ಜಿಂದಾಲ್ ಕಂಪೆನಿಗೆ ಭೂಮಿ ಪರಭಾರೆ ವಿಚಾರ: ತೀರ್ಪಿನ ಅಂತಿಮ ಆದೇಶಕ್ಕೆ ಒಳಪಡಲಿದೆ; ಹೈಕೋರ್ಟ್

Update: 2021-06-15 17:40 GMT

ಬೆಂಗಳೂರು, ಜೂ.15: ಜಿಂದಾಲ್ ಸಂಸ್ಥೆಗೆ 3,667 ಎಕರೆ ಸರಕಾರಿ ಭೂಮಿ ಪರಭಾರೆ ಮಾಡುವ ಸರಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.

ನೂರಾರು ಎಕರೆ ಸರಕಾರಿ ಭೂಮಿಯನ್ನು ಅತ್ಯಂತ ಕಡಿಮೆ ಬೆಲೆಗೆ ಖಾಸಗಿ ಸಂಸ್ಥೆಗೆ ಮಾರಾಟ ಮಾಡಲು ಮುಂದಾಗಿರುವ ಸರಕಾರದ ಕ್ರಮ ನಿಯಮಬಾಹಿರ ಎಂದು ಆಕ್ಷೇಪಿಸಿ ನಗರದ ಕೆ.ಎ.ಪಾಲ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ವೇಳೆ ಸರಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಜಿಂದಾಲ್ ಕಂಪೆನಿಗೆ ಸರಕಾರಿ ಜಮೀನು ಮಂಜೂರು ಮಾಡುವ ಸಂಬಂಧ ಸಚಿವ ಸಂಪುಟ ನಿರ್ಧಾರ ಕೈಗೊಂಡಿದ್ದು ನಿಜ. ಆದರೆ, ಸಂಪುಟದ ತೀರ್ಮಾನ ಅಂತಿಮಗೊಂಡಿಲ್ಲ ಮತ್ತು ಸದ್ಯಕ್ಕೆ ಆ ನಿರ್ಧಾರವನ್ನು ಜಾರಿಗೊಳಿಸದಿರಲು ಸರಕಾರ ತೀರ್ಮಾನ ಕೈಗೊಂಡಿದೆ ಎಂದು ಪೀಠಕ್ಕೆ ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸರಕಾರಿ ಜಮೀನು ಪರಭಾರೆ ವಿಚಾರವಾಗಿ ಸರಕಾರ ಕೈಗೊಂಡಿರುವ ನಿರ್ಧಾರ ಸ್ಪಷ್ಟವಾಗಿಲ್ಲ. ಹೀಗಾಗಿ, ಜಿಂದಾಲ್ ಕಂಪೆನಿಗೆ ಜಮೀನು ಪರಭಾರೆ ಮಾಡುವ ಸಂಬಂಧ ಸರಕಾರ ಕೈಗೊಳ್ಳುವ ಯಾವುದೇ ಕ್ರಮ ಈ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ತಿಳಿಸಿ, ವಿಚಾರಣೆಯನ್ನು ಜು.13ಕ್ಕೆ ಮುಂದೂಡಿತು. ಇದೇ ವೇಳೆ ಜಿಂದಾಲ್ ಕಂಪೆನಿ ಪರ ವಕೀಲ ಅಭಿಷೇಕ್ ಸಿಂಘ್ವಿ ಪೀಠಕ್ಕೆ ಮನವಿ ಮಾಡಿ, ಪ್ರಕರಣದಲ್ಲಿ ಕಾನೂನು ಹೋರಾಟದ ಹಕ್ಕನ್ನು ಕಾಯ್ದಿರಿಸಬೇಕು ಎಂದು ಮನವಿ ಮಾಡಿದರು.

ಅರ್ಜಿದಾರರ ಮನವಿ ಏನು: ವಿಜಯನಗರ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ 3,667 ಎಕರೆ ಭೂಮಿಯನ್ನು ಸರಕಾರ ಜಿಂದಾಲ್ ಸಂಸ್ಥೆಗೆ ಪರಭಾರೆ ಮಾಡಿದೆ. 2019 ರಲ್ಲಿ ಕುಮಾರಸ್ವಾಮಿ ನೇತೃತ್ವದ ಸರಕಾರ ಜಮೀನು ಪರಭಾರೆ ಮಾಡಲು ಮುಂದಾಗಿದ್ದಾಗ ಪ್ರತಿಪಕ್ಷದಲ್ಲಿದ್ದ ಯಡಿಯೂರಪ್ಪ ಈ ಕ್ರಮವನ್ನು ವಿರೋಧಿಸಿದ್ದರು. ಇದೀಗ ಯಡಿಯೂರಪ್ಪ ಅವರ ನೇತೃತ್ವದ ಸರಕಾರವೇ ಸಂಸ್ಥೆಗೆ ಜಮೀನು ನೀಡಲು ಮುಂದಾಗಿದೆ.

ಜಮೀನು ಪರಬಾರೆ ಸಂಬಂಧ ತರಾತುರಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ ಪಾರದರ್ಶಕತೆ ಕಾಯ್ದುಕೊಂಡಿಲ್ಲ. ಹೀಗಾಗಿ, 2021ರ ಎಪ್ರಿಲ್ 26ರಂದು ಜಮೀನು ಪರಭಾರೆ ಸಂಬಂಧ ಸಚಿವ ಸಂಪುಟ ಕೈಗೊಂಡ ನಿರ್ಧಾರ ರದ್ದುಪಡಿಸಬೇಕು. ಪ್ರಕರಣದ ತನಿಖೆ ನಡೆಸಲು ಸ್ವತಂತ್ರ ಸಂಸ್ಥೆ ನೇಮಿಸಿ, ತನಿಖೆಯನ್ನು ಹೈಕೋರ್ಟ್ ಮೇಲ್ವಿಚಾರಣೆ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News