ಲಾಕ್ಡೌನ್ನಿಂದ ಊಟಕ್ಕೂ ಪರದಾಟ: ವರೋನಿಕಾ ಕರ್ನೆಲಿಯೊ
Update: 2021-06-07 20:56 IST
ಉಡುಪಿ, ಜೂ.7: ಕೊರೋನಾ ಅಲೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೇರಲಾಗಿರುವ ಲಾಕ್ಡೌನ್ನಿಂದಾಗಿ ಬಡ ಹಾಗೂ ಮಧ್ಯಮ ವರ್ಗದವರು ಕನಿಷ್ಠ ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿಯನ್ನು ರಾಜ್ಯ ಸರಕಾರ ತಂದೊಡ್ಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೊ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಇಷ್ಟು ದಿನದ ಲಾಕ್ ಡೌನ್ ಮಾಡಿರುವುದರಿಂದ ಮಧ್ಯಮ ಹಾಗೂ ಬಡವರ್ಗದ ಜನ ತಮ್ಮ ನೋವನ್ನು ಹೇಳಿಕೊಳ್ಳಲು ಆಗದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಆಡಳಿತ ನೀಡುವ ಸರಕಾರ ಕನಿಷ್ಠ ಆ ಕುಟುಂಬಗಳಿಗೆ ದಿನಸಿ ಕಿಟ್ ನೀಡುವ ಅವರ ನೆರವಿಗೆ ಬರಬೇಕಾಗಿತ್ತು ಆದರೆ ಸರಕಾರ ತನಗೂ ಇದಕ್ಕೂ ಯಾವುದೇ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಖಂಡನೀಯ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.