ಕನ್ನಡ ಭಾಷೆಯನ್ನು ಎಲ್ಲ ಪದವಿ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಕಲಿಸಬೇಕು: ಸರಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

Update: 2021-06-18 11:37 GMT

ಬೆಂಗಳೂರು, ಜೂ. 18: `ಕನಿಷ್ಠ ಆರು ಸೆಮಿಸ್ಟರುಗಳಲ್ಲಿ ಕನ್ನಡ ಭಾಷಾ ವಿಷಯವನ್ನು ಎಲ್ಲ ಪದವಿ ಮಕ್ಕಳಿಗೂ ಕಡ್ಡಾಯವಾಗಿ ಕಲಿಸಲೇಬೇಕೆಂದು ರಾಜ್ಯ ಬಿಜೆಪಿ ಸರಕಾರವನ್ನು ಒತ್ತಾಯಿಸುತ್ತೇನೆ. ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆಗ್ರಹಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದಿರುವ ಅವರು, `ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ರೂಪಿಸಬೇಕಾಗಿದೆ. ಹಾಗಾಗಿ ಹೊಸ ಪಠ್ಯಕ್ರಮವನ್ನು ರೂಪಿಸುವಾಗ ಸಂಬಂಧಿಸಿದ ತಜ್ಞರುಗಳ ಜೊತೆ ಚರ್ಚಿಸಿ ಆರೋಗ್ಯಕರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜೊತೆಗೆ ನಾಡು-ನುಡಿಯನ್ನು ಕಟ್ಟಲು ಪೂರಕವಾಗುವ ಪಠ್ಯಗಳನ್ನು ರೂಪಿಸಬೇಕು. ಅದರ ಬದಲಾಗಿ ರಾಷ್ಟ್ರೀಯ ಶಿಕ್ಷಣ ನೀತಿಯ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ಬಿಜೆಪಿ ಸರಕಾರ ಮುಂದಾಗುವುದಾದರೆ ಅದರ ವಿರುದ್ಧ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ. ಈ ನಾಡು ಎಂದಿಗೂ ನಾಡು, ನುಡಿಗೆ ದ್ರೋಹ ಎಸಗಿದವರನ್ನು ಕ್ಷಮಿಸುವುದಿಲ್ಲ' ಎಂದು ಎಚ್ಚರಿಸಿದ್ದಾರೆ.

`ಆದುದರಿಂದ 4 ವರ್ಷದ ಕೋರ್ಸಿಗೆ ಅನುಗುಣವಾಗಿ 3 ವರ್ಷಕ್ಕೆ ಅಥವಾ 6 ಸೆಮಿಸ್ಟರುಗಳಿಗೆ ಭಾಷಾ ವಿಷಯವನ್ನು ಬೋಧಿಸಲು ಕ್ರಮ ತೆಗೆದುಕೊಳ್ಳಬೇಕು. ಹೀಗೆ ಮಾಡುವುದರಿಂದ ನಾಡಿನ ಮಕ್ಕಳು ಉತ್ತಮ ಪರಂಪರೆಗಳಿಗೆ ವಾರಸುದಾರರಾಗಲು ಸಾಧ್ಯವಾಗುತ್ತದೆ ಮತ್ತು ರಾಷ್ಟ್ರಕ್ಕೆ ಬೇಕಾದ ಉತ್ತಮ ಮನುಷ್ಯನಾಗಿ ರೂಪುಗೊಳ್ಳಲು ಸಹಾಯವಾಗುತ್ತದೆ' ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.

ಈ ದುರುದ್ದೇಶದ ಭಾಗವಾಗಿಯೇ ಉಪಸಮಿತಿಯವರು ಭಾಷೆಗಳ ಕಲಿಕೆಯನ್ನು ಎರಡು ಸೆಮಿಸ್ಟರುಗಳಿಗೆ ಇಳಿಸಿದ್ದಾರೆ. ಸರಕಾರ ಈ ಸಮಿತಿಯ ಶಿಫಾರಸ್ಸುಗಳನ್ನು ಒಪ್ಪಿಕೊಂಡಿದ್ದೇ ಆದರೆ ಅದು ಬಹಳ ದೊಡ್ಡ ಮಟ್ಟದ ಕನ್ನಡ ದ್ರೋಹವಾಗುತ್ತದೆ. ಇದಕ್ಕೆ ಬಿಜೆಪಿ ಸರಕಾರ ಅವಕಾಶ ಮಾಡಿಕೊಡಬಾರದು. ನಮ್ಮ ದೇಶಕ್ಕೆ ಜ್ಞಾನ ಇರುವ, ದುಡ್ಡಿರುವ ಜನರ ಅಗತ್ಯ ಎಷ್ಟಿದೆಯೋ ಅದಕ್ಕಿಂತ ಹೆಚ್ಚು ಮಾನವೀಯ ಹೃದಯ ಇರುವ ಮನುಷ್ಯರ ಅಗತ್ಯವಿದೆ. ಅಂತಹದ್ದಕ್ಕೆ ವಿರುದ್ಧವಾದ ನಿಲುವುಗಳನ್ನು ರೂಪಿಸುವುದಕ್ಕಾಗಿ `ರಾಷ್ಟ್ರೀಯ ಶಿಕ್ಷಣ ನೀತಿ'ಯ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

`ದೇಶದ ಸಂಸ್ಕೃತಿ, ಭಾಷೆ, ಮಹಾಕಾವ್ಯಗಳು, ಪುರಾಣಗಳು, ಕಲೆ, ಜಾನಪದ ಮುಂತಾದ ಪರಂಪರೆಗಳ ಬಗ್ಗೆ ಮಾತನಾಡುವ ಬಿಜೆಪಿಯು ಪದವಿ ಕಲಿಯುವ ನಮ್ಮ ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿ ಕೇವಲ ಅದಾನಿ, ಅಂಬಾನಿಗಳಂಥ ಲೂಟಿಕೋರರ ಮಾದರಿಗಳನ್ನು ಕಲಿಸಲು ಹೊರಟಿದೆಯೆ? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಕನ್ನಡದ ಶ್ರೇಷ್ಠ ಅಭಿವ್ಯಕ್ತಿಗಳಾದ ವಚನಗಳನ್ನು, ಪಂಪ, ರನ್ನ, ಕುಮಾರವ್ಯಾಸ ಮತ್ತು ಹರಿದಾಸರ ಕಾವ್ಯಗಳನ್ನು ಕಲಿಯುವುದು ಹೇಗೆ? ಆಧುನಿಕ ಸಾಹಿತ್ಯದ ಸಂದರ್ಭದಲ್ಲಿ ಮೇರು ಸಾಹಿತಿಗಳಾದ ಕುವೆಂಪು, ಕಾರಂತರು, ಬೇಂದ್ರೆ, ಮಾಸ್ತಿ, ಪು.ತಿ.ನ ಮುಂತಾದವರು ರೂಪಿಸಿದ ಜೀವನೋತ್ಸಾಹದ ಬದುಕಿನ ದರ್ಶನಗಳನ್ನು ಮಕ್ಕಳು ಕಲಿಯುವುದು ಹೇಗೆ?' ಎಂದು ಕೇಳಿದ್ದಾರೆ.

'ಸರಕಾರವು ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿದರೆ ಅವರು ಜಗತ್ತಿನ ಶ್ರೇಷ್ಠ ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತ ಮುಂತಾದವುಗಳನ್ನು ಕಲಿಯುವುದು ಹೇಗೆ? ವಿದ್ಯಾರ್ಥಿಗಳಿಗೆ ವಿಷಯ ಜ್ಞಾನದಷ್ಟೇ ನೈತಿಕ ಶಿಕ್ಷಣವೂ ಮುಖ್ಯ. ವಿಜ್ಞಾನ, ವಾಣಿಜ್ಯ, ಅರ್ಥಶಾಸ್ತ್ರ, ಕಾನೂನು ಮತ್ತು ತಾಂತ್ರಿಕ ಶಿಕ್ಷಣವನ್ನು ಕಲಿಯುವ ವಿದ್ಯಾರ್ಥಿ ತನ್ನ ಕಲಿಕೆಯುದ್ದಕ್ಕೂ ಬೌದ್ಧಿಕತೆಯನ್ನು ರೂಪಿಸಿಕೊಳ್ಳುವುದರ ಜೊತೆಗೆ ಆರೋಗ್ಯಕರವಾದ ಮನಸ್ಸನ್ನೂ ಕಟ್ಟಿ ಕೊಳ್ಳಬೇಕಾಗುತ್ತದೆ. ಇದು ಶಿಕ್ಷಣದ ಮೂಲ ಉದ್ದೇಶವೂ ಹೌದು' ಎಂದು ಅವರು ತಿಳಿಸಿದ್ದಾರೆ.

'ಸಾಮಾನ್ಯವಾಗಿ ಒಂದು ಸೆಮಿಸ್ಟರ್ ನಲ್ಲಿ ಗರಿಷ್ಠ 90 ದಿನಗಳ ಅವಧಿಯ ಬೋಧನೆ ಇರುತ್ತದೆ. ಪ್ರತಿ ವಿಷಯಕ್ಕೆ ವಾರಕ್ಕೆ 4 ಗಂಟೆಯಂತೆ, ಒಂದು ಸೆಮಿಸ್ಟರ್ ನಲ್ಲಿ ಒಂದು ವಿಷಯಕ್ಕೆ 48 ಗಂಟೆ ಬೋಧನಾ ಅವಧಿ ಇರುತ್ತದೆ. 2 ಸೆಮಿಸ್ಟರುಗಳಿಂದ ಗರಿಷ್ಠ 96 ಗಂಟೆಗಳು ಇರುತ್ತದೆ. ಕೇವಲ 96 ಗಂಟೆಗಳ ಅವಧಿಯಲ್ಲಿ ಯಾವ ವಿಷಯವನ್ನು ಕಲಿಸಲು ಸಾಧ್ಯ? ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶಗಳಲ್ಲಿ ದೇಶ, ಭಾಷೆಗಳಿಗೆ ಪ್ರಾಮುಖ್ಯ ನೀಡಬೇಕು ಎಂಬ ಅಂಶವೂ ಇದೆ. ಆದರೆ ರಾಜ್ಯದ ಈ ಸಮಿತಿಯು ಕನ್ನಡದ ಪಾಲಿಗೆ ಮಹಾ ದ್ರೋಹವೆಸಗುವಂತಹ ಶಿಫಾರಸ್ಸುಗಳನ್ನು ಮಾಡಿದೆ ಎಂಬ ಆರೋಪಗಳನ್ನು ನಾಡಿನ ಹಿರಿಯರು ಮಾಡುತ್ತಿದ್ದಾರೆ' ಎಂದು ಸಿದ್ದರಾಮಯ್ಯ ದೂರಿದ್ದಾರೆ.

`ಪಠ್ಯಪುಸ್ತಕ ರಚನೆಯ ಉಪಸಮಿತಿಯು ಸರಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲ ಭಾಷಾ ವಿಷಯಗಳನ್ನು ಕೇವಲ ಎರಡು ಸೆಮಿಸ್ಟರ್ ಗಳಿಗೆ ಅಂದರೆ ಒಂದು ವರ್ಷಕ್ಕೆ ಮಾತ್ರ ಮಿತಿಗೊಳಿಸಿ ಶಿಫಾರಸ್ಸುಗಳನ್ನು ಮಾಡಿದೆ. ಈ ಶಿಫಾರಸ್ಸುಗಳು `ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿದೆ' ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿಯ ಭಾಗವಾಗಿ ಈಗ ಇರುವ ಮೂರು ವರ್ಷದ ಬದಲಾಗಿ ನಾಲ್ಕು ವರ್ಷದ ಪದವಿ ಕೋರ್ಸನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಅದಕ್ಕೋಸ್ಕರ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ಸಮಿತಿಯನ್ನು ನೇಮಿಸಲಾಗಿದೆ. ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ಈ ವರೆಗೆ ನಾಲ್ಕು ಸೆಮಿಸ್ಟರ್ ಗಳ ಅವಧಿಗಳಲ್ಲಿ ಕಲಿಸುತ್ತಿದ್ದು, ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್ ಗಳಿಗೆ ಮಿತಿಗೊಳಿಸಿರುವುದು ಕನ್ನಡ ಭಾಷೆಗೆ ಮಾಡಿದ ದ್ರೋಹ'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News