ದ.ಕ. ಜಿಲ್ಲೆಯಲ್ಲಿ ಜೂ.28ರವರೆಗೆ ಸೆಮಿ ಲಾಕ್ ಡೌನ್: ಜಿಲ್ಲಾಧಿಕಾರಿ ಡಾ. ರಾಜೇಂದ್ರ
ಮಂಗಳೂರು, ಜೂ.19: ದ.ಕ.ಜಿಲ್ಲೆಯಲ್ಲಿ ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ಜೂ.28ರವರೆಗೆ ಸೆಮಿ ಲಾಕ್ಡೌನ್ ಮಾದರಿಯಲ್ಲಿ ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಲಾಕ್ ಡೌನ್ ತೆರವು ಕುರಿತಂತೆ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ. ಅದರಲ್ಲಿ ಜೂ.11ರಂದು ಹೊರಡಿಸಿದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಹಾಗಾಗಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ. ಆದಾಗ್ಯೂ ಜಿಲ್ಲೆಯಲ್ಲಿ ಸೆಮಿ ಲಾಕ್ಡೌನ್ ಮೂಲಕ ಸೋಮವಾರದಿಂದ ಯಾವುದಕ್ಕೆಲ್ಲಾ ವಿನಾಯಿತಿ ನೀಡಬೇಕು ಎಂಬುದರ ಬಗ್ಗೆ ಜನಪ್ರತಿನಿಧಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು.
ಹಂತ ಹಂತವಾಗಿ ಲಾಕ್ಡೌನ್ ತೆರವುಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಇನ್ನೊಂದು ವಾರದಲ್ಲಿ ಕಟ್ಟುನಿಟ್ಟಾಗಿ ಎಲ್ಲರೂ ಕೋವಿಡ್ ನಿಯಮ ಪಾಲಿಸಿದರೆ ಪಾಸಿಟಿವಿಟಿ ದರ ಇಳಿಕೆಯಾಗುವ ಸಾಧ್ಯತೆ ಇದೆ. ಅದರೊಂದಿಗೆ ಕೆಲವು ಸೇವೆ, ಸೌಲಭ್ಯದ ಕುರಿತು ವಿನಾಯಿತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.