ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದ ಶಾಸಕ ತನ್ವೀರ್ ಸೇಠ್

Update: 2021-06-25 12:31 GMT

ಮೈಸೂರು,ಜೂ.25: ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ. ಹಾಗಂತ ಯಾರೋ ಬೆಂಬಲಿಗರ ಬಳಿ ಕೂಗಿಸುವುದು ಸರಿಯಲ್ಲ ಎಂದು ಶಾಸಕ ತನ್ವೀರ್ ಸೇಠ್ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಾನೂ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆ ಹೊಂದಿದ್ದೇನೆ. ಅಲ್ಪಸಂಖ್ಯಾತರು ಸಿಎಂ ಆಗಬೇಕು ಎನ್ನುವ ಆಸೆ ಇಟ್ಟುಕೊಳ್ಳುವುದು ತಪ್ಪಲ್ಲ. ಅಲ್ಪಸಂಖ್ಯಾತರು ಯಾರು ಸಮರ್ಥರಿದ್ದಾರೆ ಅವರೆಲ್ಲ ಸಿಎಂ ಆಗುವ ಆಸೆ ಇಟ್ಟುಕೊಳ್ಳಬಹುದು. ಪೈಪೋಟಿ ಮಾಡುವುದರಲ್ಲಿ ನಾನೂ ಸಮರ್ಥನಿದ್ದೇನೆ ಎಂದು ಹೇಳಿದರು.

ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಮುಖ್ಯ ಉದ್ದೇಶ ಆಗಬೇಕು. ಅದು ಬಿಟ್ಟು ಪಕ್ಷಕ್ಕೆ ಹಿನ್ನಡೆಯಾಗುವಂತಹ ವರ್ತನೆ ಸರಿಯಲ್ಲ. ಯಾರು ಮುಖ್ಯಮಂತ್ರಿ ಆಗಬೇಕು ಎಂದು ಕೂಗುತ್ತಿದ್ದಾರೋ ಅವರಿಗೆ ಮತ್ತು ಮುಖ್ಯಮಂತ್ರಿ ಎಂದು ಯಾರನ್ನು ಹೇಳುತ್ತಾರೋ ಅವರಿಗೂ ತೊಂದರೆಯಾಗಲಿದೆ ಎಂದು ಹೇಳಿದರು.

ನಾನು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯಿಂದ ಬಂದಿರುವವನು, ನಾನು ಯಾರ ಪರವೂ ಇಲ್ಲ ವಿರುದ್ಧವೂ ಇಲ್ಲ. ನನ್ನ ರಕ್ತದಲ್ಲಿ ಕಾಂಗ್ರೆಸ್ ಪಕ್ಷ ಇದೆ. ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬೇರೆ ಕಡೆ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆಗೆ ಅವಕಾಶ ಇಲ್ಲ. ಈ ಹಿಂದೆ ಗುಂಪುಗಾರಿಕೆ ಮಾಡಿದವರ ಪರಿಸ್ಥಿತಿ ಏನಾಗಿದೆ ಎಂಬ ಇತಿಹಾಸವನ್ನು ನೆನಪು ಮಾಡಿಕೊಳ್ಳಬೇಕು. ಹಾಗಾಗಿ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News