×
Ad

ಉಡುಪಿ ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆ ಎದುರಿಸಲು ಸಿದ್ಧತೆ: ಡಿಸಿ ಜಗದೀಶ್

Update: 2021-06-01 20:34 IST

ಉಡುಪಿ, ಜೂ.1: ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ 2ನೇ ಅಲೆಯು ಇಳಿಮುಖವಾಗುತಿದ್ದು, ಮುಂದೆ ಕೋವಿಡ್ 3ನೇ ಅಲೆ ಕಂಡು ಬರುವ ಸಾಧ್ಯತೆ ಗಳ ಹಿನ್ನಲೆಯಲ್ಲಿ ಈಗಿನಿಂದಲೇ ಅದನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವ ಅಗತ್ಯವಿದೆ. ಈ ಬಗ್ಗೆ ಜಿಲ್ಲೆಯ ವೈದ್ಯಕೀಯ ಪರಿಣಿತರ ತಂಡದ ಸದಸ್ಯರು ಸೂಕ್ತ ಯೋಜನೆ ರೂಪಿಸಲು ತಮ್ಮ ಸಲಹೆಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮೆಡಿಕಲ್ ಎಕ್ಸ್‌ಪರ್ಟ್ ಸಮಿತಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೋವಿಡ್ ಮೊದಲನೇ ಅಲೆಯ ಪರಿಣಾಮ 60 ವರ್ಷ ಮೇಲ್ಟಟ್ಟವರಲ್ಲಿ ಕಂಡುಬಂದಿದ್ದರೆ, ಎರಡನೇ ಅಲೆಯ ಪರಿಣಾಮ 30ರಿಂದ 55 ವರ್ಷದ ವಯೋಮಾನದವರಲ್ಲಿ ಹೆಚ್ಚು ಕಂಡುಬಂದಿತ್ತು. ಪ್ರಸ್ತುತ ಈ ಎಲ್ಲಾ ವಯೋಮಿತಿಯವರಿಗೆ ಲಸಿಕೆ ನೀಡಲಾಗುತ್ತಿದ್ದು, 3ನೇ ಅಲೆಯ ಪರಿಣಾಮ ಗಳು 18ಕ್ಕಿಂತ ಕಡಿಮೆ ವಯೋಮಾನದವರಲ್ಲಿ ಕಂಡು ಬರುವ ಸಾಧ್ಯತೆಗಳಿವೆ. ಕೋವಿಡ್ ಮೊದಲನೇ ಮತ್ತು 2ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹರಡಿರುವ ಪ್ರಮಾಣ ಶೇ.3ರಷ್ಟು ಮಾತ್ರ ಇದ್ದು, ಮಕ್ಕಳಿಗೆ 3ನೇ ಅಲೆ ಹರಡುವ ಕುರಿತು ಸ್ಪಷ್ಟ ಚಿತ್ರಣ ಇಲ್ಲವಾದರೂ ಸಹ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದರು.

3ನೇ ಅಲೆ ಎದುರಿಸಲು ಜಿಲ್ಲೆಯಲ್ಲಿ ಅಗತ್ಯವಿರುವ ಬೆಡ್‌ಗಳ ಸಂಖ್ಯೆಯನ್ನು ಈಗಲೇ ಗುರುತಿಸಿಕೊಳ್ಳಬೇಕು. ಸಾಧ್ಯವಾದಲ್ಲಿ ಬೆಡ್‌ಗಳ ಸಂಖ್ಯೆಯನ್ನು ಹೆಚ್ಚು ಮಾಡಬೇಕು. ಅಗತ್ಯ ವೈದ್ಯಕೀಯ ಮೂಲ ಸೌಕರ್ಯಗಳನ್ನು ಸಿದ್ಧವಾಗಿಟ್ಟು ಕೊಳ್ಳಬೇಕು. ಅಷ್ಟರಲ್ಲಿ ಮಕ್ಕಳಿಗೆ ಲಸಿಕೆ ದೊರೆತರೆ ಸೋಂಕು ಹರಡುವ ಪ್ರಮಾಣ ಕಡಿಮೆಯಾಗಲಿದೆ ಎಂದು ತಜ್ಞರ ಸಮಿತಿ ಅಭಿಪ್ರಾಯ ಪಟ್ಟಿತು.

ಕೋವಿಡ್ 3ನೇ ಅಲೆಯು ಮಕ್ಕಳಿಗೆ ಬಾಧಿಸಿದಲ್ಲಿ, ಈ ಬಗ್ಗೆ ಚಿಕಿತ್ಸೆ ನೀಡಲು ಅಗತ್ಯವಿರುವ ವೈದ್ಯರು ಮತ್ತು ಸಹಾಯಕ ಸಿಬ್ಬಂದಿಗಳಿಗೆ, ಮಕ್ಕಳಿಂದ ಸ್ವಾಬ್ ಸಂಗ್ರಹ ಸೇರಿದಂತೆ ಅಗತ್ಯ ತರಬೇತಿ ನೀಡಿ ಸಿದ್ಧಪಡಿಸಿಟ್ಟುಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಮಕ್ಕಳಿಗೆ ಚಿಕಿತ್ಸೆ ನೀಡುವ ವಿಧಾನಗಳ ಕುರಿತ ಕೈಪಿಡಿಯನ್ನು ಸಿದ್ಧಪಡಿಸಿಕೊಳ್ಳುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಾವಿನ ಸಮೀಕ್ಷೆ (ಡೆತ್ ಅನಾಲಿಸಿಸ್) ಮಾಡಿ ವರದಿಯನ್ನು ನೀಡಿ. ಇದರಿಂದ ಸೋಂಕಿತರ ಹಿನ್ನಲೆ, ಮರಣದ ಕಾರಣಗಳು ಸೇರಿದಂತೆ ಇನ್ನಿತರ ವಿವರಗಳು ಸಂಪೂರ್ಣ ವಾಗಿ ದೊರೆಯಲಿದ್ದು, ಇದರಿಂದ ಜಿಲ್ಲೆಯಲ್ಲಿ ಮುಂದೆ ಕೋವಿಡ್ ಸಾವುಗಳು ಸಂಭವಿಸದಂತೆ ಮುಂಜಾಗ್ರತೆಯಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸ್ಪಷ್ಟ ಯೋಜನೆ ರೂಪಿಸಲು ಸಾಧ್ಯವಾಗಲಿದೆ ಎಂದರು.

ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವು ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿ ಯಾಗಿ ನಡೆಯುತ್ತಿದ್ದು, ಐಎಂಎ ವತಿಯಿಂದ ಸಹ ಈ ಕಾರ್ಯಕ್ರಮಕ್ಕೆ ವೈದ್ಯರನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಿನಿಂದಲೇ ಮಕ್ಕಳ ಸ್ನೇಹಿಯಾಗಿ ಅವರ ದಿನನಿತ್ಯದ ಆರೋಗ್ಯ ಪರಿಶೀಲನೆ, ಮಕ್ಕಳ ಪಲ್ಸ್ ಆಕ್ಸಿಮೀಟರ್ ಬಳಕೆ ವಿಧಾನಗಳ ಬಗ್ಗೆ ತರಬೇತಿ ನೀಡಿ ಸಿದ್ದಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಡಾ. ಪ್ರೇಮಾನಂದ ಹಾಗೂ ಜಿಲ್ಲೆಯ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರು ಮತ್ತು ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಮಕ್ಕಳ ಸ್ನೇಹಿ ಕೋವಿಡ್ ಕೇರ್ ಸೆಂಟರ್ 

ಜಿಲ್ಲೆಯಲ್ಲಿ ಮಕ್ಕಳ ಸ್ನೇಹಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಸಿದ್ಧ ಮಾಡಿಟ್ಟು ಕೊಳ್ಳಬೇಕು. ಅಗತ್ಯವಿದ್ದಲ್ಲಿ ಮಕ್ಕಳ ಜೊತೆಗೆ ಪೋಷಕರು ತಂಗಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಮಕ್ಕಳ ಮಾಸ್ಕ್‌ಗಳ ದಾಸ್ತಾನು ಸಂಗ್ರಹ ಸಿದ್ಧವಿರಲಿ. ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 107 ಬೆಡ್‌ಗಳನ್ನು ಮಕ್ಕಳ ಚಿಕಿತ್ಸೆಗೆ ಗುರುತಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ವೈದ್ಯಕೀಯ ಉಪಕರಣಗಳನ್ನು ಖರೀದಿಸುವಾಗ ಮಕ್ಕಳಿಗೆ ಕೋವಿಡ್ ಚಿಕಿತ್ಸೆಗೆ ಮಾತ್ರವಲ್ಲದೇ, ಮುಂದಿನ ದಿನಗಳಲ್ಲಿ ಸಹ ಮಕ್ಕಳ ಇತರೇ ಯಾವುದೇ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಬಹುದಾದಂತಹ ಬಹುಪಯೋಗಿ ಉಪಕರಣಗಳನ್ನು ಖರೀದಿಸಿ. ಇದರಿಂದ ಜಿಲ್ಲೆಯಲ್ಲಿ ಮಕ್ಕಳ ಆರೋಗ್ಯಕ್ಕಾಗಿ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಹೆಚ್ಚಾಗುತ್ತವೆ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News