ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್ ಪೂರೈಸದ ಕೇಂದ್ರ ಸರಕಾರದ ವಿರುದ್ಧ ಹೈಕೋರ್ಟ್ ಗರಂ

Update: 2021-05-04 13:16 GMT

ಬೆಂಗಳೂರು, ಮೇ 4: ರಾಜ್ಯದಲ್ಲಿ ಆಕ್ಸಿಜನ್ ಅಭಾವದಿಂದಾಗಿ ಕೊರೋನ ಸೋಂಕಿತ ರೋಗಿಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್ ಪೂರೈಸದ ಕೇಂದ್ರ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕೊರೋನ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಅರ್ಜಿಗಳ ವಿಚಾರಣೆ ವೇಳೆ ಆಕ್ಸಿಜನ್ ಕೊರತೆಯನ್ನೇ ಪ್ರಮುಖವಾಗಿ ಪರಿಗಣಿಸಿದ ಪೀಠ, ರಾಜ್ಯಕ್ಕೆ ಎಷ್ಟು ಆಕ್ಸಿಜನ್ ಅವಶ್ಯಕತೆ ಇದೆ. ಕೊರತೆ ಎಷ್ಟಿದೆ ಹಾಗೂ ಕೇಂದ್ರದಿಂದ ಪೂರೈಕೆಯಾಗುತ್ತಿರುವ ಆಕ್ಸಿಜನ್ ಪ್ರಮಾಣವೆಷ್ಟು ಎಂದು ಕೇಂದ್ರ ಹಾಗೂ ರಾಜ್ಯದ ಪರ ವಕೀಲರನ್ನು ಪ್ರಶ್ನಿಸಿತು. ರಾಜ್ಯ ಸರಕಾರದ ಪರ ಹಾಜರಿದ್ದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಮಾಹಿತಿ ನೀಡಿ, ಮೇ 5ರ ಪ್ರಕಾರ ರಾಜ್ಯಕ್ಕೆ 1700 ಮೆಟ್ರಿಕ್ ಟನ್ ಆಕ್ಸಿಜನ್ ಅಗತ್ಯವಿದೆ. ಸರಕಾರವೇ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.

ಕೇಂದ್ರದ ಪರ ವಕೀಲರಾದ ಎನ್. ಕುಮಾರ್ ಮಾಹಿತಿ ನೀಡಿ, ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯ ರಾಜ್ಯಕ್ಕೆ ಅಗತ್ಯವಿರುವಂತೆ 802 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವಂತೆ ನಿರ್ದೇಶಿಸಿತ್ತು. ಕೇಂದ್ರ ಸರಕಾರ ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ 865 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ರಾಜ್ಯದಲ್ಲಿ ಆಕ್ಸಿಜನ್ ಬೇಡಿಕೆ ಏರಿಕೆಯಾಗಿದ್ದು, 1700 ಮೆ. ಟನ್ ಅಗತ್ಯವಿದೆ. ಅದನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಕೇಂದ್ರದಿಂದ ಸ್ಪಷ್ಟನೆ ಪಡೆದು ಮಾಹಿತಿ ನೀಡುವಂತೆ ತಿಳಿಸಿ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿತು.

ಮಧ್ಯಾಹ್ನದ ಕಲಾಪದ ವೇಳೆ ಕೇಂದ್ರದ ಪರ ವಕೀಲರು ರಾಜ್ಯಕ್ಕೆ ಹೆಚ್ಚಿನ ಆಕ್ಸಿಜನ್ ಪೂರೈಸುವ ಸಂಬಂಧ ನಿರ್ಧಾರ ಕೈಗೊಳ್ಳಲು ಸಮಯಾವಕಾಶ ನೀಡಬೇಕು ಎಂದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠವು ಚಾಮರಾಜನಗರ, ಕಲಬುರಗಿಯಲ್ಲಿ ಆಕ್ಸಿಜನ್ ಸಿಗದೆ ರೋಗಿಗಳು ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಸಿಗದೆ ಮತ್ತೆಷ್ಟು ಕೋವಿಡ್ ರೋಗಿಗಳು ಸಾವನ್ನಪ್ಪಬೇಕು ಎಂದು ಪ್ರಶ್ನಿಸಿತು. ಜತೆಗೆ ರಾಜ್ಯದಲ್ಲಿ ಕೋವಿಡ್ ಮಿತಿ ಮೀರುತ್ತಿದೆ. ಬೆಂಗಳೂರು ಬಿಟ್ಟು ಎಲ್ಲಾದರೂ ದಿನಕ್ಕೆ 20 ಸಾವಿರಕ್ಕೂ ಅಧಿಕ ಪ್ರಕರಣಗಳಿವೆಯೇ. ಬೇರೆ ರಾಜ್ಯಗಳಿಗೆ ಪೂರೈಕೆಯಾಗುತ್ತಿರುವ ಆಕ್ಸಿಜನ್‍ನ್ನು ರಾಜ್ಯಕ್ಕೆ ಪೂರೈಸಬಹುದಲ್ಲವೇ ಎಂದು ಕೇಳಿತು.

ಇದಕ್ಕೆ ಸ್ಪಷ್ಟನೆ ನೀಡಿದ ಕೇಂದ್ರದ ಪರ ವಕೀಲರು, ಆಕ್ಸಿಜನ್ ಪೂರೈಕೆ ವಿಚಾರವನ್ನು ಒಂದೇ ಇಲಾಖೆ ನಿರ್ಧರಿಸುವುದಿಲ್ಲ. ಸಂಬಂಧಪಟ್ಟ ಇಲಾಖೆಗಳು ಹಾಗೂ ಪ್ರಾಧಿಕಾರಗಳು ಸಭೆ ನಡೆಸಿ ತೀರ್ಮಾನಿಸಬೇಕು. ಹೀಗಾಗಿ ಈ ವಿಚಾರವಾಗಿ ಸ್ಪಷ್ಟನೆ ನೀಡಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ವಾದ ದಾಖಲಿಸಿಕೊಂಡ ಪೀಠ, ನಾಳೆ ಕೇಂದ್ರ ಸರಕಾರ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆಯನ್ನು ಹೆಚ್ಚಿಸಬೇಕು. ಇಲ್ಲದಿದ್ದರೆ ನ್ಯಾಯಾಲಯವೇ ಈ ಸಂಬಂಧ ಆದೇಶ ಹೊರಡಿಸಲಿದೆ. ಹೀಗಾಗಿ ಕೇಂದ್ರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿ, ವಿಚಾರಣೆಯನ್ನು ಮೇ 5ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದಿಸಿ, ಕೋಲಾರದಲ್ಲಿ ಖುದ್ದು ಜಿಲ್ಲಾ ನ್ಯಾಯಾಧೀಶರಿಗೇ ಆಕ್ಸಿಜನ್ ಬೆಡ್ ಲಭ್ಯವಾಗುತ್ತಿಲ್ಲ. ಬೆಂಗಳೂರು ನಗರದಲ್ಲಿ 10ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಸಮರ್ಪಕ ಆಕ್ಸಿಜನ್ ಪೂರೈಕೆ ಇಲ್ಲ ಎಂದು ಆರೋಪಿಸಿದರು. ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಮಾಹಿತಿ ನೀಡಿ, ಪಾಲಿಕೆ ವ್ಯಾಪ್ತಿಯಲ್ಲಿ ಈಗಿರುವುದರ ಜತೆಗೆ 268 ಎಚ್‍ಡಿಯು ಬೆಡ್‍ಗಳು, 57 ಐಸಿಯು ಬೆಡ್‍ಗಳು, 54 ಐಸಿಯು ವೆಂಟಿಲೇಟರ್ ಬೆಡ್ ಗಳನ್ನು ಹೆಚ್ಚಿಸಲಾಗಿದೆ ಎಂದರು.

ರಾಜ್ಯ ಸರಕಾರದ ಪರ ವಕೀಲರು ಮಾಹಿತಿ ನೀಡಿ ರಾಜ್ಯಕ್ಕೆ ಪ್ರತಿದಿನ 44 ಸಾವಿರ ಬಾಟಲ್ ರೆಮ್‍ಡೆಸಿವಿರ್ ಬೇಕಾಗಿದ್ದು, ಕೇಂದ್ರ ಸರಕಾರ ಎಪ್ರಿಲ್ 21ರಿಂದ ಮೇ 9ರವರೆಗೆ ಒಟ್ಟು 3,01,330 ಬಾಟಲ್ ಪೂರೈಸಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News