3-4 ದಿನಗಳಲ್ಲಿ ನೂತನ ಆಮ್ಲಜನಕ ನೀತಿ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

Update: 2021-05-15 14:33 GMT

ಬೆಂಗಳೂರು, ಮೇ 15: ರಾಜ್ಯದ ಗ್ರಾಮೀಣ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ ಕೊಳಗೇರಿಗಳಲ್ಲಿ ಕೋವಿಡ್ ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡದಿರಲು ನಿರ್ಧರಿಸಿರುವ ಸರಕಾರ, ಅಂತಹ ಪ್ರದೇಶಗಳ ಎಲ್ಲ ಸೋಂಕಿತರನ್ನೂ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಹಾಗೂ ಡಿಸಿಎಂ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಶನಿವಾರ ಡಾ.ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ನಾಲ್ಕು ಗಂಟೆಗಳ ಕಾಲ ನಡೆದ ಕಾರ್ಯಪಡೆಯ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ವಾಸ ಮಾಡುವ ಸೋಂಕಿರನ್ನು ಯಾವುದೇ ಕಾರಣಕ್ಕೂ ಅವರ ಮನೆಗಳಲ್ಲೇ ಕ್ವಾರಂಟೈನ್ ಮಾಡುವುದಿಲ್ಲ. ಪಾಸಿಟಿವ್ ಆಗಿದೆ ಎಂದು ವರದಿ ಬಂದ ತಕ್ಷಣವೇ ಹತ್ತಿರದ ಕೋವಿಡ್ ಕೇರ್ ಕೇಂದ್ರಕ್ಕೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಲಾಗುವುದು. ಅದೇ ರೀತಿ ನಗರ-ಪಟ್ಟಣ ಪ್ರದೇಶಗಳ ಕೊಳೆಗೇರಿಗಳಲ್ಲಿ ವಾಸ ಮಾಡುವ ಸೋಂಕಿತರಿಗೂ ಇದೇ ರೀತಿಯಲ್ಲಿ ಸ್ಥಳಾಂತರ ಮಾಡಿ ಉಚಿತ ಚಿಕಿತ್ಸೆ ಕೊಡಲಾಗುವುದು. ಸೋಂಕು ಹರಡದಂತೆ ನೋಡಿಕೊಳ್ಳಲು ಹಾಗೂ ಅವರಿಗೆ ಗುಣಮಟ್ಟದ ಚಿಕಿತ್ಸೆ, ಆಹಾರ, ಔಷಧಿ ನೀಡಲು ಸುಲಭವಾಗುತ್ತದೆ ಎಂದರು.

ಜಿಲ್ಲಾಧಿಕಾರಿಗಳಿಗೆ ಹೊಣೆ: ಗ್ರಾಮೀಣ ಭಾಗ ಹಾಗೂ ನಗರದ ಕೊಳೆಗೇರಿಗಳಿಗೆ ಆರೋಗ್ಯ ಸಿಬ್ಬಂದಿ ತೆರಳಿ ಮನೆ ಮನೆಯಲ್ಲೂ ರಾಟ್ ಟೆಸ್ಟ್ ಮಾಡಬೇಕು. ಪಾಸಿಟಿವ್ ಆದವರು ಕಡ್ಡಾಯವಾಗಿ `ಕೋವಿಡ್ ಕೇರ್ ಸೆಂಟರ್'ನಲ್ಲಿಯೇ ಇರಬೇಕು. ಪ್ರತಿ ಪಿಎಚ್‍ಸಿ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಮಾಡಲಾಗುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿನ ಹಾಸ್ಟೆಲ್ ಇತ್ಯಾದಿ ಕಟ್ಟಡಗಳನ್ನು ಬಳಸಿಕೊಂಡು ಕೋವಿಡ್ ಕೇರ್ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಎಲ್ಲ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಹಿಸಲು ಕಾರ್ಯಪಡೆ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಹೊಸ ಆಮ್ಲಜನಕ ನೀತಿ: ರಾಜ್ಯದಲ್ಲಿ ಆಮ್ಲಜನಕ ಬಳಕೆ, ತಯಾರಿಕೆ, ಘಟಕಗಳ ಸ್ಥಾಪನೆ, ಮೂಲಸೌಕರ್ಯ ಸ್ಥಾಪನೆ, ನಿರ್ವಹಣೆ ಇತ್ಯಾದಿ ಅಂಶಗಳ ಬಗ್ಗೆ ಇನ್ನು 3-4 ದಿನಗಳಲ್ಲಿ `ನೂತನ ಆಮ್ಲಜನಕ ನೀತಿ'ಯನ್ನು ರೂಪಿಸಲಾಗುವುದು ಎಂದು ಪ್ರಕಟಿಸಿದ ಡಾ.ಅಶ್ವತ್ಥ ನಾರಾಯಣ, ರಾಜ್ಯದಲ್ಲಿ ಈಗಾಗಲೇ ಆಮ್ಲಜನಕ ಕೊರತೆ ಬಹುತೇಕ ನೀಗುತ್ತಿದೆ ಎಂದು ಹೇಳಿದರು.

ಆಮ್ಲಜನಕ ಬಳಕೆಯನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ಡಿಆರ್‍ಡಿಒ ಅಭಿವೃದ್ಧಿಪಡಿಸಿರುವ 1 ಸಾವಿರ ಯಂತ್ರಗಳನ್ನು ಪ್ರಾಯೋಗಿಕವಾಗಿ ಬಳಸಲು ಕಾರ್ಯಪಡೆ ತೀರ್ಮಾನಿಸಿದೆ. ಪ್ರತಿ ಒಂದು ಯಂತ್ರಕ್ಕೆ 6ರಿಂದ 10 ಸಾವಿರ ರೂ. ಆಗುತ್ತದೆ ಎಂದ ಅವರು, ಆರು ಜಿಲ್ಲೆಗಳಲ್ಲಿ ಆಮ್ಲಜನಕ ಬಾಟ್ಲಿಂಗ್ ಯೂನಿಟ್ ಸ್ಥಾಪಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News