ಬಡವರಿಗೆ ಸೂರು ಒದಗಿಸುವಲ್ಲಿ ವಿಳಂಬ ಮಾಡಿದರೆ ಕಠಿಣ ಕ್ರಮ: ಸಚಿವ ವಿ.ಸೋಮಣ್ಣ ಎಚ್ಚರಿಕೆ

Update: 2021-05-25 17:41 GMT

ಬೆಂಗಳೂರು, ಮೇ 25: ಬಡವರಿಗೆ ಸೂರು ಒದಗಿಸುವ ಕೆಲಸದಲ್ಲಿ ಯಾವುದೇ ಅಧಿಕಾರಿಗಳು ವಿಳಂಬ, ಕರ್ತವ್ಯಲೋಪ ಎಸಗಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದೆಂದು ವಸತಿ ಸಚಿವ ವಿ.ಸೋಮಣ್ಣ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಪ್ರಧಾನಮಂತ್ರಿ ವಸತಿ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಸಲುವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಲಭ್ಯವಿರುವ 445 ಎಕರೆ ಸರಕಾರಿ ಭೂಮಿಯನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರಿಸಲು ಬಿಬಿಎಂಪಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಿಸುತ್ತಿರುವ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ 316 ಎಕರೆಯಲ್ಲಿ 46 ಸಾವಿರ ಮನೆಗಳ ನಿರ್ಮಾಣ ವಿವಿಧ ಹಂತಗಳಲ್ಲಿದ್ದು, ಆ.15ರಂದು ಐದು ಸಾವಿರ ಮನೆಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಡವರಿಗೆ ವಿತರಿಸಲಿದ್ದಾರೆಂದು ಅವರು ತಿಳಿಸಿದ್ದಾರೆ.

ಕೊಳಚೆ ಅಭಿವೃದ್ಧಿ ಮಂಡಳಿ ಮೂಲಕ 1.80 ಲಕ್ಷ ಮನೆ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಮನೆಗಳ ನಿರ್ಮಾಣ ಬಹತೇಕ ಪೂರ್ಣವಾಗಲಿದೆ. ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳು 70 ಸಾವಿರ ಮನೆಗಳನ್ನು ನಿರ್ಮಿಸುವ ಜವಾಬ್ದಾರಿ ಹೊತ್ತಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಶಾಸಕರಾದ ಆರ್. ಮಂಜುನಾಥ್, ಮುನಿರತ್ನ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥಪ್ರಸಾದ್, ವಸತಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧಿ ವಸತಿ ನಿಗಮದ ಬಸವರಾಜ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ, ಭೂಮಾಪನ ಹಾಗೂ ಭೂ ದಾಖಲೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಎಲ್ಲ ಶಾಸಕರಿಗೂ ತಮ್ಮ ವ್ಯಾಪ್ತಿಯಲ್ಲಿ ಶೇ 50ರಷ್ಟು ಮನೆಗಳನ್ನು ಬಡವರಿಗೆ ವಿತರಿಸಲು ಅವಕಾಶ ಮಾಡಿಕೊಡಲಾಗುವುದು. ಆದರೆ, ಅರ್ಹರಿಗೆ ಮಾತ್ರ ಮನೆಗಳನ್ನು ಹಂಚಬೇಕು. ಬಡವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಮನೆಗಳನ್ನು ನೀಡಲಾಗುತ್ತಿದೆ. ತಲಾ 7 ಲಕ್ಷ ರೂ.ನಿಗದಿಪಡಿಸಿದ್ದ ದರಗಳನ್ನು 5 ಲಕ್ಷ ರೂ.ಇಳಿಸಲಾಗಿದೆ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ 4.20 ರೂ.ಲಕ್ಷ ನಿಗದಿಪಡಿಸಲು ಚಿಂತನೆ ನಡೆದಿದೆ.

-ವಿ.ಸೋಮಣ್ಣ, ವಸತಿ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News