×
Ad

ಉಡುಪಿ ಜಿಲ್ಲೆಯಲ್ಲಿ ಐಸಿಯು ಬೆಡ್‌ಗಳನ್ನು ಹೆಚ್ಚಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

Update: 2021-04-30 21:30 IST

ಉಡುಪಿ, ಎ.30: ಜಿಲ್ಲೆಯಲ್ಲಿ ಕೋವಿಡ್‌ನ ಎರಡನೇ ಅಲೆಯ ಕಾರಣದಿಂದ ದಿನೇ ದಿನೇ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸರಕಾರಿ ಮತು ಎಲ್ಲಾ ಖಾಸಗಿ ಆಸ್ಪತ್ರೆ ಗಳಲ್ಲಿ ಐಸಿಯು ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಶನಿವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವೈದ್ಯಕೀಯ ಎಕ್ಸ್‌ಪರ್ಟ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬಂದರೂ ಕೂಡಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತೊಂದರೆಯಾಗದಂತೆ ಎಲ್ಲಾ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪ್ರಸ್ತುತ ಇರುವ ಐಸಿಯು ಬೆಡ್‌ಗಳಿಗಿಂತಲೂ ಇನ್ನೂ ಹೆಚ್ಚಿನ ಸಂಖ್ಯೆಯ ಐಸಿಯು ಬೆಡ್‌ಗಳನ್ನು ಸಿದ್ಧ ಮಾಡಲು ಸಾಧ್ಯತೆಗಳಿದ್ದಲ್ಲಿ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಹಾಸಿಗೆ ನಿರ್ವಹಣಾ ವ್ಯವಸ್ಥೆಯಲ್ಲಿ (ಬೆಡ್ ಮ್ಯಾನೇಜ್‌ಮೆಂಟ್ ಸಿಸ್ಟಂ)ಪ್ರತೀ ದಿನ ಆಸ್ಪತ್ರೆಗೆ ದಾಖಲಾಗುವ ಮತ್ತು ಬಿಡುಗಡೆಯಾಗುವ ರೋಗಿಗಳ ವಿವರ ಗಳನ್ನು ದಾಖಲಿಸಿ. ಲಭ್ಯವಿರುವ ಬೆಡ್‌ಗಳ ಸಂಖ್ಯೆಯನ್ನು ಪ್ರತೀ ದಿನ ನಿಖರವಾಗಿ ನಮೂದಿಸಲು ಅನುಕೂಲವಾಗಲು ಖಾಸಗಿ ಆಸ್ಪತ್ರೆಗಳು ತಪ್ಪದೆ ತಮ್ಮ ಮಾಹಿತಿಗಳನ್ನು ನೀಡಬೇಕು. ಇದರಿಂದ ಬೆಡ್‌ಗಳ ಸಮಸ್ಯೆ ಕಂಡು ಬರದಂತೆ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು.

ಕೋವಿಡ್ ಸೋಂಕಿತರನ್ನು ಸೂಕ್ತ ರೀತಿಯಲ್ಲಿ ಪರೀಕ್ಷಿಸಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಿಕೊಳ್ಳಿ. ಸೋಂಕು ತೀವ್ರವಾಗಿಲ್ಲದೇ ಹೋಂ ಐಸೋಲೇಶನ್ ಅಗತ್ಯವಿರುವ ಸೋಂಕಿತರನ್ನು ಅನಗತ್ಯವಾಗಿ ದಾಖಲು ಮಾಡಬೇಡಿ. ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಸೋಂಕಿತರನ್ನು ವರ್ಗಾಯಿಸುವಾಗ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ. ರೋಗಿಯ ಸಂಪೂರ್ಣ ವಿವರಗಳನ್ನು ದಾಖಲಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಆಮ್ಲಜನಕ ಪೋಲಾಗದಂತೆ ನೋಡಿಕೊಳ್ಳಿ: ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ನೀಡುವ ಆಕ್ಸಿಜಿನ್ ಪೋಲಾಗದಂತೆ ಎಚ್ಚರ ವಹಿಸಿ. ಈ ಬಗ್ಗೆ ಎಲ್ಲಾ ಸಿಬ್ಬಂದಿಗಳಿಗೆ ತರಬೇತಿ ನೀಡಿ. ರೋಗಿಗಳಿಗೆ ಅಗತ್ಯ ಪ್ರಮಾಣದಲ್ಲಿ ಆಕ್ಸಿಜಿನ್ ನೀಡುವ ಕುರಿತು ಮಾಹಿತಿ ನೀಡಿ. ಅಗತ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಆಕ್ಸಿಜನ್ ನೀಡುವುದನ್ನು ಹಾಗೂ ಆಕ್ಸಿಜಿನ್ ಸೋರಿಕೆಯನ್ನು ತಡೆಗಟ್ಟಿ. ಪ್ರಸ್ತುತ ಜಿಲ್ಲೆಯಲ್ಲಿ ಆಕ್ಸಿಜಿನ್ ಕೊರತೆ ಇಲ್ಲ. ರೆಮಿಡಿಸಿವರ್‌ನ್ನು ಸಹ ಅವಶ್ಯವಿದ್ದ ರೋಗಿಗಳಿಗೆ ಮಾತ್ರ ನೀಡಿ ಎಂದು ಡಿಸಿ ಸೂಚಿಸಿದರು.

ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 6 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಬೆಂಗಳೂರು ನಂತರ ಪ್ರತೀ ಮಿಲಿಯನ್‌ಗೆ ಅತೀ ಹೆಚ್ಚು ಕೋವಿಡ್ ಪರೀಕ್ಷೆ ನಡೆಸುತ್ತಿರುವ ಜಿಲ್ಲೆ ಉಡುಪಿಯಾಗಿದೆ. ಸಾರ್ವಜನಿಕ ರು ಕೋವಿಡ್ ನಿಯಂತ್ರಣ ಕುರಿತಂತೆ ಸರ್ಕಾರ ಸೂಚಿಸಿರುವ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಸೋಂಕು ಹರಡದಂತೆ ನಿಯಂತ್ರಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಡಿಸಿ ಜಿ.ಜಗದೀಶ್ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಹಾಗೂ ಎಕ್ಸ್‌ಪರ್ಟ್ ಸಮಿತಿಯ ವೈದ್ಯರುಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News