ಜುಲೈ19, 22ರಂದು ಎಸೆಸೆಲ್ಸಿ ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ
ಬೆಂಗಳೂರು, ಜೂ. 28: `ರಾಜ್ಯದ ಹತ್ತನೆ ತರಗತಿ ವಿದ್ಯಾರ್ಥಿಗಳ ಹಾಗೂ ಪೋಷಕರ ಬಹುದಿನಗಳ ನಿರೀಕ್ಷೆಯಾಗಿದ್ದ 2020-21ನೆ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳಿಗೆ ದಿನಾಂಕ ನಿಗದಿಪಡಿಸಲಾಗಿದ್ದು, ಜುಲೈ 19 ಮತ್ತು 22ರಂದು ಎರಡು ದಿನಗಳ ಕಾಲ ಈ ಪರೀಕ್ಷೆಗಳು ನಡೆಯಲಿವೆ' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.
ಸೋಮವಾರ ಪರೀಕ್ಷೆ ಸಿದ್ಧತೆ ಕುರಿತು ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್ಪಿ, ಡಿಎಚ್ಒ, ಖಜಾನಾಧಿಕಾರಿಗಳು ಹಾಗೂ ಶಿಕ್ಷಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಮಾರ್ಗದರ್ಶನ ನೀಡಿದ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, `ಜುಲೈ 19ರಂದು ಕೋರ್ ವಿಷಯಗಳಿಗೆ ಮತ್ತು 22ರಂದು ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭಗೊಳ್ಳಲಿವೆ' ಎಂದು ತಿಳಿಸಿದರು.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನಿರ್ದೇಶಿಸಿರುವ ಎಸ್ಒಪಿ ಪರಿಗಣಿಸಿ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಈ ಕುರಿತಂತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾರ್ಗದರ್ಶನ ನೀಡಲಾಗಿದೆ. ಹಾಗೆಯೇ ಜಿಲ್ಲಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ತಮ್ಮ ಶಂಕೆಗಳನ್ನು ನಿವಾರಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರು ಭಾಗವಹಿಸಿ ತಮ್ಮ ಇಲಾಖೆಯಿಂದ ಕೈಗೊಳ್ಳಬಹುದಾದ ಕ್ರಮಗಳನ್ನು ವಿವರಿಸಿದರು.
ಸಿಬ್ಬಂದಿಗೆ ಲಸಿಕೆ: ವಿಶೇಷವಾಗಿ ಎಸೆಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ನಿಯೋಜಿತರಾಗುವ ಎಲ್ಲ ಸಿಬ್ಬಂದಿಗೆ ತಕ್ಷಣವೇ ಕೋವಿಡ್ ಲಸಿಕೆ ಒದಗಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ 45 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ. 18ರಿಂದ 44 ವರ್ಷದೊಳಗಿನ ಸಿಬ್ಬಂದಿಗೆ ಲಸಿಕೆ ಒದಗಿಸಲು ಸರಕಾರ ತ್ವರಿತಗತಿಯಲ್ಲಿ ಕ್ರಮ ವಹಿಸಲಿದೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದರು.
ಸುರಕ್ಷಾ ಕೇಂದ್ರಗಳು: ಪರೀಕ್ಷಾ ಕೇಂದ್ರಗಳು ಸುರಕ್ಷಾ ಕೇಂದ್ರಗಳಾಗಿರಲಿವೆ. ಪ್ರತಿದಿನವೂ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ಪರೀಕ್ಷೆ ನಂತರ ಸೋಂಕು ನಿವಾರಕ ದ್ರಾವಣದಿಂದ ಸ್ಥಳೀಯಾಡಳಿತ ಸಂಸ್ಥೆಗಳ ನೆರವಿನಿಂದ ಪರೀಕ್ಷಾ ಕೇಂದ್ರ, ಪರೀಕ್ಷಾ ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳನ್ನು ಸ್ಯಾನಿಟೈಜೇಷನ್ ಮಾಡುವುದು, ಪರೀಕ್ಷಾ ಕೇಂದ್ರಕ್ಕೆ ಆಗಮನ ಮತ್ತು ನಿರ್ಗಮನ ಹಾಗೆಯೇ ಕೊಠಡಿ ಪ್ರವೇಶ ಸಮಯದಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳುವುದು. ಪರೀಕ್ಷಾ ಕೇಂದ್ರದ ಪ್ರವೇಶದ ಸಂದರ್ಭದಲ್ಲಿ ಮಕ್ಕಳ ಕೈಗೆ ಸ್ಯಾನಿಟೈಜ್ ಮಾಡುವುದು. ಒಂದು ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿರಬೇಕು. ಒಂದು ಡೆಸ್ಕ್ ಗೆ ಒಬ್ಬ ಪರೀಕ್ಷಾರ್ಥಿ ಮಾತ್ರವೇ ಇರಬೇಕು. ಮಕ್ಕಳು ಯಾವ ಸಮಯದಲ್ಲೂ ಗುಂಪುಗೂಡುವುದನ್ನು ತಡೆಯುವುದು. ಮನೆಯಿಂದ ನೀರಿನ ಬಾಟಲ್ ಮತ್ತು ಊಟದ ಡಬ್ಬಿ ತರುವುದಕ್ಕೆ ಅವಕಾಶ ಕಲ್ಪಿಸುವುದು. ಪರೀಕ್ಷಾ ಕೊಠಡಿಯಲ್ಲಿ ಮಳೆ ನೀರು ಇರುಚಲು ಸಿಡಿಯದಂತೆ ಕ್ರಮ ವಹಿಸುವುದು. ಗಾಮೀಣ ವಿಭಾಗದ ಅಭ್ಯರ್ಥಿಗಳು ಸಾಧ್ಯವಾದಷ್ಟು ತಾಲೂಕು ಕೇಂದ್ರಗಳಿಗೆ ಹೋಗದಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದನ್ನು ಖಾತರಿಪಡಿಸಿಕೊಳ್ಳಬೇಕೆಂದು ಎಸ್ಓಪಿಯಲ್ಲಿ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ವಿಶೇಷ ಕೊಠಡಿ: ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಇಲ್ಲವೆ ಈ ಲಕ್ಷಣಗಳಿರುವ ಅಭ್ಯರ್ಥಿಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಬೇಕೆಂದೂ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಪ್ರವೇಶವಾದೊಡನೆ ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್ ಪ್ರವೇಶಿಸುವಂತೆ ನಿರ್ದೇಶಿಸುವುದು. ಆರೋಗ್ಯ ಕೌಂಟರ್ ಗಳು ಬೆಳಗ್ಗೆ 8.30ಕ್ಕೆ ಆರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ತೆರದಿರಲಿವೆ. ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳಿರುವುದನ್ನು ಖಾತರಿಪಡಿಸಬೇಕೆಂದು ಸೂಚಿಸಲಾಗಿದೆ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲೇ ಮಾಸ್ಕ್ ನೀಡಲಾಗುತ್ತದೆ ಎಂದು ಸುರೇಶ್ ಕುಮಾರ್ ವಿವರಿಸಿದರು.
ತುರ್ತು ಚಿಕಿತ್ಸಾ ವಾಹನ: ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನವನ್ನು ಮೀಸಲಿಡುವುದು. ಪರೀಕ್ಷಾ ಸಿಬ್ಬಂದಿಯೂ ಯಾವುದೇ ಸಂದರ್ಭದಲ್ಲೂ ಅಂತರ ಕಾಪಾಡಿಕೊಳ್ಳುವುದು. ಅಗತ್ಯ ಬಿದ್ದರೆ ಸಿಬ್ಬಂದಿ ಫೇಸ್ಶೀಲ್ಡ್ ಬಳಸುವುದು. ಗಡಿ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೊರ ರಾಜ್ಯದಿಂದ ಬರುವ ಪರೀಕ್ಷಾರ್ಥಿಗಳಿಗೆ ಅನುವಾಗುವಂತೆ ಪರೀಕ್ಷೆಗಳ ದಿವಸದಂದು ರಾಜ್ಯದ ಗಡಿ ಪ್ರವೇಶಕ್ಕೆ ಜಿಲ್ಲಾಡಳಿತದ ಸಮನ್ವಯದೊಂದಿಗೆ ಕ್ರಮ ವಹಿಸಬೇಕು ಎಂದು ಅವರು ಮಾಹಿತಿ ನೀಡಿದರು.
ಕೋವಿಡ್ ಕೇರ್ ಸೆಂಟರ್ ಸ್ಥಾಪನೆ: ಪರೀಕ್ಷಾರ್ಥಿಗಳಿಗೆ ಕೋವಿಡ್ ಪಾಸಿಟೀವ್ ಕಂಡು ಬಂದಿದ್ದರೆ ಅಂತಹ ಪರೀಕ್ಷಾರ್ಥಿಗೆ ತಾಲೂಕಿಗೊಂದು ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಿ ಅಲ್ಲಿಯೇ ಅವರಿಗೆ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುತ್ತದೆ. ಕುಟುಂಬದಲ್ಲಿ ಯಾರಿಗಾದರೂ ಸೋಂಕು ತಗಲಿದ್ದು, ಪರೀಕ್ಷಾರ್ಥಿ ಐಸೋಲೇಷನ್ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಆರೋಗ್ಯವಾಗಿರುವುದು ಕಂಡುಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್ ಕೇರ್ ಸೆಂಟರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಕೋವಿಡ್ ಆರೈಕೆ ಕೇಂದ್ರದಲ್ಲಿ ಒಂದು ಆಂಬುಲೆನ್ಸ್ ವಾಹನ ಕಾಯ್ದಿರಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ವಿವರಿಸಿದರು.
ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಮತ್ತು ಉತ್ತರ ಪತ್ರಿಕೆ ರವಾನೆ, ಪರೀಕ್ಷೆ ನಂತರ ಒಎಂಆರ್ ಶೀಟ್ಗಳ ರವಾನೆ ಕುರಿತು ನಿಗದಿತ ಸೂಚನೆಗಳನ್ನು ಒದಗಿಸಲಾಗಿದ್ದು, ಹಾಗೂ ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆ ಯಶಸ್ಸಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದ ಅವರು, ಯಾವುದೆ ಪ್ರಕರಣಗಳಿಗೆ ಅವಕಾಶವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು, ಪರೀಕ್ಷಾ ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಸೆಂಟರ್ ಗಳನ್ನು ಮುಚ್ಚಿಸುವುದು, ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸುವುದು, ಪರೀಕ್ಷಾ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ರವಾನೆ ಸಮಯದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವುದು, ಪರೀಕ್ಷಾ ಕೇಂದ್ರದ ಬಳಿ ಸಂಚಾರ ಒತ್ತಡವಾದಂತೆ ಕ್ರಮ ವಹಿಸುವುದೂ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.
8,76,581 ವಿದ್ಯಾರ್ಥಿಗಳ ನೊಂದಣಿ: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ 8,76,581. ಅದರಲ್ಲಿ 4,72,643 ವಿದ್ಯಾರ್ಥಿಗಳು ಮತ್ತು 4,03,938 ವಿದ್ಯಾರ್ಥಿನಿಯರಿದ್ದಾರೆ. ಅದರಲ್ಲಿ 7,83,955 ಹೊಸ ಅಭ್ಯರ್ಥಿಗಳು, 977-ಪುನರಾವರ್ತಿತ ವಿದ್ಯಾರ್ಥಿಗಳು, 21,817-ಖಾಸಗಿ ವಿದ್ಯಾರ್ಥಿಗಳು, 9,419-ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು, ಹೊಸ ಸ್ಕೀಂ ವಿದ್ಯಾರ್ಥಿಗಳು- 392, ಹೊಸ ಸ್ಕೀಂ ಪುನರಾವರ್ತಿತ ವಿದ್ಯಾರ್ಥಿಗಳು-21 ಸೇರಿದ್ದಾರೆ.
ಪರೀಕ್ಷೆಗೆ ನೋಂದಾಯಿಸಿರುವ ಒಟ್ಟು ಶಾಲೆಗಳ ಸಂಖ್ಯೆ-14,927, ಅದರಲ್ಲಿ, ಸರಕಾರಿ-5289, ಅನುದಾನಿತ-3392, ಅನುದಾನ ರಹಿತ-6246 ಶಾಲೆಗಳು ನೋಂದಾಯಿಸಿಕೊಂಡಿವೆ. ಪರೀಕ್ಷೆಗೆ ನೋಂದಾಯಿಸಿರುವ ವಿದ್ಯಾರ್ಥಿಗಳ ಸಂಖ್ಯೆ-8,76,581, ಸರಕಾರಿ-3,51,303, ಅನುದಾನಿತ-2,35,908, ಅನುದಾನರಹಿತ-2,89,370 ಅಭ್ಯರ್ಥಿಗಳಿದ್ದಾರೆ.
ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ-4,884, ಸರಕಾರಿ-1,831, ಅನುದಾನಿತ-1,294, ಅನುದಾನರಹಿತ-1,759 ಶಾಲೆಗಳ ಪರೀಕ್ಷಾ ಕೇಂದ್ರಗಳಿವೆ. ಸಾಮಾನ್ಯ ಪರೀಕ್ಷಾ ಕೇಂದ್ರಗಳು-4,708, ಖಾಸಗಿ ಪರೀಕ್ಷಾ ಕೇಂದ್ರಗಳು-176, ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು-2,166, ನಾನ್ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು -2,542 ಇವೆ ಎಂದು ಸುರೇಶ್ ಕುಮಾರ್ ವಿವರಿಸಿದರು.
73,066 ಪರೀಕ್ಷಾ ಕೊಠಡಿಗಳು: ಒಟ್ಟು ಪರೀಕ್ಷಾ ಕೊಠಡಿಗಳು-73,066, ಮುಖ್ಯಅಧೀಕ್ಷಕರು-4,884, ಪ್ರಶ್ನೆಪತ್ರಿಕೆ ಅಭಿರಕ್ಷಕರು-4,884, ಕೊಠಡಿ ಮೇಲ್ವಿಚಾರಕರು-80,389, ಸ್ಥಾನಿಕ ಜಾಗೃತ ದಳದವರು-4,884, ಮೊಬೈಲ್ ಸ್ವಾಧೀನಾಧಿಕಾರಿಗಳು-4,884, ದೈಹಿಕ ಶಿಕ್ಷಣ ಶಿಕ್ಷಕರು/ಇತರೆ ಶಿಕ್ಷಕರು-4,884, ಆಶಾ ಕಾರ್ಯಕರ್ತೆಯರು-9,768, ಆರಕ್ಷಕರು-4,884 ಮಂದಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆಂದು ಸಚಿವರು ವಿವರಿಸಿದರು.
ಅಂತಿಮ ಪ್ರವೇಶ ಪತ್ರವನ್ನು ಸಿದ್ಧಪಡಿಸಲಾಗಿದ್ದು, ಮಂಡಳಿಯ ಜಾಲತಾಣದ ಮುಖಾಂತರ ಶಾಲಾ ಲಾಗಿನ್ಗೆ ಜೂ.29ರಂದು ಅಪ್ಲೋಡ್ ಮಾಡಲಾಗುವುದು. ಒಟ್ಟು 14,927 ಶಾಲೆಗಳಿಂದ ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮುಖಾಂತರ ಶಾಲಾ ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ನಮೂದು ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಥರ್ಮಲ್ ಸ್ಕ್ಯಾನರ್: ಜೂನ್/ಜುಲೈ 2020ರ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಮಂಡಳಿಯಿಂದ ನೀಡಲಾಗಿದ್ದ `ಥರ್ಮಲ್ ಸ್ಕ್ಯಾನರ್'ಗಳನ್ನೇ ಈ ಪರೀಕ್ಷೆಗೂ ಉಪಯೋಗಿಸಿಕೊಳ್ಳಲಾಗುವುದು ಹಾಗೂ ಇದರ ಜೊತೆಗೆ ಈಗಾಗಲೇ ಎಂಬೆಸ್ಸಿ ಗ್ರೂಪ್ ಸಂಸ್ಥೆಯವರು ಸರಕಾರಿ ಪ್ರೌಢಶಾಲೆಗಳಿಗೆ 5 ಸಾವಿರ ಥರ್ಮಲ್ ಸ್ಕ್ಯಾನರ್ಗಳನ್ನು ನೀಡಿದ್ದು, ಇವುಗಳನ್ನು ಸಂಬಂಧಿಸಿದ ಉಪ ನಿರ್ದೇಶಕರು ತಮ್ಮ ಸುಪರ್ದಿಗೆ ಪಡೆದು ಪರೀಕ್ಷಾ ಕೇಂದ್ರಗಳಲ್ಲಿ ಉಪಯೋಗಿಸಿಕೊಳ್ಳಲಾಗುವುದು. ಇದಾದ ಬಳಿಕವೂ ಕೊರತೆ ಉಂಟಾದಲ್ಲಿ ಆರೋಗ್ಯ ಇಲಾಖೆಯವರಿಂದ ಪಡೆದು ಉಪಯೋಗಿಸಿಕೊಳ್ಳಲಾಗುವುದು. ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯವರಿಗೆ ಆ ಸಂದರ್ಭಕ್ಕೆ ಅನುಗುಣವಾಗಿ ಕೋವಿಡ್-19ರ ಆರ್ಎಟಿ ಇಲ್ಲವೆ ಆರ್ಟಿಪಿಸಿಆರ್ ಟೆಸ್ಟ್ ಮಾಡುವ ಕುರಿತು ಸಂಬಂಧಿಸಿದ ಜಿಲ್ಲಾಧಿಕಾರಿಗಳು ಕ್ರಮ ವಹಿಸಲಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯವರ ಸುರಕ್ಷತಾ ದೃಷ್ಟಿಯಿಂದ ಒಟ್ಟು 4884 ಪರೀಕ್ಷಾ ಕೇಂದ್ರಗಳಿಗೂ ಎಂಬೆಸ್ಸಿ ಗ್ರೂಪ್ ಸಂಸ್ಥೆಯವರು ಉಚಿತವಾಗಿ ಸ್ಯಾನಿಟೈಸರ್ ಗಳನ್ನು ಒದಗಿಸಲಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ಬಟ್ಟೆಯಿಂದ ತಯಾರಿಸಲಾದ ಇಲ್ಲವೆ ಸರ್ಜಿಕಲ್ ಮಾಸ್ಕ್ ಗಳನ್ನು ಬಳಸಬೇಕಾಗಿರುತ್ತದೆ. ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವ ಸುಮಾರು 1.30 ಲಕ್ಷ ಅಧಿಕಾರಿಗಳು/ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಮತ್ತು ರೋಗ ಲಕ್ಷಣಗಳು ಕಂಡುಬರುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎನ್-95 ಫೇಸ್ ಮಾಸ್ಕ್ ಗಳನ್ನು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯು ಉಚಿತವಾಗಿ ಒದಗಿಸಲಿದೆ'
-ಎಸ್.ಸುರೇಶ್ ಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ