ಮೂಡಿಗೆರೆಯಲ್ಲಿ ಮಹಿಳೆಗೆ ಹಲ್ಲೆ ನಡೆಸಿದ ಪ್ರಕರಣ: ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಎಫ್‍ಐಆರ್

Update: 2021-05-25 17:02 GMT
ಜಿಲ್ಲಾಧಿಕಾರಿ ಕೆ.ಎನ್.ರಮೇಶ್

ಚಿಕ್ಕಮಗಳೂರು, ಮೇ 25: ಲಾಕ್‍ಡೌನ್ ಇದ್ದರೂ ಅಕ್ರಮವಾಗಿ ಕಿರುಚಿತ್ರ ನಿರ್ಮಾಣ ಮಾಡಿರುವುದು, ಮೂಡಿಗೆರೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಗಿರೀಶ್ ಮಹಿಳೆಯೋರ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣಗಳು ಗಮನಕ್ಕೆ ಬರುತ್ತಿದ್ದಂತೆಯೇ ಈ ಎರಡೂ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾಹಿತಿ ನೀಡಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು ತಪ್ಪು ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶವನ್ನು ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳಿಗೆ ಪತ್ರದ ಮೂಲಕ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತ ಕಠಿಣ ಲಾಕ್‍ಡೌನ್ ಜಾರಿಗೊಳಿಸಿದ ಪರಿಣಾಮ ಜಿಲ್ಲಾದ್ಯಂತ ಸೋಂಕಿನ ಪ್ರಮಾಣ ನಿಧಾನ ಗತಿಯಲ್ಲಿ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ 10-15 ದಿನಗಳ ಹಿಂದೆ ಹಾಸಿಗೆ, ಆಕ್ಸಿಜನ್‍ಗೆ ಇದ್ದ ಬೇಡಿಕೆ ಈಗ ಕಡಿಮೆಯಾಗಿದೆ. ಕಠಿಣ ಲಾಕ್‍ಡೌನ್‍ನಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಜೀವ ಮತ್ತು ಜೀವನದ ಪ್ರಶ್ನೆ ಎದುರಾದಾಗ ಜೀವ ಉಳಿಸುವುದು ಮೊದಲ ಆದ್ಯತೆಯಾಗಬೇಕು. ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದು ಹೇಳಿದ್ದಾರೆ.

ಸೋಂಕು ನಿಯಂತ್ರಣದ ಉದ್ದೇಶದಿಂದ ಜಿಲ್ಲೆಯಲ್ಲಿ ಕಠಿಣ ಲಾಕ್‍ಡೌನ್ ಅನಿವಾರ್ಯವಾಗಿತ್ತು. ಈ ಕಾರಣಕ್ಕೆ ಜಿಲ್ಲೆಯಲ್ಲಿ ಮತ್ತೆ ನಾಲ್ಕು ದಿನಗಳ ಕಾಲ ಕಠಿಣ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಜೀವ ಮತ್ತು ಜೀವನದ ಪ್ರಶ್ನೆ ಈಗ ಎದುರಾಗಿದೆ. ಜಿಲ್ಲಾಡಳಿತ ಜೀವ ಉಳಿಸಲು ಆದ್ಯತೆ ನೀಡಿದೆ. ಜನರು ಕೆಲ ದಿನಗಳವರೆಗೆ ಇದಕ್ಕೆ ಸಹಕರಿಸಬೇಕು. ಸೋಮವಾರ ಮಾಹಿತಿ ಕೊರತೆಯಿಂದಾಗಿ ಜನರು ಗೊಂದಲಕ್ಕೀಡಾಗಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಜನರು ಮನೆಯಿಂದ ಹೊರಬಂದಿದ್ದರಿಂದ ಜನಜಂಗುಳಿ ಏರ್ಪಟ್ಟಿದೆ. ತಕ್ಷಣ ಧ್ವನಿವರ್ಧಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿಲಾಗಿದೆ. ಜಿಲ್ಲಾಡಳಿತದ ಆದೇಶವನ್ನು ಪಾಲನೆ ಮಾಡಬೇಕೆಂದು ತಿಳುವಳಿಕೆ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು ಎಂದರು.

ನಗರದಲ್ಲಿ ಸಾವಿರ ಲೀ. ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ತ್ವರಿತಗತಿಯಲ್ಲಿ ಪ್ರಯತ್ನಿಸಲಾಗುತ್ತಿದೆ. ಗುಜರಾತ್‍ನಿಂದ ಯಂತ್ರ ಬರಬೇಕು. ಇದಕ್ಕೆ ನಿರಂತರ ಪ್ರಯತ್ನ ಮಾಡಲಾಗುತ್ತಿದೆ. ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣದ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಅಲ್ಲದೇ ಮೆಡಿಕಲ್ ಕಾಲೇಜ್‍ಗೆ ಬೇಕಾಗುವ 31 ಸಿಬ್ಬಂದಿಯ ನೇಮಕ ಮಾಡಲು ಪ್ರಯತ್ನಿಸಲಾಗುತ್ತಿದೆ. ಇದರಿಂದ ಕೋವಿಡ್ ನಿರ್ವಹಣೆಗೆ ಅನುಕೂಲವಾಗಲಿದೆ ಎಂದರು.

ಸೋಂಕಿತರಿಗೆ ತೊಂದರೆಯಾಗದಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಜನರ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿ ಜಿಲ್ಲಾಡಳಿತ ಕೆಲಸ ಮಾಡುತ್ತಿದೆ. ಸೋಂಕಿತರು ಕಷ್ಟಕ್ಕೆ ಒಳಗಾಗದಂತೆ ಖಾಸಗಿ ಆಸ್ಪತ್ರೆಗಳಿಗೂ ನೆರವು ನೀಡಿ ಜನರ ಜೀವ ಉಳಿಸುವ ಕೆಲಸ ಮಾಡಿದ್ದೇವೆ. ಜಿಲ್ಲೆಯ 8 ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಓರ್ವ ವೈದ್ಯ, ಓರ್ವ ನರ್ಸ್ ಅನ್ನು ನೇಮಕ ಮಾಡಲಾಗಿದೆ. ಸೋಂಕು ಗುಣಮುಖವಾಗುವರೆಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯಲು ಸೋಂಕಿತರು ಮುಂದಾಗಬೇಕು. ಇಂದಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತರು ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ಸಂಬಂಧ ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿ, ಅವರಿಗೆ ಆತ್ಮಸ್ಥೈರ್ಯವನ್ನು ತುಂಬಲಾಗಿದೆ. ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಪರಿಹರಿಸುವ ಕೆಲಸವನ್ನು ಜಿಲ್ಲಾಡಳಿತದಿಂದ ಮಾಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗಳಿಗೆ ಭೇಟಿನೀಡಿ ಅಗತ್ಯವಿದ್ದವರಿಗೆ ಅಂಬುಲೆನ್ಸ್ ವ್ಯವಸ್ಥೆ ಹಾಗೂ ಮೆಡಿಸಿನ್ ಕಿಟ್‍ಗಳನ್ನು ನೀಡುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಶೇ.70ರಷ್ಟು ಆಶಾ ಕಾರ್ಯಕರ್ತೆಯರು ಕಾರ್ಯಪ್ರವೃತ್ತರಾಗಿದ್ದಾರೆ. ಪಿಡಿಒ, ಗ್ರಾಮ ಪಂಚಾಯತ್ ಸದಸ್ಯರು ಕೋವಿಡ್ ನಿಯಂತ್ರಣಕ್ಕೆ ಸಹಕರಿಸುತ್ತಿದ್ದಾರೆ. ಜನರೂ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.

ಯಾವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆಯೋ ಅಂತಹ ಗ್ರಾಮಗಳನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಗಮನ ಹರಿಸಲಾಗುವುದು. ತಾಲೂಕು ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು, ಕೇರ್ ಸೆಂಟರ್ ಗಳಿಗೆ ಬೇಕಾಗುವ ಮೆಡಿಸಿನ್, ಆಯುಷ್ ಮೆಡಿಸಿನ್‍ಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದ ಅವರು, ಗ್ರಾಮೀಣ ಪ್ರದೇಶದ ಜನರಲ್ಲಿ ಇಂದಿಗೂ ಉದಾಸೀನತೆ ಇದೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೂ ಕೋವಿಡ್ ಜಾಗೃತಿ ಮೂಡಿಸಲಾಗುತ್ತಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಾಸಕರು, ಸಚಿವರು ಗ್ರಾಮೀಣ ಪ್ರದೇಶಗಳಲ್ಲಿ ಸಭೆಗಳನ್ನು ನಡೆಸಿ ಅರಿವು ಮೂಡಿಸಲಾಗುತ್ತಿದೆ. ಜನರು ಆತಂಕಕ್ಕೆ ಒಳಗಾಗುವುದು ಬೇಡ. ಸ್ವಯಂ ರಕ್ಷಣೆಗೆ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದರು.

ಸ್ಟೀರಾಯಿಡ್ ಮತ್ತು ಆಕ್ಸಿಜನ್‍ಗೆ ಡಿಸ್ಟೆಲ್ ವಾಟರ್ ಬಳಕೆಯಿಂದ ಕಪ್ಪು ಶೀಲಿಂದ್ರ ರೋಗಕ್ಕೆ ಕಾರಣವಾಗುತ್ತದೆ ಎಂದು ಹೇಳಲಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿದ್ದರಿಂದ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಕಪ್ಪು ಶೀಲಿಂದ್ರ ರೋಗದ ಪ್ರಕರಣಗಳು ಸಮಸ್ಯೆ ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಇದೇ ವೇಳೆ ಹೇಳಿದರು.

ಮೈಕ್ರೋ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿ ಒತ್ತಡ ಹೇರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಜನರು ಸಂಕಷ್ಟದಲ್ಲಿರುವುದರಿಂದ ಸಾಲ ವಸೂಲಾತಿಯನ್ನು ಮುಂದೂಡಲು ಸಂಸ್ಥೆಗಳಿಗೆ ತಿಳುವಳಿಕೆ ಪತ್ರಗಳನ್ನು ನೀಡಲಾಗುವುದು.
-ಕೆ.ಎನ್.ರಮೇಶ್, ಜಿಲ್ಲಾಧಿಕಾರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News