ಕಲಾಗ್ರಾಮದಲ್ಲಿ ಬೌದ್ಧ ಸಂಪ್ರದಾಯದಂತೆ ಸಕಲ ಸರಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯರ ಅಂತ್ಯ ಸಂಸ್ಕಾರ
ಬೆಂಗಳೂರು, ಜೂ. 12: ನಿನ್ನೆ ನಿಧನರಾಗಿದ್ದ ಹಿರಿಯ ಸಾಹಿತಿ, ಖ್ಯಾತ ಕವಿ, ನಾಡೋಜ ಡಾ.ಸಿದ್ದಲಿಂಗಯ್ಯ ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರಕಾರಿ ಗೌರವಗಳೊಂದಿಗೆ ಇಲ್ಲಿನ ಬೆಂಗಳೂರು ವಿಶ್ವ ವಿದ್ಯಾಲಯ ಆವರಣದಲ್ಲಿನ ಕಲಾಗ್ರಾಮದಲ್ಲಿ ನೆರವೇರಿಸಲಾಯಿತು.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಡಾ.ಸಿದ್ದಲಿಂಗಯ್ಯ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ನಿನ್ನೆ ಮಧ್ಯಾಹ್ನ 3ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದರು. ಆಸ್ಪತ್ರೆಯಿಂದ ಡಾ.ಸಿದ್ದಲಿಂಗಯ್ಯ ಪಾರ್ಥಿವ ಶರೀರವನ್ನು ರಾಜರಾಜೇಶ್ವರಿನಗರದ ಸ್ವಗೃಹ ಬನವಾಸಿಯಲ್ಲಿ ಕುಟುಂಬದ ಸದಸ್ಯರು ಹಾಗೂ ಬಂಧು-ಮಿತ್ರರ ಅಂತಿಮ ದರ್ಶನಕ್ಕೆ ಕೆಲಕಾಲ ಇರಿಸಲಾಗಿತ್ತು.
ಅನಂತರ ಬೆಂಗಳೂರು ವಿಶ್ವ ವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಕೆಲಕಾಲ ಅವಕಾಶ ಕಲ್ಪಿಸಲಾಗಿತ್ತು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್, ಸಂಸದ ಡಿ.ಕೆ.ಸುರೇಶ್, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ, ನಟ ದುನಿಯಾ ವಿಜಯ್, ಹಿರಿಯ ಸಾಹಿತಿ ದೇವನೂರ ಮಹಾದೇವ, ದಲಿತ ಮುಖಂಡರಾದ ಮಾವಳ್ಳಿ ಶಂಕರ್, ಲಕ್ಷ್ಮಿನಾರಾಯಣ ನಾಗವಾರ, ಮಂಜುನಾಥ ಅಣ್ಣಯ್ಯ, ವೆಂಕಟಸ್ವಾಮಿ ಸೇರಿದಂತೆ ಸಂಘಟನೆಗಳ ಮುಖಂಡರು, ಸಿದ್ದಲಿಂಗಯ್ಯ ಅವರ ಗೆಳೆಯರು, ಒಡನಾಡಿಗಳು ಅಂತಿಮ ದರ್ಶನ ಪಡೆದರು.
ಬಳಿಕ ದಿವಂಗತ ಡಾ.ಜಿ.ಎಸ್.ಶಿವರುದ್ರಪ್ಪ, ಡಾ.ಯು.ಆರ್.ಅನಂತಮೂರ್ತಿರವರ ಸ್ಮಾರಕದ ಪಕ್ಕದಲ್ಲಿಯೇ ಕೋವಿಡ್ ಮಾರ್ಗಸೂಚಿ ಅನುಸರಿಸಿ `ಬೌದ್ಧ ದಮ್ಮ'ದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಜ್ಯ ಸರಕಾರದ ಪರವಾಗಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಭಾಗಿಯಾಗಿದ್ದರು. ಮೂರು ಸುತ್ತು ಕುಶಲ ತೋಪು ಸಿಡಿಸಿ ಪೆÇಲೀಸರು ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ಗೌರವ ಸಲ್ಲಿಸಿದರು. ಇದೇ ವೇಳೆ ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು. ಗೌರವ ಸೂಚಕವಾಗಿ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ಬಾವುಟವನ್ನು ಕುಟುಂಬದ ಸದಸ್ಯರಿಗೆ ಡಾ.ಅಶ್ವತ್ಥ ನಾರಾಯಣ ಹಸ್ತಾಂತರ ಮಾಡಿದರು.
ಇದೇ ಸಂದರ್ಭದಲ್ಲಿ ಕಲಾತಂಡದ ಗಾಯಕರು `ಓ ನನ್ನ ಚೇತನ, ಆಗು ನೀ ಅನಿಕೇತನ' ಹಾಡು ಹೇಳುವ ಮೂಲಕ ಅಂತಿಮ ನಮನ ಸಲ್ಲಿಸಲಾಯಿತು. ಬೌದ್ಧ ದಮ್ಮದ ಬಿಕ್ಕುಗಳಿಂದ ಅಂತಿಮ ವಿಧಿವಿದಾನ ನೆರವೇರಿತು. ಪುತ್ರ ಗೌತಮ್ ಸಿದ್ದಲಿಂಗಯ್ಯ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಇನ್ನಿತರರು ಉಪಸ್ಥಿತರಿದ್ದರು.
'ಜ್ಞಾನಭಾರತಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿರಿಸಲಾದ ಕವಿಮಿತ್ರ ಸಿದ್ದಲಿಂಗಯ್ಯನವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿ ಅಂತಿಮ ವಿದಾಯ ಹೇಳಿದೆ. ಅವರ ಮುಖ ನೋಡುತ್ತಿದ್ದಂತೆ ಸುಮಾರು ನಾಲ್ಕು ದಶಕಗಳ ಕಾಲದ ಒಡನಾಟದ ನೆನಪುಗಳು ಸ್ಮೃತಿಪಟಲದಲ್ಲಿ ಹಾದುಹೋದವು'
-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ
`ರಾಜ್ಯ ಕಂಡ ಶ್ರೇಷ್ಠ ಸಾಹಿತಿ, ದಮನಿತರ ದನಿಯಾಗಿದ್ದವರು ಡಾ.ಸಿದ್ದಲಿಂಗಯ್ಯ. ಅವರ ನಿಧನ ಬಹಳ ನೋವಿನ ಸಂಗತಿ. ತಮ್ಮ ಬದುಕು, ನೋವುಗಳನ್ನೇ ಸಾಹಿತ್ಯವಾಗಿ ಬರೆದವರು ಅವರು. ಎರಡು ಅವಧಿಗಳಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಸದನದಲ್ಲಿ ವಿಚಾರ ಮಂಡನೆ, ಚರ್ಚೆ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದರು. ನಮಗೆಲ್ಲ ಮಾರ್ಗದರ್ಶಕರಾಗಿದ್ದರು.
ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ನೆರವೇರಿಸಲಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ನಾವೆಲ್ಲರೂ ಪ್ರಾರ್ಥನೆ ಮಾಡೋಣ'
-ಡಾ.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿ
`ಡಾ.ಸಿದ್ದಲಿಂಗಯ್ಯನವರು ಸಾಹಿತ್ಯದ ಮೂಲಕ ಸಮಾಜದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಿದರು. ದೊಡ್ಡ ಹೃದಯ ಶ್ರೀಮಂತಿಕೆ ಅವರದ್ದು. ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅಪಾರ, ಅದನ್ನು ನಾವು ಉಳಿಸಿಕೊಳ್ಳಬೇಕು. ಕರ್ನಾಟಕದ ಸಂಸ್ಕೃತಿಗೆ ಹೇಳಿ ಮಾಡಿಸಿದ ವ್ಯಕ್ತಿ ಸಿದ್ದಲಿಂಗಯ್ಯನವರು. ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಕವಾಗಿ ಸಿದ್ದಲಿಂಗಯ್ಯನವರ ಕೊಡುಗೆ ಅಪಾರ. ಅವರ ಕೆಲಸಗಳನ್ನು ನೆನಪಿಸಿಕೊಳ್ಳುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳುವ ಸಂಬಂಧ ಸಿಎಂ ಜತೆ ಸಮಾಲೋಚನೆ ನಡೆಸುತ್ತೇನೆ'
-ಬಸವರಾಜ ಬೊಮ್ಮಾಯಿ, ಗೃಹ ಸಚಿವ