ಬೆಲೆ ಏರಿಕೆ ಖಂಡಿಸಿ ಜೂ.21ರಿಂದ ರಾಜ್ಯಾದ್ಯಂತ ಜೆಡಿಎಸ್ ಪ್ರತಿಭಟನೆ

Update: 2021-06-18 11:33 GMT

ಬೆಂಗಳೂರು, ಜೂ.18: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಜೆಡಿಎಸ್ ವತಿಯಿಂದ ಜೂ.21ರಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕೋವಿಡ್‍ನಿಂದಾಗಿ ಉದ್ಯೋಗ ಕಳೆದುಕೊಂಡಿರುವ ಜನತೆ ಬೆಲೆ ಏರಿಕೆಯಿಂದಾಗಿ ಸಾಯುವ ಸ್ಥಿತಿಗೆ ತಲುಪಿದ್ದಾರೆ. ಇದ್ಯಾವುದರ ಬಗೆಗೂ ಗಮನ ಹರಿಸದ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನಾಯಕರು ತಾವು ಮಾಡಿದ್ದೇ ಸರಿಯೆನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಕಡಿತ ಮಾಡಬೇಕೆಂದು ಜನತೆ ಅಂಗಲಾಚುತ್ತಿದ್ದಾರೆ.  ಪ್ರತಿಪಕ್ಷಗಳು ರಾಜ್ಯ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದರೂ ರಾಜ್ಯ ಸರಕಾರ ಉದಾಸೀನ ತೋರಿಸುತ್ತಿದೆ. ಹೀಗಾಗಿ ಜೂ.21ರಂದು ಜೆಡಿಎಸ್ ನಾಯಕರು, ಕಾರ್ಯಕರ್ತರು ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಿ ಸರಕಾರವನ್ನು ಆಗ್ರಹಿಸಲಿದ್ದಾರೆಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯ ಭೀತಿಯು ತಲೆದೂರಿದೆ. ಈ ನಿಟ್ಟಿನಲ್ಲಿ ಜನತೆಯ ಮಾನಸಿಕ, ದೈಹಿಕ ಆರೋಗ್ಯದ ದೃಷ್ಟಿಯಿಂದ ರಾಜ್ಯ ಸರಕಾರ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News