ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ

Update: 2021-05-03 17:14 GMT

ಬೆಂಗಳೂರು, ಮೇ 3: ಸರಕಾರದ ನಿರ್ಲಕ್ಷ್ಯದಿಂದ ಆಕ್ಸಿಜನ್ ಹಾಗೂ ವೆಂಟಿಲೇಟರ್ ದೊರಕದೆ ಮುಗ್ಧರು ಸಾವನ್ನಪ್ಪುತ್ತಿದ್ದು, ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸೋಮವಾರ ನಗರದ ಕಾಂಗ್ರೆಸ್ ಕಚೇರಿ ಮುಂಭಾಗ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ವೈರಾಣುವಿನಿಂದ ದಿನನಿತ್ಯ ಮುಗ್ಧ ಜನರು ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರಕಾರಗಳೆ ಹೊಣೆ ಎಂದು ದೂರಿದರು.

ಆರೋಗ್ಯ ಸಚಿವ ಸುಧಾಕರ್ ಅತ್ಯಂತ ದುರಹಂಕಾರಿ ಆಗಿದ್ದು, ತನ್ನ ಸಚಿವ ಸಂಪುಟದ ಸಹೋದ್ಯೋಗಿಗಳೇ ಸುಧಾಕರ್ ವರ್ತನೆಯನ್ನು ದೂರುತ್ತಿದ್ದಾರೆ. ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂಬುವ ಆರೋಪ ನಿತ್ಯವೂ ಕೇಳಿಬರುತ್ತಿದೆ. ಸೂಕ್ತ ರೀತಿಯಲ್ಲಿ ರೋಗ ತಡೆಯಲು ಯಾವುದೇ ಮುಂಜಾಗ್ರತೆ ಕ್ರಮ ಕೈಗೊಳ್ಳದಿರುವ ಇಂತಹ ಬೇಜವಾಬ್ದಾರಿ ಸಚಿವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎಸ್.ಮನೋಹರ್. ಎಂ.ಎ.ಸಲೀಂ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News