ಮೂರು ಜಿಲ್ಲೆಗಳ ಉಸ್ತುವಾರಿ ಸಚಿವರನ್ನು ಬದಲಾಯಿಸಿ ರಾಜ್ಯ ಸರಕಾರ ಆದೇಶ
Update: 2021-05-07 11:50 GMT
ಬೆಂಗಳೂರು, ಮೇ 7: ದಿಢೀರ್ ಬೆಳವಣಿಗೆಯೊಂದರಲ್ಲಿ ಕೋಲಾರ, ಬೀದರ್ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಮಾರ್ಪಡಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಕೆಳಕಂಡಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಮಾರ್ಪಡಿಸಲಾಗಿದ್ದು, ಕೋಲಾರ ಜಿಲ್ಲೆಗೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ, ಬೀದರ್ ಜಿಲ್ಲೆಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹಾಗೂ ಯಾದಗಿರಿ ಜಿಲ್ಲೆಗೆ ತೋಟಗಾರಿಕಾ ಸಚಿವ ಆರ್.ಶಂಕರ್ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಎಚ್.ಜಿ.ಅನುರಾಧ ಆದೇಶ ಹೊರಡಿಸಿದ್ದಾರೆ.