ಆರೋಗ್ಯ ಇಲಾಖೆಯ ಸಲಹೆ ಪಡೆದು ಶಾಲಾ ತರಗತಿ ಆರಂಭಿಸುವ ಬಗ್ಗೆ ನಿರ್ಧಾರ: ಸಚಿವ ಸುರೇಶ್ ಕುಮಾರ್

Update: 2021-06-25 12:19 GMT

ಬೆಂಗಳೂರು, ಜೂ.25: ಶಿಕ್ಷಣ ಇಲಾಖೆ ಭೌತಿಕ ತರಗತಿಗಳ ವಿಷಯದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವುದಕ್ಕೂ ಮೊದಲು ಆರೋಗ್ಯ ಇಲಾಖೆಯ ಸಲಹೆ ಪಡೆದೇ ಮುಂದುವರಿಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಶಿಕ್ಷಣ ತಜ್ಞ, ಸರಕಾರೇತರ ಸಂಸ್ಥೆಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಶಾಲಾರಂಭವನ್ನು ಆಯಾ ಪ್ರದೇಶವಾರು ಕೋವಿಡ್ ಕನಿಷ್ಟ ಪಾಸಿಟಿವಿಟಿ ಆಧಾರದಲ್ಲಿ ತೆರೆಯಬಹುದೆಂಬ ಡಾ.ದೇವಿಶೆಟ್ಟಿ ವರದಿಯ ಅಂಶಗಳ ಕುರಿತು ಪ್ರಧಾನವಾಗಿಟ್ಟುಕೊಂಡು ಅಭಿಪ್ರಾಯ ವ್ಯಕ್ತಪಡಿಸಿದ ಪ್ರತಿಯೊಬ್ಬ ಪ್ರತಿನಿಧಿಗಳು, ಯಾವುದಾದರೂ ರೂಪದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂಪರ್ಕ ಏರ್ಪಡಲೇಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆಂದು ತಿಳಿಸಿದ್ದಾರೆ.

ಶಾಲೆಗಳಿಂದ ಮಕ್ಕಳನ್ನು ಬಹುಕಾಲ ದೂರ ಉಳಿಸುವುದು ಮಕ್ಕಳ ಹಿತರಕ್ಷಣೆಯ ದೃಷ್ಟಿಯಿಂದ ಒಳ್ಳೆಯದಲ್ಲ. ಹಾಗೆಯೇ ಯಾವುದೇ ಶಾಲೆಯಿಂದ ಕೋವಿಡ್ ಹರಡಿದ ನಿರ್ದೇಶನಗಳಿಲ್ಲವಾದ್ದರಿಂದ ಆರೋಗ್ಯ ತಜ್ಞರ ಸಲಹೆ ಮೇರೆಗೆ ಶಾಲೆಗಳನ್ನು ಸಾಧ್ಯವಾದಷ್ಟು ಬೇಗ ತೆರೆಯಬಹುದೆಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಾಲಾರಂಭದ ವಿಷಯದಲ್ಲಿ ಎಲ್ಲ ಕಡೆಯೂ ಒಂದೇ ಬಾರಿಗೆ ಶಾಲೆ ತೆರೆಯದಿದ್ದರೂ ತೊಂದರೆಯೇನು ಇಲ್ಲ, ಆದರೆ, ಆಯಾ ತಾಲೂಕು, ಗ್ರಾಮಪಂಚಾಯತ್ ಇಲ್ಲವೇ ಜಿಲ್ಲಾ ಹಾಗೆಯೇ ಗ್ರಾಮೀಣ ಪ್ರದೇಶ, ನಗರ ಪ್ರದೇಶ, ಹೋಬಳಿ, ತಾಲೂಕು ಕೇಂದ್ರವಾರು ತರಗತಿ ಆರಂಭಿಸುವುದು, ಇಲ್ಲವೇ ಇತರೆ ರೂಪದಲ್ಲಿ ಮಕ್ಕಳನ್ನು ಉಪಾಧ್ಯಾಯರು ತಲುಪುವ ವಿಷಯಗಳ ಕುರಿತು ಪ್ರತಿನಿಧಿಗಳು ವಿವಿಧ ಸಲಹೆಗಳನ್ನು ನೀಡಿದರಲ್ಲದೇ ಭೌತಿಕವಾಗಿ ಶಾಲೆಗಳನ್ನು ತೆರೆಯುವ ಕುರಿತು ಆಲೋಚಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.

ಆನ್-ಲೈನ್ ದೂರದರ್ಶನ ಚಂದನಾ ಮೂಲಕ ಸಂವೇದಾ ಪಾಠಗಳು, ಯೂ-ಟ್ಯೂಬ್, ವಾಟ್ಸಾಪ್ ಮೂಲಕ ಹಾಗೆಯೇ ಮಕ್ಕಳು ವಾರದಲ್ಲಿ ಒಂದು ದಿನ ಶಾಲೆಗೆ ಬಂದು ಸಿದ್ಧಪಾಠಗಳನ್ನು ತೆಗೆದುಕೊಂಡು ಹೋಗಿ ಇನ್ನೊಂದು ದಿನ ಅವುಗಳೊಂದಿಗೆ ಬಂದು ಸಂಶಯಗಳ ನಿವಾರಣೆಗೆ ಶಿಕ್ಷಕರನ್ನು ಭೇಟಿ ಮಾಡುವಂತಹುದು. ಶಾಲೆಗೆ ಬರಲಾಗದ ಮಕ್ಕಳಿಗೆ ಆಯಾ ಗ್ರಾಮಪಂಚಾಯತ್, ಅಧಿಕಾರಿಗಳ ಇಲ್ಲವೇ ಸ್ವಯಂ ಸೇವಕರ ಮೂಲಕ ಸಿದ್ಧಪಠ್ಯಗಳನ್ನು ನೀಡುವಂತಹ ಸಲಹೆಗಳೂ ವ್ಯಕ್ತವಾದವೆಂದು ಅವರು ಮಾಹಿತಿ ನೀಡಿದರು.

ವಿಶೇಷವಾಗಿ ಡಾ.ದೇವಿಶೆಟ್ಟಿ ವರದಿಯಂತೆ ತರಗತಿವಾರು, ಆಯಾ ಪ್ರದೇಶದ ಪಾಸಿಟಿವಿಟಿ ದರದ ಅನ್ವಯ ಶಾಲಾ ತರಗತಿಗಳನ್ನು ತೆರೆಯುವುದಾಗಲಿ ಇಲ್ಲವೇ ಶಾಲಾವರಣದಲ್ಲಿ ವಿದ್ಯಾಗಮ ತರಗತಿಗಳನ್ನು ನಡೆಸುವುದರ ಕುರಿತು ಆದ್ಯತೆ ನೀಡಬೇಕೆಂಬುದು ಬಹುತೇಕರ ಸಲಹೆಯಾಗಿದ್ದು, ಸದ್ಯದಲ್ಲೇ ಟಾಸ್ಕ್‍ಪೋರ್ಸ್ ರಚಿಸಿ ಒಂದು ತೀರ್ಮಾನಕ್ಕೂ ಬರಲಾಗುವುದು.

ಸುರಕ್ಷಿತ ವಾತಾವರಣದಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆಸುವ ಸಂಬಂಧದಲ್ಲಿ ಜೂ. 28ರಂದು ಜಿಲ್ಲಾಧಿಕಾರಿಗಳು, ಸಿಇಒ, ಎಸ್ಪಿ, ಡಿಎಚ್‍ಒ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯವರು ಭಾಗಿಯಾಗಲಿರುವುದರಿಂದ ಈ ವಿಷಯಗಳ ಕುರಿತು ಅವರೊಂದಿಗೂ ಚರ್ಚೆ ನಡೆಸಲಾಗುವುದು. ಮಕ್ಕಳಿಗೆ ಆದಷ್ಟು ಬೇಗ ಪಠ್ಯಪುಸ್ತಕ ಪೂರೈಸಲು ಕ್ರಮ ವಹಿಸಲಾಗುವುದು. ಹಾಗೆಯೇ ಮಧ್ಯಾಹ್ನ ಉಪಹಾರ ಸಾಮಗ್ರಿಗಳನ್ನು ಸಮಸ್ಯೆಯಿಲ್ಲದೇ ವಿತರಣೆ ಕುರಿತಂತೆಯೂ ಹೆಚ್ಚಿನ ಗಮನ ಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸುರೇಶ್‍ ಕುಮಾರ್ ತಿಳಿಸಿದರು.

ಸಭೆಯಲ್ಲಿ ಶಿಕ್ಷಣ ಫೌಂಡೇಷನ್ ಪ್ರಸನ್ನ ಒಡೆಯರ್, ಪ್ರಥಮ್ ಫೌಂಡೇಷನ್ ಶೇಷಾದ್ರಿ, ಅಝೀಂ ಪ್ರೇಂ ಫೌಂಡೇಷನ್ ಋಷಿಕೇಶ್, ವರುಣಾ ನಲ್ಲೂರು, ಅಕ್ಷರ ಫೌಂಡೇಷನ್ ವೈಜಯಂತಿ, ಶಿಕ್ಷಾ ಲೋಕಂನ ಪ್ರಸನ್ನ ಕುಮಾರ್, ನಿವೃತ್ತ ಪ್ರಾಚಾರ್ಯ ವಿಜಯಕುಮಾರಿ, ಸಾಶಿಇ ಆಯುಕ್ತ ವಿ. ಅನ್ಬುಕುಮಾರ್ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News