ತನಿಖೆ ಪೂರ್ಣಗೊಳ್ಳದೆ ಮಾಧ್ಯಮಗಳಿಗೆ ಪೊಲೀಸರು ಪ್ರಕರಣದ ವಿವರ ಬಹಿರಂಗಪಡಿಸುವಂತಿಲ್ಲ: ಹೈಕೋರ್ಟ್

Update: 2021-06-15 14:55 GMT

ಬೆಂಗಳೂರು, ಜೂ.15: ಯಾವುದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳ್ಳುವವರೆಗೆ ಪೊಲೀಸರು ಪ್ರಕರಣದ ತನಿಖೆಯ ಕುರಿತು, ಅದರ ಆರೋಪಿಗಳು ಅಥವಾ ಸಂತ್ರಸ್ತರ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ. 

ಈ ಸಂಬಂಧ ನಾಲ್ಕು ವಾರಗಳಲ್ಲಿ ಮಾರ್ಗಸೂಚಿ, ನಿರ್ದೇಶನಗಳನ್ನು ರೂಪಿಸುವಂತೆಯೂ ನ್ಯಾಯಪೀಠವು ನಿರ್ದೇಶಿಸಿದೆ. 

ಎಲೆಕ್ಟ್ರಾನಿಕ್ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಸುದ್ದಿ ಅಥವಾ ಇನ್ನಾವುದೇ ಕಾರ್ಯಕ್ರಮದ ಭಾಗವಾಗಿ ಅಸಭ್ಯ ಮತ್ತು ಅಶ್ಲೀಲ ವಿಚಾರ ಪ್ರಕಟಿಸುವುದಕ್ಕೆ ತಡೆ ನೀಡಲು ಶಾಸನಬದ್ಧ ನಿಯಮ ರೂಪಿಸಲು ನಿರ್ದೇಶನ ನೀಡಬೇಕೆಂದು ಕೋರಿ ವಕೀಲೆ ದೀಪಶ್ರೀ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ಜಾರಿಗೊಳಿಸಿದೆ. ಅಲ್ಲದೆ, ನಿಯಮ ಉಲ್ಲಂಘಿಸುವ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸರಕಾರಕ್ಕೆ ಸೂಚಿಸಿದೆ.

ತನಿಖೆ ಪೂರ್ಣಗೊಳ್ಳುವ ಮೊದಲು ಅದರ ಸ್ವರೂಪವನ್ನು ತನಿಖಾಧಿಕಾರಿಗಳು ಬಹಿರಂಗಪಡಿಸದಂತೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸಮಗ್ರ ನಿರ್ದೇಶನ ನೀಡಬೇಕು ಎಂಬುದು ನಮ್ಮ ನಿಲುವು ಆಗಿದೆ. ದೂರುದಾರರು ಮತ್ತು ಆರೋಪಿಗಳ ಕುರಿತು ಕೂಡ ಅವರು ಮಾಹಿತಿ ನೀಡುವಂತಿಲ್ಲ ಎನ್ನುವುದು ಇನ್ನೊಂದು ನಿರ್ದೇಶನವಾಗಿದೆ. ನಿರ್ದೇಶನ ನೀಡಿದ ಮಾತ್ರಕ್ಕೆ ಉದ್ದೇಶ ಪೂರ್ಣಗೊಂಡಂತಾಗುವುದಿಲ್ಲ. (ನಿಯಮ) ಉಲ್ಲಂಘನೆಗಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯ ಸರಕಾರಕ್ಕೆ ಹೇಳಿದೆ. ಈ ಸಂಬಂಧ ನಾಲ್ಕು ವಾರಗಳಲ್ಲಿ ಮಾರ್ಗಸೂಚಿ, ನಿರ್ದೇಶನಗಳನ್ನು ರೂಪಿಸುವಂತೆ ಅದು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಪ್ರಕರಣಗಳ ವಿಚಾರಣೆ ವೇಳೆ ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ತನಿಖೆಯ ವಿವರಗಳನ್ನು ಬಹಿರಂಗ ಪಡಿಸುವ ಘಟನೆಗಳು ಹೆಚ್ಚುತ್ತಿವೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಈ ಹಿನ್ನೆಲೆಯಲ್ಲಿ ನಿಮ್ಮ ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ಆರೋಪಿಗಳ ಬಗ್ಗೆ ಶೇ.100ರಷ್ಟು ಪುರಾವೆಗಳಿವೆ ಎಂದು ಹೇಳುತ್ತಾರೆ. ಅಧಿಕಾರಿಗಳಿಗೆ ಮಾದರಿ ನೀತಿ ಸಂಹಿತೆ ಇರಬೇಕು. ಅಂತಹ ಅಧಿಕಾರಿಗಳ ವಿರುದ್ಧ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶ್ನಿಸಿದ ನ್ಯಾಯಾಲಯ ಆ ರೀತಿಯ ನಿದರ್ಶನಗಳನ್ನು ನ್ಯಾಯಾಂಗ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿತು.

ಆಗ ರಾಜ್ಯ ಸರಕಾರದ ಪರ ಹಾಜರಾದ ವಕೀಲರು, ತನಿಖಾಧಿಕಾರಿಗಳು ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನೇರವಾಗಿ ಅಥವಾ ಪರೋಕ್ಷವಾಗಿ ಮಾಹಿತಿಯನ್ನು ಸೋರಿಕೆ ಮಾಡಲಾಗುತ್ತಿದೆ ಎಂದು ತಿರುಗೇಟು ನೀಡಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಕೇಬಲ್ ಟಿವಿ ಕಾಯಿದೆಯಡಿ ರೂಪಿಸಲಾಗಿರುವ ಕಾರ್ಯಕ್ರಮ ಸಂಹಿತೆ ಎಲೆಕ್ಟ್ರಾನಿಕ್ ಮಾಧ್ಯಮವನ್ನು ನಿಯಂತ್ರಿಸುತ್ತಾದರೂ ಅದಕ್ಕೆ ಹಲ್ಲುಗಳಿಲ್ಲ ಎಂದು ಪೀಠಕ್ಕೆ ತಿಳಿಸಿದರು. 

ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಮಾಧ್ಯಮಗಳ ತನಿಖೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ಮಾಡುವುದರಿಂದ ಅದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ. ಆರೋಪಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರೆ ಆಗ ನ್ಯಾಯಾಂಗದ ವಿಚಾರಣೆಯ ಮೇಲೂ ಪ್ರಭಾವ ಬೀರುತ್ತದೆ ಎಂದು ಹೇಳಿದೆ. ಪ್ರಕರಣವನ್ನು ಜು.20ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News