ಸಂಕಷ್ಟ ಕಾಲದಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಮುಖ್ಯಮಂತ್ರಿ ಯಡಿಯೂರಪ್ಪ

Update: 2021-06-21 17:00 GMT

ಬೆಂಗಳೂರು, ಜೂ. 21: ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರಕಾರ ಕೋವಿಡ್ ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡುವ ಉದ್ದೇಶವನ್ನು ಹೊಂದಿದ್ದು, 30.26 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 19,370 ಕೋಟಿ ರೂ.ಅಲ್ಪಾವಧಿ ಬೆಳೆ ಸಾಲ ಮತ್ತು 60 ಲಕ್ಷ ರೈತರಿಗೆ ಶೇ.3ರ ಬಡ್ಡಿ ದರದಲ್ಲಿ 1,440 ಕೋಟಿ ರೂ. ಮಧ್ಯಮಾವಧಿ/ದೀರ್ಘಾವಧಿ ಸಾಲ ವಿತರಣೆ ಗುರಿ ಹೊಂದಲಾಗಿದೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸಹಕಾರ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ವತಿಯಿಂದ ಆಯೋಜಿಸಿದ್ದ ರೈತ ಸ್ಪಂದನ 2021-22ನೆ ಸಾಲಿನ ವಿವಿಧ ಕೃಷಿ ಸಾಲ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಯಡಿಯೂರಪ್ಪ, `ಅತ್ಯಂತ ಸಂತೋಷದಿಂದ ರೈತರಿಗೆ ಮತ್ತು ಸ್ತ್ರೀಶಕ್ತಿ ಗುಂಪುಗಳಿಗೆ ಸಾಲ ವಿತರಿಸುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದ್ದೇನೆ' ಎಂದು ನುಡಿದರು.

ನಮ್ಮದು ರೈತ ಪರ ಸರಕಾರ. ಕೃಷಿ, ಆರೋಗ್ಯ ಮತ್ತು ಶಿಕ್ಷಣ ನಮ್ಮ ಸರಕಾರದ ಆದ್ಯತಾ ವಲಯಗಳು. 'ಎಲ್ಲರಿಗಾಗಿ ನಾನು, ನನಗಾಗಿ ಎಲ್ಲರೂ' ಎನ್ನುವ ಸಹಕಾರ ತತ್ವದ ಮೆಲೆ ಸಹಕಾರ ಸಂಘಗಳು ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳ ರೈತರಿಗೆ ಸ್ವಾವಲಂಬಿ ಜೀವನ ನಡೆಸಲು ಸಾಲ-ಸೌಲಭ್ಯ ಸೇವೆಗಳನ್ನು ನೀಡುತ್ತಾ ಬಂದಿವೆ ಎಂದು ಯಡಿಯೂರಪ್ಪ ತಿಳಿಸಿದರು.

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಎಲ್ಲ ಸಹಕಾರ ಸಂಘಗಳು ಮತ್ತು ಸದಸ್ಯರ ಆರ್ಥಿಕ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ಕೋವಿಡ್ ಸಂಕಷ್ಟದ ಅವಧಿಯಲ್ಲಿ ಈ ಸಹಕಾರ ಸಂಘಗಳು ಇನ್ನೂ ಹೆಚ್ಚಿನ ಸೇವೆಗಳ ತಮ್ಮ ಸದಸ್ಯರುಗಳಿಗೆ ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೋವಿಡ್ ಸಂಕಷ್ಟಕ್ಕೊಳಗಾದ ಜನರಿಗೆ ಸಂಘಗಳು ಉಚಿತವಾಗಿ 4.62 ಕೋಟಿ ರೂ. ಮೌಲ್ಯದ ವಿವಿಧ ವೈದ್ಯಕೀಯ ಸಲಕರಣೆ, ಆಹಾರ ಧಾನ್ಯ ಕಿಟ್ ವಿತರಣೆ, ಆ್ಯಂಬುಲೆನ್ಸ್ ವಾಹನಗಳನ್ನು ನೀಡಿದೆ. ಮುಖ್ಯಮಂತ್ರಿ ಕೋವಿಡ್-19 ಪರಿಹಾರ ನಿಧಿಗೆ 58 ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ದೇಣಿಗೆಯಾಗಿ ನೀಡಿ, ತನ್ನ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಣೆ ಮಾಡುತ್ತಿರುತ್ತದೆ. ಇದಕ್ಕೆ ನಾವೆಲ್ಲರೂ ಆಭಾರಿಯಾಗಿದ್ದೇವೆ ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ಈವರೆಗೆ ಸಹಕಾರ ಕ್ಷೇತ್ರದಲ್ಲಿ 2.5 ಲಕ್ಷ ಸ್ತ್ರೀಶಕ್ತಿ/ ಸ್ವಸಹಾಯ ಗುಂಪುಗಳನ್ನು ರಚನೆ ಮಾಡಲಾಗಿದ್ದು, ಸುಮಾರು 32 ಲಕ್ಷ ಸದಸ್ಯರಿರುತ್ತಾರೆ. ಕಳೆದ ವರ್ಷದಲ್ಲಿ ಸಹಕಾರ ಸಂಘಗಳು ಕೃಷಿ ಕ್ಷೇತ್ರದಲ್ಲಿ 25.67 ಲಕ್ಷ ರೈತರಿಗೆ 16,641 ಕೋಟಿ ರೂ. ಗಳ ಅಲ್ಪಾವಧಿ ಕೃಷಿ ಸಾಲ ವಿತರಿಸಲಾಗಿದೆ. 52 ಸಾವಿರ ರೈತರಿಗೆ 1260.21 ಕೋಟಿ ರೂ. ಮಧ್ಯಮಾವಧಿ/ ದೀರ್ಘಾವಧಿ ಸಾಲ ವಿತರಣೆ ಮಾಡಿದ್ದು, ಗುರಿಗೆ ಎದುರಾಗಿ ಶೇ.114ರಷ್ಟು ಸಾಧನೆ ಮಾಡಿರುತ್ತವೆ. ಇದರಲ್ಲಿ 57 ಲಕ್ಷ ರೈತರಿಗೆ 105.64 ಕೋಟಿ ರೂ.ಸಾಲವನ್ನು ಹೈನುಗಾರಿಕೆ ಚಟುವಟಿಕೆಗಳಿಗೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

2021-22ನೆ ಸಾಲಿನಲ್ಲಿ 40 ಲಕ್ಷ ಗುಂಪುಗಳಿಗೆ 1,400 ಕೋಟಿ ರೂ.ಸಾಲ ವಿತರಿಸುವ ಗುರಿ ಹೊಂದಲಾಗಿದ್ದು, ಮೇ ತಿಂಗಳ ಅಂತ್ಯಕ್ಕೆ 6,700 ಗುಂಪುಗಳಿಗೆ 233.33 ಕೋಟಿ ರೂ.ಸಾಲ ವಿತರಿಸಲಾಗಿದೆ. ಕೋವಿಡ್ ಸೋಂಕಿನ ಪರಿಣಾಮದಿಂದ ಉಂಟಾಗಿರುವ ಪ್ರತಿಕೂಲ ಸನ್ನಿವೇಶದಲ್ಲಿ ರೈತರ ಮತ್ತು ಸ್ವಸಹಾಯ ಗುಂಪುಗಳ ಸಮಸ್ಯೆಯನ್ನು ಮನಗಂಡ ಸರಕಾರ, ಮರುಪಾವತಿ ಅವಧಿಯನ್ನು 23 ತಿಂಗಳಿಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಇದರಿಂದ ಒಟ್ಟು 6,17,805 ರೈತರು 65,500 ಸ್ವಸಹಾಯ ಗುಂಪುಗಳ ಅಂದಾಜು 8.51 ಲಕ್ಷ ಸದಸ್ಯರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ಕೋವಿಡ್‍ನಿಂದಾಗಿ ಸೂಕ್ತ ಮಾರುಕಟ್ಟೆ ಇಲ್ಲದೇ ಸಂಕಷ್ಟಕ್ಕೀಡಾದ ಹೂವು ಮತ್ತು ಹಣ್ಣು ಬೆಳೆಗಾರರಿಗೆ ಒಂದು ಹೆಕ್ಟೇರ್ ಗೆ 10 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ. ಕೋವಿಡ್ 2ನೆ ಅಲೆಯಿಂದ ಸಂಕಷ್ಟಕ್ಕೀಡಾದ ದುರ್ಬಲ ವರ್ಗದವರಿಗೆ ಒಟ್ಟು 2,050 ಕೋಟಿ ರೂ. ಪರಿಹಾರದ ಪ್ಯಾಕೇಜ್‍ನ್ನು ಸರಕಾರ ಘೋಷಿಸಿದೆ. ಕೇಂದ್ರ ಸರಕಾರದ ಆತ್ಮ ನಿರ್ಭರ್ ಯೋಜನೆಯಡಿ ರಾಜ್ಯದ 930 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಲ್ಲಿ ಗೋದಾಮುಗಳನ್ನು ನಿರ್ಮಿಸಲು ನಬಾರ್ಡ್ ಮೂಲಕ 316.72 ಕೋಟಿ ರೂ.ಸಾಲವನ್ನು ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ರಾಜೇಂದ್ರ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News