ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬೀದಿಗಿಳಿದ ಕಾಂಗ್ರೆಸ್: ಸಿದ್ದರಾಮಯ್ಯ ಸೇರಿ ಮುಖಂಡರ ಬಂಧನ, ಬಿಡುಗಡೆ

Update: 2021-06-11 12:19 GMT

ಬೆಂಗಳೂರು, ಜೂ. 11: `ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳ ವಿರುದ್ಧ ಸಿಡಿದೆದ್ದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ), `100 ನಾಟ್ ಔಟ್' ಆಂದೋಲನದ ಅಂಗವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೇ ಬೀದಿಗಿಳಿದು ಪ್ರತಿಭಟನೆಯನ್ನು ಆರಂಭಿಸಿದೆ.

ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಈ ಪ್ರತಿಭಟನಾ ಆಂದೋಲನಕ್ಕೆ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಬಳಿ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುವ ಮೂಲಕ ಚಾಲನೆ ನೀಡಿದರು. `ಕಚ್ಚಾ ತೈಲ ಬೆಲೆ ಹೆಚ್ಚಿದ್ದ ವೇಳೆ ಲೀಟರ್ ಪೆಟ್ರೋಲ್ 1 ರೂ.ಹೆಚ್ಚಳ ಮಾಡಿದರೆ ಬೀದಿಗಿಳಿಯುತ್ತಿದ್ದ ಬಿಎಸ್‍ವೈ, ಡಿವಿಎಸ್, ಶೆಟ್ಟರ್, ಈಶ್ವರಪ್ಪ, ಶೋಭಾ ಅವರೇ ಎಲ್ಲಿ ನಿಮ್ಮ ಆಕ್ರೋಶ' ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, `ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಜೇಬಿಗೆ ಕನ್ನ ಹಾಕುತ್ತಿರುವ ಕೇಂದ್ರ ಸರಕಾರದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ `100 ನಾಟ್ ಔಟ್' ಆಂದೋಲನ ಆರಂಭಿಸಿದ್ದು, `ಬಿಜೆಪಿಯದ್ದು ಪಿಕ್ ಪಾಕೆಟ್ ಸರಕಾರವಾಗಿದೆ' ಎಂದು ವಾಗ್ದಾಳಿ ನಡೆಸಿದರು.

'ಬಹಳ ವಿಶೇಷ ಹಾಗೂ ಐತಿಹಾಸಿಕ ದಿನಕ್ಕೆ ನಾವೆಲ್ಲ ಸಾಕ್ಷಿಯಾಗಿದ್ದೇವೆ. ಕೇಂದ್ರ ಸರಕಾರ ದೇಶದ ಪ್ರತಿಯೊಬ್ಬ ಪ್ರಜೆಗೂ ಬರೆ ಎಳೆದಿದೆ. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ, ಕೇವಲ ಪೆಟ್ರೋಲ್, ಡೀಸೆಲ್ ಹಾಕಿಸಿಕೊಂಡು ವಾಹನ ಚಲಾಯಿಸುವವರಿಗೆ ಮಾತ್ರ ಪರಿಣಾಮ ಬೀರುತ್ತಿಲ್ಲ. ಪ್ರತಿ ನಾಗರಿಕನೂ ಖರೀದಿಸುವ ಪ್ರತಿ ವಸ್ತುಗಳು ದುಬಾರಿಯಾಗುವಂತೆ ಬರೆ ಎಳೆದಿದ್ದಾರೆ' ಎಂದು ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

''ಕೇಂದ್ರ ಸರಕಾರದ ಜನ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಹಿಂದೆ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಸಾಕಷ್ಟು ಹೋರಾಟ ಮಾಡಿದ್ದನ್ನು ನಾವು ನೋಡಿದ್ದೇವೆ. ಇದೇ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಹಾಗೂ ಸಚಿವರೆಲ್ಲರು ಯುಪಿಎ ಸರಕಾರದ ಅವಧಿಯಲ್ಲಿ ಒಂದೆರಡು ರೂಪಾಯಿ ಹೆಚ್ಚಾದಾಗ ಗಲಾಟೆ ಮಾಡಿದ್ದರು. ಆದರೆ, ಕೇಂದ್ರದ ಬಿಜೆಪಿ ಸರಕಾರ ಈ ವರ್ಷ ಜನವರಿಯಿಂದ ಇಲ್ಲಿಯವರೆಗೂ 42ಕ್ಕೂ ಹೆಚ್ಚು ಬಾರಿ ಬೆಲೆ ಏರಿಕೆ ಮಾಡಿದೆ. ಎಪ್ರಿಲ್‍ನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ದರ ಹೆಚ್ಚಾಗಲಿಲ್ಲ. ಅದನ್ನು ಬಿಟ್ಟರೆ ಉಳಿದ ಐದು ತಿಂಗಳೂ ಬೆಲೆ ಹೆಚ್ಚಳ ಮಾಡಿದೆ''

''ಕೇಂದ್ರ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಿಸಿ, 20.60 ಲಕ್ಷ ಕೋಟಿ ರೂ.ತೆರಿಗೆ ಸಂಗ್ರಹಿಸಿದೆ. ಸರಕಾರ ತನ್ನ ಆದಾಯ ವೃದ್ಧಿ ಮಾಡಿಕೊಳ್ಳಲು, ಬೊಕ್ಕಸ ತುಂಬಿಸಿಕೊಳ್ಳಲು ಎಲ್ಲ ಪದಾರ್ಥಗಳ ಬೆಲೆ ಹೆಚ್ಚಳ ಮಾಡುತ್ತಿದೆ. ಇದು ಜನರ ನಿತ್ಯ ಬದುಕಿನಲ್ಲಿ ಸಮಸ್ಯೆ ಉಂಟು ಮಾಡುತ್ತಿದೆ. ಕೇಂದ್ರ ಸರಕಾರ ಜನರ ಜೇಬಿಗೆ ಕನ್ನ ಹಾಕುತ್ತಿದ್ದು, ಇದೊಂದು ಪಿಕ್ ಪಾಕೆಟ್ ಸರಕಾರ. ಇದರ ಬಗ್ಗೆ ನಾವು ಜನರಲ್ಲಿ ತಿಳಿವಳಿಕೆ ಮೂಡಿಸಿ, ಹೋರಾಟ ಮಾಡಬೇಕಿದೆ' ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ಈ ಹಿಂದೆ ಇಂಧನ ಬೆಲೆ ಎಷ್ಟಿತ್ತು, ಈಗ ಎಷ್ಟಾಗಿದೆ ಎಂದು ನಾವು ತಿಳಿಸಿದ್ದೇವೆ. ಕೇಂದ್ರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಸಿ ತೈಲಬೆಲೆಗೆ ಅನುಗುಣವಾಗಿ ದರ ಇಳಿಸಬೇಕು. ಜನರಿಗೆ ಹಣ ವಾಪಸ್ ನೀಡಬೇಕು, ಜನರಿಂದ ದೋಚುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ನಾವಿಂದು ಪ್ರತಿಭಟನೆ ಆರಂಭಿಸಿದ್ದು, ರಾಜ್ಯದಲ್ಲಿ ಒಟ್ಟು 5 ಸಾವಿರ ಕಡೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಹೋರಾಟ 5 ದಿನಗಳ ಕಾಲ ನಡೆಯಲಿದ್ದು, ಇಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.

ನಾಳೆ ತಾಲೂಕು ಕೇಂದ್ರ, ನಾಡಿದ್ದು ಜಿಲ್ಲಾ ಪಂಚಾಯತ್ ಮತ್ತು ಹೋಬಳಿ ಕೇಂದ್ರಗಳಲ್ಲಿ ಜೂ.14ರಂದು ಗ್ರಾಮ ಪಂಚಾಯತ್ ವ್ಯಾಪ್ತಿ ಪೆಟ್ರೋಲ್ ಬಂಕ್ ಬಳಿ ಹಾಗೂ 15 ರಂದು ಇತರೆ ಕಡೆಗಳಲ್ಲಿ ಪ್ರತಿಭಟನೆ ಮಾಡಲಿದ್ದೇವೆ. ನಮ್ಮ ಎಲ್ಲ ನಾಯಕರು ಇದೇ ರೀತಿ ಕೋವಿಡ್ ನಿಯಮ ಪಾಲನೆ ಮಾಡಿಕೊಂಡು ಅಂತರ ಕಾಪಾಡಿಕೊಂಡು ಪ್ರತಿಭಟನೆ ಮಾಡಬೇಕು. ಸರಕಾರ ಕೋವಿಡ್ ಇದ್ದರೂ ಚುನಾವಣೆ ನಡೆಸಿದೆ. ಆದರೂ, ಅವರ ಮೇಲೆ ಪ್ರಕರಣ ದಾಖಲಾಗಿಲ್ಲ. ಆದರೆ, ನಮಗೆ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನೀವು ಚುನಾವಣೆ ನಡೆಸಿದ್ದಕ್ಕೆ, ದೇವಾಲಯಕ್ಕೆ ಹೋಗಿದ್ದಕ್ಕೆ ಹಾಗೂ ಹೋಮಗಳನ್ನು ಮಾಡಿದ್ದಕ್ಕೆ ಏಕೆ ಪ್ರಕರಣ ದಾಖಲಿಸಿಲ್ಲ. ನಿಮ್ಮ ಈ ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ. ಈ ದೇಶದ ಸ್ವಾತಂತ್ರ್ಯಕ್ಕೆ ಪ್ರಾಣ ಕೊಟ್ಟವರು ನಾವು. ನಮ್ಮ ಹೋರಾಟ ಇದೇ ರೀತಿ ಮುಂದುವರಿಯಲಿದ್ದು, ಜನರೇ ನಿಮ್ಮ ಸರಕಾರವನ್ನು ಕಿತ್ತೊಗೆಯಲಿದ್ದಾರೆ' ಎಂದು ಶಿವಕುಮಾರ್ ಎಚ್ಚರಿಕೆ ನೀಡಿದರು.

'ಸಾವಿನಲ್ಲಿ, ಔಷಧಿಯಲ್ಲಿ, ಆಸ್ಪತ್ರೆ ಹಾಸಿಗೆಯಲ್ಲಿ ಹಣ ದೋಚಿದ್ದಲ್ಲದೇ, ಈಗ ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದ್ದೀರಿ. ನಾಳೆಯಿಂದ ನಮ್ಮ ನಾಯಕರೆಲ್ಲರೂ ಜಿಲ್ಲೆ, ತಾಲೂಕು, ಪಂಚಾಯತ್ ಮಟ್ಟಕ್ಕೆ ಹೋಗಿ ಸರಕಾರದ ದುರಾಡಳಿತವನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಾರೆ. ನೆರೆ ರಾಷ್ಟ್ರಗಳಲ್ಲಿ ಇಂಧನ ಬೆಲೆ ನಮಗಿಂತ ಅರ್ಧದಷ್ಟಿದೆ' ಎಂದು ಶಿವಕುಮಾರ್ ಹೇಳಿದರು.

ಬಂಧನ, ಬಿಡುಗಡೆ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರನ್ನು ಇಲ್ಲಿನ ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.

ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ದಿನೇಶ್ ಗುಂಡೂರಾವ್, ಮೇಲ್ಮನೆ ಸದಸ್ಯ ಪ್ರಕಾಶ್ ರಾಠೋಡ್, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಶಾಸಕ ಅಶೋಕ್ ಪಟ್ಟಣ್ ಸೇರಿದಂತೆ ಇನ್ನಿತರ ನಾಯಕರು ಪಾಲ್ಗೊಂಡಿದ್ದರು.

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮೂಲಕ ನೀವು ಮಾತ್ರ ಜನರಿಂದ ಸುಲಿಗೆ ಮಾಡುತ್ತಲೇ ಇದ್ದೀರಿ. ಇದನ್ನು ನಿಲ್ಲಿಸಿ ಇಂಧನ ಬೆಲೆ ಇಳಿಸಬೇಕು ಎಂದು ನಾನು ಕೇಂದ್ರಕ್ಕೆ ಮನವಿ ಮಾಡುತ್ತೇನೆ. ಬಿಜೆಪಿ ನಾಯಕರು ಈ ಹಿಂದೆ ಏನೇನು ಮಾತನಾಡಿದ್ದರು ಎಂಬುದೆಲ್ಲವನ್ನು ನಾವು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತೇವೆ. ಈ ಹಿಂದೆ ಅವರು ಪ್ರತಿಭಟನೆ ಮಾಡಿದ್ದ ಫೋಟೋವನ್ನು ಮುಖ್ಯಮಂತ್ರಿಗೆ ಉಡುಗೊರೆಯಾಗಿ ಕಳುಹಿಸಿ ಕೊಡುತ್ತೇವೆ

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News