ಮೂರು-ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆ ಸಾಧ್ಯತೆ

Update: 2021-05-10 13:35 GMT

ಬೆಂಗಳೂರು, ಮೇ 10: ರಾಜ್ಯದಲ್ಲಿ ಪೂರ್ವ ಮುಂಗಾರು ಚೇತರಿಕೆಯಾಗುತ್ತಿದ್ದು, ಮುಂದಿನ ಮೂರು-ನಾಲ್ಕು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದ್ದಾರೆ.

ವಾತಾವರಣದಲ್ಲಿ ಬದಲಾವಣೆ ಉಂಟಾಗಿದ್ದು, ಮೇ 10ರಿಂದ 13ರವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಲಕ್ಷಣಗಳಿವೆ. ಕಳೆದೊಂದು ವಾರಕ್ಕೂ ಹೆಚ್ಚು ಕಾಲದಿಂದ ರಾಜ್ಯದಲ್ಲಿ ಒಣ ಹವೆ ಇದ್ದುದರಿಂದ ವಾತಾವರಣದಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿತ್ತು. ಇದರಿಂದ ವಾತಾವರಣದಲ್ಲಿನ ತೇವಾಂಶವನ್ನು ಸೆಳೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಪಶ್ಚಿಮದಿಂದ ಪೂರ್ವದ ಕಡೆಗೆ ಗಾಳಿ ಬೀಸುತ್ತಿರುವುದು ಮಳೆಯಾಗಲು ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ.

ಚಾಮರಾಜನಗರ, ಮೈಸೂರು ಸೇರಿ ಹಲವು ಕಡೆಗಳಲ್ಲಿ ಪೂರ್ವ ಮುಂಗಾರಿನ ಬಿತ್ತನೆಯಾಗಿದ್ದು, ರೈತರು ಮಳೆ ನಿರೀಕ್ಷೆಯಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News