೈಕೆ ಕೇಂದ್ರಗಳಿಗೆ ಬಂದು ಆರೈಕೆ ಪಡೆಯಿರಿ ಎಂದು ಅವರು ತಿಳಿಸಿದ್ದಾರೆ.

ಈ ವೇಳೆ ದಾಸರಹಳ್ಳಿ ವಲಯ ಕೋವಿಡ್ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಾಸಕ ಮಂಜುನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯಆಯುಕ್ತ ಗೌರವ್ ಗುಪ್ತ, ವಲಯ ಆಯುಕ್ತ ರವೀಂದ್ರ, ಜಂಟಿ ಆಯುಕ್ತ ನರಸಿಂಹಮೂರ್ತಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಗರದಲ್ಲಿ 2ರಿಂದ 3ಸಾವಿರ ಮಂದಿ ಕೋವಿಡ್ ದೃಢಪಟ್ಟವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಳ್ಳುತ್ತಿದ್ದು, ಅಂತಹವರ ಟ್ರಾಕಿಂಗ್ ಅನ್ನು ಪೊಲೀಸ್‍ನವರು ಮಾಡುತ್ತಿದ್ದಾರೆ. ತೀರಾ ಉಸಿರಾಟದ ಸಮಸ್ಯೆ ಆದಾಗ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಬೇಕೆಂದು ಬರುತ್ತಿದ್ದಾರೆ. ಮುಂಚಿತವಾಗಿಯೇ ಕೋವಿಡ್ ಪಾಸಿಟಿವ್ ಎಂದು ತಿಳಿದ ತಕ್ಷಣ ಐಸೋಲೇಟ್ ಆಗಿ ಔಷಧ, ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಂಡಾಗ ಕೋವಿಡ್ ಸೋಂಕು ಹರಡುವುದನ್ನು ತಡೆಯಬಹುದಾಗಿದೆ. ಅಗತ್ಯಕ್ಕನುಗುಣವಾಗಿ ಇನ್ನೂ ಹೆಚ್ಚಿನ ಕೋವಿಡ್ ಆರೈಕೆ ಕೇಂದ್ರಗಳನ್ನು ತೆಗೆಯಲು ಕ್ರಮ ವಹಿಸಲಾಗುವುದು.
-ಆರ್.ಅಶೋಕ್, ಕಂದಾಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News