×
Ad

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

Update: 2021-06-23 18:39 IST

ಬೆಂಗಳೂರು, ಜೂ. 23: `ಮರಳಿ ಕಾಲೇಜಿಗೆ' ಎನ್ನುವ ಘೋಷವಾಕ್ಯದಡಿ ಕಾಲೇಜುಗಳನ್ನು ಆರಂಭಿಸಲು ಸರಕಾರ ಚಿಂತನೆ ನಡೆಸಿದೆ. ಹೀಗಾಗಿ, ಪದವಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲು ರಾಜ್ಯ ಸರಕಾರ ಉದ್ದೇಶಿಸಿದೆ' ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಂದಿಲ್ಲಿ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳ ವಿತರಣಾ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೋವಿಡ್ ಮೂರನೆ ಅಲೆಯ ಮುನ್ನೆಚ್ಚರಿಕೆಯೂ ಸೇರಿ ಎಲ್ಲ ಅಂಶಗಳನ್ನು ಒಳಗೊಂಡ ವರದಿಯನ್ನು ಡಾ.ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿ ನೀಡಿದೆ. ಮೊದಲು ಶಾಲಾ-ಕಾಲೇಜುಗಳನ್ನು ತೆರೆಯಿರಿ ಎಂದು ವರದಿಯಲ್ಲಿ ಶಿಫಾರಸು ಮಾಡಿದೆ. ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಉದ್ದೇಶವಿದೆ ಎಂದು ಹೇಳಿದರು.

ಕೇಂದ್ರ ಸರಕಾರ ನೀಡುವ ಮಾರ್ಗಸೂಚಿಗೆ ರಾಜ್ಯ ಸರಕಾರ ಕಾಯುತ್ತಿದೆ. ಈಗಾಗಲೇ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಕೋವಿಡ್ ಲಸಿಕೆ ನೀಡುವ ಕೆಲಸ ಸಾಗಿದೆ. ಅದರಲ್ಲೂ ವಿದ್ಯಾರ್ಥಿಗಳನ್ನು ಆದ್ಯತಾ ಗುಂಪಿಗೆ ಸೇರಿಸಿ ವ್ಯಾಕ್ಸಿನ್ ನೀಡಲಾಗುವುದು. ತ್ವರಿತಗತಿಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಸರಕಾರ ಆದ್ಯತೆ ಮೇಲೆ ಕ್ರಮ ವಹಿಸಲಿದೆ ಎಂದು ಅವರು ಪ್ರತಿಕ್ರಿಯೆ ನೀಡಿದರು.

ಲಸಿಕೆ ಮಾತ್ರ ಪರಿಹಾರ: ಕೋವಿಡ್ ಡೆಲ್ಟಾ ಪ್ಲಸ್ ವೈರಸ್ ಕರ್ನಾಟಕ ರಾಜ್ಯಕ್ಕೆ ಕಾಲಿಟ್ಟಿರುವ ಬಗ್ಗೆ ಇದೀಗ ಮಾಹಿತಿ ಬಂದಿದೆ. ಕೋವಿಡ್ ಲಸಿಕೆ ಪಡೆದಿದ್ದರೆ ಯಾವುದೇ ರೂಪಾಂತರಿ ವೈರಸ್ ಬಂದರೂ ತೊಂದರೆ ಆಗುವುದಿಲ್ಲ. ಎಲ್ಲರೂ ಈಗ ಲಸಿಕೆ ಪಡೆಯಬೇಕು. ಅದೊಂದೇ ಸೋಂಕಿಗೆ ಪರಿಹಾರ ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News