ಲಾಕ್‍ಡೌನ್ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ನಿರ್ಧಾರ ಮಾಡುತ್ತಾರೆ: ಬಸವರಾಜ ಬೊಮ್ಮಾಯಿ

Update: 2021-05-15 12:56 GMT

ಬೆಂಗಳೂರು, ಮೇ 15: ಲಾಕ್‍ಡೌನ್ ಸಂದರ್ಭದಲ್ಲಿ ಪ್ರತಿದಿನ ಕರ್ತವ್ಯ ನಿರತ 1000 ಪೊಲೀಸ್ ಸಿಬ್ಬಂದಿ ಸೇರಿದಂತೆ ಆಹಾರದ ಅಗತ್ಯ ಇರುವವರಿಗೆ ಮಧ್ಯಾಹ್ನದ ಊಟ ವಿತರಿಸುವ ಇಸ್ಕಾನ್ ಸಂಸ್ಥೆಯ ಅಕ್ಷಯ ಪಾತ್ರೆ ಯೋಜನೆಗೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಶನಿವಾರ ನಗರದ ಕೆ.ಆರ್.ಮಾರುಕಟ್ಟೆಯ ಬಳಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಆಹಾರದ ಪೊಟ್ಟಣಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಲಾಕ್‍ಡೌನ್ ಸಂದರ್ಭದಲ್ಲಿ ಯಾರೂ ಆಹಾರದ ಸಮಸ್ಯೆ ಎದುರಿಸಬಾರದು. ಈ ಹಿನ್ನೆಲೆಯಲ್ಲಿ ಕಳೆದ ಬಾರಿಯೂ ನಮ್ಮ ಜೊತೆಗೆ ದಾಸೋಹದ ಕೆಲಸದಲ್ಲಿ ಇಸ್ಕಾನ್ ಸಂಸ್ಥೆ ಕೈ ಜೋಡಿಸಿತ್ತು. ಈ ಬಾರಿಯೂ ಅವರ ಸಹಕಾರಕ್ಕೆ ನಾನು ಮನವಿ ಮಾಡಿದೆ. ಅದರ ಪ್ರತಿಫಲವಾಗಿ ಇಂದು ಪೊಲೀಸ್ ಸಿಬ್ಬಂದಿ ಸೇರಿದಂತೆ ಊಟದ ಅವಶ್ಯಕತೆಯಿರುವವರಿಗೆ ಇಸ್ಕಾನ್ ಸಂಸ್ಥೆ ಶುಚಿ ರುಚಿಯಾಗಿರುವ ಊಟವನ್ನು ಮಧ್ಯಾಹ್ನ ವಿತರಿಸುತ್ತಿದೆ ಎಂದು ಅವರು ಹೇಳಿದರು.

ಲಾಕ್‍ಡೌನ್ ಬಗ್ಗೆ ಸಿಎಂ ನಿರ್ಧಾರ: ಲಾಕ್‍ಡೌನ್ ವಿಸ್ತರಣೆ ವಿಷಯ ಕುರಿತಂತೆ ಇದುವರೆಗೆ ಅಧಿಕೃತವಾಗಿ ಸರಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ಆ ಸಂದರ್ಭದಲ್ಲಿನ ಪರಿಸ್ಥಿತಿ ಹಾಗೂ ಕೋವಿಡ್ ಅಂಕಿ ಅಂಶಗಳನ್ನು ಪರಿಶೀಲಿಸಲಿದ್ದಾರೆ. ಅದಾದ ಬಳಿಕ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಕೈಗೊಳ್ಳುತ್ತಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಪರೀಕ್ಷೆ ಕಡಿಮೆ ಮಾಡಿಲ್ಲ: ಕೋವಿಡ್ ಆರ್‍ಟಿಪಿಸಿಆರ್ ಪರೀಕ್ಷಾ ಪ್ರಮಾಣವನ್ನು ಕಡಿಮೆ ಮಾಡಿಲ್ಲ. ಈ ಹಿಂದೆ ಸಾರ್ವಜನಿಕ ಸ್ಥಳಗಳಾದ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣ ಸೇರಿದಂತೆ  ಜನನಿಬಿಡ ಪ್ರದೇಶ ಗಳಲ್ಲಿ ಟೆಸ್ಟಿಂಗ್ ನಡೆಯುತ್ತಿತ್ತು. ಆದರೆ ಈಗ ಲಾಕ್‍ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ನಡೆಯುತ್ತಿದ್ದ ಟೆಸ್ಟಿಂಗ್ ನಿಂತಿದೆ. ಹೀಗಾಗಿ ಟೆಸ್ಟಿಂಗ್ ಸಂಖ್ಯೆ ಕಡಿಮೆಯಾಗಿದೆ. ಆದರೆ ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ನಾವು ಕಡ್ಡಾಯವಾಗಿ ಆರ್‍ಟಿಪಿಸಿಆರ್ ತಪಾಸಣೆಗೆ ಒಳಪಡಿಸುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಅಕ್ಷಯ ಪಾತ್ರೆ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ್, ಚಿಕ್ಕಪೇಟೆ ಕ್ಷೇತ್ರದ ಶಾಸಕ ಉದಯ ಗರುಡಾಚಾರ್, ರಾಜ್ಯ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News