ಊಹಾಪೋಹಕ್ಕೆ ಕಿವಿಗೊಡದೆ ಲಸಿಕೆ ಹಾಕಿಸಿಕೊಳ್ಳಿ: ಅಲ್ಪಸಂಖ್ಯಾತರ ಸಮುದಾಯಕ್ಕೆ ಇಲಾಖಾಧಿಕಾರಿ ಮನವಿ
ಮಂಗಳೂರು, ಮೇ 8: ದ.ಕ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ -19 ಸಾಂಕ್ರಾಮಿಕ ರೋಗವು ಹಬ್ಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಲಸಿಕೆ ಜಿಲ್ಲೆಯಲ್ಲಿ ಅಭಿಯಾನವು ನಡೆಯುತ್ತಿದೆ. ಹಾಗಾಗಿ ಯಾವುದೇ ಊಹಾಪೋಹಕ್ಕೆ ಕಿವಿಗೊಡದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅಲ್ಪಸಂಖ್ಯಾತ ಸಮುದಾಯಕ್ಕೆ ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮನವಿ ಮಾಡಿದ್ದಾರೆ.
ಕೋವಿಡ್ ಗುಣ ಲಕ್ಷಣಗಳಾದ ನೆಗಡಿ, ಕೆಮ್ಮು, ಜ್ವರದಂತಹ ಲಕ್ಷಣಗಳು ಕಂಡು ಬಂದರೆ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಪರೀಕ್ಷಾ ಕೇಂದ್ರವನ್ನು ಸಂಪರ್ಕಿಸಿರಿ. ಕೋವಿಡ್ ಪಾಸಿಟಿವ್ ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ಪಡೆದು ಕುಟುಂಬದ ಇತರ ಸದಸ್ಯರಿಗೆ ಸೋಂಕು ಹರಡವುದನ್ನು ತಪ್ಪಿಸಿ. ಮನೆ ಅಥವಾ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ಅಂತರ ಕಾಪಾಡುವುದೊಂದಿಗೆ ಕೋವಿಡ್-19 ಮಾರ್ಗಸೂಚಿ ಪಾಲಿಸಿ ಕೊಳ್ಳಿ. 18 ವರ್ಷಕ್ಕೆ ಮೇಲ್ಪಟ್ಟ ಎಲ್ಲರೂ ಕೋವಿಡ್ ನಿರೋಧಕ ಲಸಿಕೆ ಪಡೆಯಿರಿ. ಅದಕ್ಕಾಗಿ ಆರೋಗ್ಯ ಸೇತು ಅಥವಾ ಕೋವಿನ್ ಆ್ಯಪ್ನಲ್ಲಿ ಹೆಸರು ನೋಂದಾಯಿಸಿ. ಯಾವುದೇ ಹಿಂಜರಿಕೆಯಿಲ್ಲದೆ, ಊಹಾಪೋಹಗಳಿಗೆ ಕಿವಿಗೊಡದೆ ಲಸಿಕೆ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.