ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಿಎಂಗೆ ಸುನೀಲ್ ಪುರಾಣಿಕ್ ಮನವಿ

Update: 2021-05-24 17:43 GMT

ಬೆಂಗಳೂರು, ಮೇ 24: ರಾಜ್ಯದಲ್ಲಿ ಲಾಕ್‍ಡೌನ್ ಜಾರಿಯಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಕೋರಿ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಲಾಕ್‍ಡೌನ್ ಜಾರಿಯಿಂದ ಕನ್ನಡ ಚಿತ್ರೋದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರರಂಗದ ಲಕ್ಷಾಂತರ ಕಾರ್ಮಿಕರು ದಿನಗೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಅವರ ಕುಟುಂಬ ಇಂದು ಬೀದಿಗೆ ಬೀಳುವಂತಾಗಿದೆ. ಹೀಗಾಗಿ, ತಕ್ಷಣವೇ ಚಿತ್ರೋದ್ಯಮದ ನೆರವಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಅವರು ಮನವಿಯಲ್ಲಿ ಕೋರಿದ್ದಾರೆ.

2020ರ ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿತ್ರೋದ್ಯಮದ 6 ಸಾವಿರ ಕುಟುಂಬಗಳಿಗೆ ತಲಾ 3 ಸಾವಿರ ಮೌಲ್ಯದ ದಿನಸಿ ಪಡಿತರ ಕೂಪನ್ ಅನ್ನು ಸರಕಾರದ ವತಿಯಿಂದ ನೀಡಿದ್ದನ್ನು ಚಿತ್ರರಂಗ ಸ್ಮರಿಸುತ್ತದೆ. ಹಾಗೆಯೇ ಇಂದಿನ ಸಂಕಷ್ಟದ ಸಮಯದಲ್ಲೂ ಕನಿಷ್ಠ ತಲಾ 5 ಸಾವಿರ ಮೌಲ್ಯದ ಆಹಾರ ಪಡಿತರ ಕೂಪನ್ ಹಾಗೂ ಇತರೆ ವಿಶೇಷ ನೆರವನ್ನು ನೀಡಿದಲ್ಲಿ ಚಿತ್ರೋದ್ಯಮಕ್ಕೆ ಕನಿಷ್ಠ ಆಸರೆ ಆದದಂತಾಗುತ್ತದೆ ಹಾಗೂ ಚಿತ್ರೋದ್ಯಮವನ್ನು ಆದ್ಯತೆ ಎಂದು ಪರಿಗಣಿಸಿ ಕೋವಿಡ್ ಲಸಿಕೆಯನ್ನು ಹಾಕಲು ಪ್ರತ್ಯೇಕವಾದ ವ್ಯವಸ್ಥೆ ಮಾಡುವಂತೆ ಅವರು ಕೋರಿದ್ದಾರೆ.

ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮೊದಲ ಹಂತದ ಪ್ಯಾಕೇಜ್‍ನಲ್ಲಿ ಕೆಲವರ ಹೆಸರು ಬಿಟ್ಟು ಹೋಗಿರುವುದು ತಮ್ಮ ಗಮನಕ್ಕೆ ಬಂದಿದ್ದು ಮುಂದಿನ ಪ್ಯಾಕೇಜ್ ಘೋಷಣೆ ಸಂದರ್ಭದಲ್ಲಿ ಚಿತ್ರೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿರುವುದಾಗಿ ಪುರಾಣಿಕ್ ತಿಳಿಸಿದರು.

ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ಕೋವಿಡ್ ಸಂದರ್ಭದಲ್ಲಿ ಸಾಧ್ಯವಿಲ್ಲದಿರುವುದರಿಂದ ಅಕಾಡಮಿಯೊಂದಿಗೆ ಸಹಕರಿಸಿದ ಚಿತ್ರೋದ್ಯಮದ ಎಲ್ಲ ವಿಭಾಗದ ಸಂಘಟನೆಗಳಿಗೆ ಸುನೀಲ್ ಪುರಾಣಿಕ್ ಧನ್ಯವಾದ ತಿಳಿಸಿದ್ದಾರೆ. ಚಲನಚಿತ್ರ ನಿರ್ಮಾಪಕ ಹಾಗೂ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್‍ಲೈನ್ ವೆಂಕಟೇಶ್ ನಿಯೋಗದಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News