ಬಿ.ಸಿ.ರೋಡ್ ನಲ್ಲಿ ಚೂರಿ ಇರಿತ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
Update: 2021-05-01 06:44 GMT
ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಿ.ಸಿ.ರೋಡ್ ಕೈಕಂಬ ಸಮೀಪದ ಪರ್ಲ್ಯ ನಿವಾಸಿಗಳಾದ ಇಮ್ರಾನ್ ಮತ್ತು ಸಫ್ವಾನ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಬ್ರಹ್ಮರಕೋಟ್ಲು ನಿವಾಸಿ ಮನೋಜ್ ಸಪಲ್ಯ ಎಂಬವರಿಗೆ ಎ. 4ರಂದು ರಾತ್ರಿ ಬಿ.ಸಿ.ರೋಡ್ ಬಳಿಯ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಸ್ಕೂಟರ್ ನಲ್ಲಿ ಬಂದ ಇಬ್ಬರು ಚೂರಿಯಿಂದ ಇರಿದು ಪರಾರಿಯಾಗಿದ್ದರು ಎಂದು ದೂರು ದಾಖಲಾಗಿತ್ತು.
ಚೂರಿ ಇರಿತ ಪ್ರಕರಣದ ತನಿಖೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶುಕ್ರವಾರ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.