×
Ad

ಸರಕಾರಿ ಜಮೀನು ಒತ್ತುವರಿ ಪ್ರಕರಣ ಪತ್ತೆಹಚ್ಚಿ ಅತಿಕ್ರಮಣ ತೆರವುಗೊಳಿಸಿ: ಉಡುಪಿ ಜಿಲ್ಲಾಧಿಕಾರಿ ಸೂಚನೆ

Update: 2021-06-09 19:18 IST

ಉಡುಪಿ, ಜೂ.9: ಜಿಲ್ಲೆಯಲ್ಲಿ ಸರಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಆಯಾ ತಾಲೂಕು ತಹಶೀಲ್ದಾರರುಗಳು ವೈಯಕ್ತಿಕ ಗಮನಹರಿಸಿ ತಮ್ಮ ತಾಲೂಕು ವ್ಯಾಪ್ತಿಯ ಎಲ್ಲಾ ಸ್ಥಳಗಳಿಗೆ ಭೇಟಿ ನೀಡಿ, ಸರಕಾರಿ ಜಮೀನುಗಳು ಅತಿಕ್ರಮಣ ವಾಗಿರುವ ಪ್ರಕರಣಗಳನ್ನು ಪತ್ತೆಹಚ್ಚಿ, ಇಂಥ ಅತಿಕ್ರಮಣಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಕಂದಾಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಜಮೀನನ್ನು ಸರಕಾರದ ವಶಕ್ಕೆ ಪಡೆದು ಸೂಚನಾ ಬೋರ್ಡ್ ಹಾಗೂ ತಡೆಬೇಲಿಯನ್ನು ಅಳವಡಿಸಿ. ಸರಕಾರಿ ಜಮೀನನ್ನು ಅತಿಕ್ರಮಣ ಮಾಡಿದವರ ವಿರುದ್ಧ ಕಾನೂನು ಕ್ರಮ ಜರಗಿಸಲು ಹಾಗೂ ಇದಕ್ಕೆ ಸಹಕಾರ ನೀಡಿ ಅತಿಕ್ರಮಣಕ್ಕೆ ಕಾರಣರಾದ ಕಂದಾಯ ಇಲಾಖಾ ನೌಕರರ ವಿರುದ್ಧ ಶಿಸ್ತು ಕ್ರಮಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದವರು ತಿಳಿಸಿದ್ದಾರೆ.

ಈ ಕುರಿತು ತಹಶೀಲ್ದಾರರುಗಳು ಪ್ರತಿದಿನ ಕೈಗೊಂಡ ಕ್ರಮದ ಬಗ್ಗೆ ವಿಸ್ತೃತ ವರದಿಯನ್ನು ಜೂ.11ರ ಸಂಜೆ 4 ಗಂಟೆಯ ಒಳಗೆ ಜಿಲ್ಲಾಧಿಕಾರಿ ಕಚೇರಿಗೆ, ಕುಂದಾಪುರ ಸಹಾಯಕ ಕಮೀಷನರ್ ಮೂಲಕ ಇ-ಮೇಲ್‌ನಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News