ದುಡಿಯುವ ವರ್ಗಕ್ಕೆ ನೆರವಾಗಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ

Update: 2021-05-09 11:40 GMT

ಬೆಂಗಳೂರು, ಮೇ 9: ಕೊರೋನ ಸೋಂಕು ನಿಯಂತ್ರಣಕ್ಕೆ ನಾಳೆ(ಮೇ 10)ಯಿಂದ ಕಠಿಣ ಕ್ರಮಗಳನ್ನು ಜಾರಿಗೆ ತರುವುದಾಗಿ ರಾಜ್ಯ ಸರಕಾರ ಹೇಳಿರುವುದರಿಂದ ಈಗಾಗಲೇ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಸದ್ಯ ಬೇಡಿಕೆ ಇರುವುದಕ್ಕಿಂತ ಹೆಚ್ಚಿನ ಆಕ್ಸಿಜನ್ ಉತ್ಪಾದನೆಯಾಗುತ್ತಿದೆ. ನಮ್ಮಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು. ಜಿಲ್ಲಾವಾರು ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಬೇಕು. ಆಕ್ಸಿಜನ್ ಸಿಲಿಂಡರುಗಳ ಕಾಳಸಂತೆಯಲ್ಲಿ ಮಾರಾಟ ಮಾಡುವ ದಂಧೆ ನಿಲ್ಲಿಸಿ ಮನೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೂ ಸುಲಭವಾಗಿ ಆಕ್ಸಿಜನ್ ಸಿಗುವಂತೆ ಮಾಡಬೇಕು. ಆಕ್ಸಿಜನ್ ಉತ್ಪಾದನೆ ಆಗುತ್ತಿರುವ ಪ್ರದೇಶಗಳಲ್ಲೇ ಆಕ್ಸಿಜನ್ ಲಭ್ಯತೆಯ ಆಧಾರದ ಮೇಲೆ ತಾತ್ಕಾಲಿಕ ಕೋವಿಡ್ ಆಸ್ಪತ್ರೆ ಸ್ಥಾಪಿಸಬೇಕು ಎಂದು ಸಿದ್ದರಾಮಯ್ಯ ಕೋರಿದ್ದಾರೆ.

ಜಿಲ್ಲಾವಾರು ಚಿಕಿತ್ಸೆ ಎಂಬ ಅವೈಜ್ಞಾನಿಕ ವಿಧಾನವನ್ನು ಕೈಬಿಟ್ಟು ಸುತ್ತಮುತ್ತಲ ಏಳೆಂಟು ಜಿಲ್ಲೆಗಳ ರೋಗಿಗಳನ್ನು ಒಂದು ಕಡೆ ತಂದು ಆಕ್ಸಿಜನ್ ನೀಡಿ ರಕ್ಷಿಸಬೇಕು. ಇದರಿಂದ ಒತ್ತಡ ಕಡಿಮೆಯಾಗುತ್ತದೆ. ಖಾಸಗಿ ಆಸ್ಪತ್ರೆಗಳವರು ರೆಮ್‍ಡೆಸಿವಿರ್ ಔಷಧಿ ತರುವಂತೆ ರೋಗಿಗಳಿಗೆ ಹೇಳುತ್ತಿದ್ದಾರೆ. ಈ ಜೀವರಕ್ಷಕ ಔಷಧಿಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವವರ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಪ್ರತಿ ರೋಗಿಗೆ ಕನಿಷ್ಠ ಮಟ್ಟದ ಮೊತ್ತವನ್ನು ನಿಗದಿ ಪಡಿಸಲಾಗಿದೆ. ಅದರಿಂದ ಸಮರ್ಪಕವಾಗಿ ರೆಮ್‍ಡೆಸಿವಿರ್ ನಂತಹ ಔಷಧಗಳನ್ನೂ ನೀಡಲಾಗುತ್ತಿಲ್ಲ ಎಂಬ ಮಾಹಿತಿ ಇದೆ. ಈ ಅವ್ಯವಸ್ಥೆಯನ್ನು ಸರಿ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯದ ಅಸಹಾಯಕ ರೋಗಿಗಳಿಗೆ ಸಾಮಾನ್ಯ, ಐಸಿಯು, ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಇರುವ ಸಾಕಷ್ಟು ಬೆಡ್‍ಗಳನ್ನು ಸ್ಥಾಪಿಸಲು ಯಾವ ಸಮಸ್ಯೆ ಇದೆ. ಬೆಡ್‍ಗಳು ಎಷ್ಟು ಬೇಕಾಗಬಹುದು ಎಂಬುದನ್ನು ಮೊದಲೇ ಅಂದಾಜಿಸಿ ಕಾರ್ಯೋನ್ಮಖರಾಗಬೇಕು. ವೈದ್ಯರುಗಳಿಗೆ ಸಂಬಂಧಿಸಿದಂತೆ, ಖಾಸಗಿ, ನಿವೃತ್ತರಾದವರನ್ನು ಅಗತ್ಯ ಬಿದ್ದರೆ ನೇಮಿಸಿಕೊಳ್ಳಬೇಕು. ದಾದಿಯರ ವಿಷಯದಲ್ಲೂ ಹಾಗೆ ಮಾಡಬೇಕು. ಈಗಾಗಲೇ ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಂಡಿರುವ ಅಂತಿಮ ವರ್ಷಗಳಲ್ಲಿರುವ ವಿದ್ಯಾರ್ಥಿಗಳನ್ನು ಚಿಕಿತ್ಸೆಗೆ ನಿಯೋಜಿಸಬೇಕು. ಲಸಿಕೆ ಹಾಕಿಸಿಕೊಳ್ಳದವರಿಗೆ ಆದ್ಯತೆಯ ಮೇಲೆ ಲಸಿಕೆ ಹಾಕಬೇಕು. ಕಳೆದ ವರ್ಷ ತರಿಸಿದ ಸಾವಿರಗಟ್ಟಲೆ ವೆಂಟಿಲೇಟರ್‍ಗಳನ್ನು ಬಳಸದೆ ಗೋಡೌನುಗಳಲ್ಲಿ ಧೂಳು ತಿನ್ನಲು ಬಿಡಲಾಗಿದೆಯೆಂಬ ಮಾಹಿತಿ ಇದೆ. ಇದನ್ನು ಕ್ರಿಮಿನಲ್ ವರ್ತನೆ ಎನ್ನಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. 

ಅಗತ್ಯ ಬಿದ್ದರೆ ಕಲ್ಯಾಣ ಮಂಟಪ, ಕ್ರೀಡಾಂಗಣ, ಹಾಸ್ಟೆಲ್‍ಗಳು ಮುಂತಾದವುಗಳನ್ನು ತಾತ್ಕಾಲಿಕ ಆಸ್ಪತ್ರೆ ಮಾಡಿ ಚಿಕಿತ್ಸೆ ನೀಡಿ. ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲೂ ಖಾಲಿ ಜಾಗವನ್ನು ಹುಡುಕಿ ವ್ಯವಸ್ಥಿತವಾಗಿ ಶವ ಸಂಸ್ಕಾರ ನಡೆಸಬೇಕು. ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು. ಜನ ಉದ್ಯೋಗಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಸರಕಾರ ಪ್ರತಿಯೊಬ್ಬರಿಗೂ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿ ನೀಡಬೇಕು. ಜೊತೆಗೆ ಬೇಳೆ, ಅಡುಗೆ ಎಣ್ಣೆ, ಮುಂತಾದ ದಿನಸಿ ಪದಾರ್ಥಗಳುಳ್ಳ ಕಿಟ್‍ಗಳನ್ನು ನೀಡಬೇಕು. 

ಪ್ರತಿ ಬಿಪಿಎಲ್ ಕುಟುಂಬಕ್ಕೆ ಮೊದಲಿಗೆ 10 ಸಾವಿರ ರೂ.ಗಳನ್ನು ನೀಡಬೇಕು. ನಂತರ ತಿಂಗಳಿಗೆ 6 ಸಾವಿರ ರೂ.ಗಳನ್ನು ನೀಡಬೇಕು. ರಾಜ್ಯದ ರೈತರಿಗೆ, ಕುಶಲಕರ್ಮಿ ಸಮುದಾಯಗಳಿಗೆ, ಕಾರ್ಮಿಕರಿಗೆ, ಚಾಲಕರು ಸೇರಿದಂತೆ ಎಲ್ಲ ದುಡಿಯುವ ವರ್ಗಗಳಿಗೆ 10 ಸಾವಿರ ರೂ.ಗಳನ್ನು ನೀಡಬೇಕು. ಸಣ್ಣ, ಅತಿಸಣ್ಣ, ಸೂಕ್ಷ್ಮ, ಗೃಹ ಕೈಗಾರಿಕೆಗಳಿಗೆ, ವಾಹನಗಳ ಮಾಲಕರ ಸಭೆಗಳನ್ನು ನಡೆಸಿ ಸೂಕ್ತ ಪ್ಯಾಕೇಜನ್ನು ನೀಡಬೇಕು. ನಗರಗಳಿಂದ ಹಳ್ಳಿಗಳಿಗೆ ದುಡಿಯುವ ಜನ ವಾಪಸಾಗಿದ್ದಾರೆ. ಈ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಅತ್ಯಂತ ಸಮರ್ಪಕವಾಗಿ ಬಳಸಬೇಕು. ಕನಿಷ್ಠ 200 ಮಾನವ ದಿನಗಳ ಯೋಜನೆಯನ್ನು ಜಾರಿಗೊಳಿಸಬೇಕು. ಅಗತ್ಯ ಇರುವ ಕಡೆ ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

ಪ್ರಸ್ತುತ ಇರುವ ಹಣದುಬ್ಬರವನ್ನು ಆಧರಿಸಿ ನರೇಗಾ ಕೂಲಿ ಮೊತ್ತವನ್ನು ಪರಿಷ್ಕರಿಸಬೇಕು ಮತ್ತು ಹೆಚ್ಚಿಸಬೇಕು. ನರೇಗಾ ಯೋಜನೆಯಡಿ ಕೆಲಸ ಮಾಡಿದವರಿಗೆ 4 ತಿಂಗಳಿಂದ ಹಣ ಬಿಡುಗಡೆ ಮಾಡಿಲ್ಲ. ಈ ಬಾಕಿ ಉಳಿಸಿಕೊಂಡಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಈ ಎಲ್ಲ ಸಲಹೆಗಳನ್ನು ಗಂಭಿರವಾಗಿ ಪರಿಗಣಿಸಿ ಕಾರ್ಯೋನ್ಮುಖರಾಗಬೇಕೆಂದು, ಜನರಿಗೆ ಬಂದೊದಗಿರುವ ಸಂಕಟವನ್ನು ನಿವಾರಿಸಬೇಕೆಂದು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News