ಖಾತೆ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ: ಸಚಿವ ಸುಧಾಕರ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ
ದಾವಣಗೆರೆ, ಮೇ 5: ಬೆಂಗಳೂರಿನಲ್ಲಿ, ರಾಜ್ಯದಲ್ಲಿ ಬೆಡ್ ಸಿಗದ ಪರಿಸ್ಥಿತಿ ಇದೆ. ರಾಜ್ಯದ ಸಮಸ್ಯೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಂದಿಸುತ್ತಿದ್ದಾರೆ. ಆದರೆ ಆರೋಗ್ಯ ಸಚಿವರಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ಸುಧಾಕರ್ ರಾಜೀನಾಮೆ ನೀಡಲಿ. ಸರಿಯಾಗಿ ಎರಡೆರಡು ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ಏಕೆ ನಿಮಗೆ ಖಾತೆಗಳು ಬೇಕು. ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಹೇಳಿದರು.
ನಿಮ್ಮಿಂದಾಗಿ ಸರಕಾರ, ಪಕ್ಷ, ಸಿಎಂ, ಪ್ರಧಾನಿಗೆ ಕೆಟ್ಟ ಹೆಸರು ಬರುತ್ತಿದೆ. ಕೆಲಸ ಮಾಡುವುದಿದ್ದರೆ ಸಚಿವರಾಗಿ ಇರಿ. ನಿಮ್ಮಿಂದಾಗಿ ಈ ಸರಕಾರ ನಿಂತದ್ದಲ್ಲ. ಆಡಳಿತ ಪಕ್ಷದ ಶಾಸಕನಾಗಿ ನನಗೆ ಅಸಹ್ಯವೆನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಕೊರೋನ ನಿಯಂತ್ರಣ ಸಂಬಂಧ ಹಗಲಿರುಳು ಕೆಲಸ ಮಾಡುತ್ತಿದ್ದಾರೆ, ಶ್ರಮಿಸುತ್ತಿದ್ದಾರೆ. ಚಾಮರಾಜನಗರ ದುರಂತದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ ಎಂದು ಹೇಳಿದರು.