×
Ad

ಕೊರೋನ ಸೋಂಕು ಪ್ರಕರಣ; ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಬೆಡ್‌ಗಳನ್ನು ಕಾಯ್ದಿರಿಸಬೇಕು: ಕೋಟ ಶ್ರೀನಿವಾಸ ಪೂಜಾರಿ

Update: 2021-05-22 22:33 IST

ಮಂಗಳೂರು, ಮೇ 22: ಕೆ.ಪಿ.ಎಂ.ಇ ಕಾಯ್ದೆಯಡಿ ನೋಂದಣಿಯಾದ ಎಲ್ಲಾ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಬೆಡ್‌ಗಳನ್ನು ಸರಕಾರಿ ಆಸ್ಪತ್ರೆಯಿಂದ ಶಿಫಾರಸ್ಸು ಮಾಡುವ ಕೊರೋನ ರೋಗಿಗಳಿಗೆ ಒದಗಿಸಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ಕುರಿತು ನಗರದ ಅಥೇನಾ ಆಸ್ಪತ್ರೆಯ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಖಾಸಗಿ ಆಸ್ಪತ್ರೆಗೆ ಆಯುಷ್ಮಾನ್ ಆರೋಗ್ಯ ಕರ್ನಾಟಕದ ಕಾರ್ಡ್ ಹೊಂದಿ ತೀರಾ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗಾಗಿ ಕೋವಿಡ್ ರೋಗಿಗಳು ನೇರವಾಗಿ ಬಂದಾಗ ಅವರಿಗೆ ಚಿಕಿತ್ಸೆ ನೀಡಲು ನೀರಾಕರಿಸದೆ, ಆರೋಗ್ಯ ಮಿತ್ರರ ಸಹಾಯದೊಂದಿಗೆ ಸರಕಾರಿ ಆಸ್ಪತ್ರೆಯ ವೈದ್ಯರ ರೆಫರೆನ್ಸ್‌ನ್ನು ವಾಟ್ಸ್ ಆ್ಯಪ್ ಮೂಲಕ ಪಡೆದು ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ಸಚಿವರು ತಿಳಿಸಿದರು.

ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಸಾರ್ವಜನಿಕರು ಬಂದಾಗ ಆರೋಗ್ಯ ಮಿತ್ರರು ಅವರಿಗೆ ಸಲಹೆ ಮತ್ತು ಸೂಚನೆಗಳನ್ನು ನೀಡಿ ಚಿಕಿತ್ಸೆ ಕೊಡಿಸಲು ಸಹಕರಿಸಬೇಕು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ರೋಗಿಗಳು ಡಿಸ್ಚಾರ್ಜ್ ಆಗುವ ಸಂದರ್ಭ ಪ್ರತೀ ರೋಗಿಯ ಡಿಸ್ಚಾರ್ಜ್ ಸಮ್ಮರಿಗೆ ನೋಡಲ್ ಅಧಿಕಾರಿಗಳ ದೃಢೀಕರಣ ಪಡೆಯುವುದು ಕಡ್ಡಾಯ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದಾಗ ನಿಗದಿತ ಶುಲ್ಕವನ್ನು ಪಡೆಯಲು ಸರಕಾರ ಆದೇಶ ಹೊರಡಿಸಿದೆ. ಹೆಚ್ಚುವರಿ ಶುಲ್ಕ ಪಡೆದಿರುವುದು ಕಂಡುಬಂದಲ್ಲಿ ಅಂತಹ ಹೆಚ್ಚುವರಿ ಶುಲ್ಕವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಿಂದಿರುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಒಳ ರೋಗಿಗಳಾಗಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಮಾಹಿತಿಯನ್ನು ಪೋರ್ಟಲ್‌ನಲ್ಲಿ ಪ್ರತೀ ದಿನ ತಪ್ಪದೆ ಅಪ್ ಲೋಡ್ ಮಾಡಬೇಕು. ಒಂದೊಮ್ಮೆ ಆಸ್ಪತ್ರೆಯಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್‌ನಿಂದ ಚಿಕಿತ್ಸೆ ಪಡೆಯುತ್ತಿರುವ ರೋಗಿಯು ರೋಗ ಉಲ್ಬಣಗೊಂಡು ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುವುದು ಅನಿವಾರ್ಯವಾದಲ್ಲಿ ಆ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲದಿದ್ದರೆ ಇತರ ಖಾಸಗಿ ಆಸ್ಪತ್ರೆಯಲ್ಲಿ ಖಾಲಿಯಿದ್ದಲ್ಲಿ ಆರೋಗ್ಯ ಮಿತ್ರರು ವರ್ಗಾಯಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉಪಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್, ಜಿಲ್ಲಾ ಕುಷ್ಠರೋಗ ನಿಯಂತ್ರ ಣಾಧಿಕಾರಿ ಹಾಗೂ ಎ.ಬಿ.ಆರ್.ಕೆ. ನೋಡಲ್ ಅಧಿಕಾರಿ ಡಾ. ರತ್ನಾಕರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News