ಇಬ್ಬರು ಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ
ಬಳ್ಳಾರಿ, ಜೂ. 28: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಹಸುಗೂಸುಗಳೊಂದಿಗೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಇಲ್ಲಿನ ಕೌಲ್ ಬಝಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಇಲ್ಲಿನ ಇಂದಿರಾ ನಗರ ನಿವಾಸಿಯಾದ ಸುನಿತಾ ಸಿದ್ದಪ್ಪ(25) ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ತನ್ನ ಮಕ್ಕಳಾದ ಯಶವಂತ್(4) ಹಾಗೂ ಸಾನ್ವಿ(3) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಗೊತ್ತಾಗಿದೆ.
ನಿನ್ನೆ ತಡರಾತ್ರಿ ಮನೆಯ ಮುಂಭಾಗದ ವಾಟರ್ ಟ್ಯಾಂಕ್ ನೀರಿನಲ್ಲಿ ಮಕ್ಕಳನ್ನು ಮುಳುಗಿಸಿ, ಆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಕೌಟುಂಬಿಕ ಕಲಹವೇ ಕಾರಣ ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಹಲವು ದಿನಗಳಿಂದ ದಂಪತಿಯ ನಡುವೆ ಜಗಳವಾಗುತ್ತಿತ್ತು. ಇದೇ ಕಾರಣಕ್ಕಾಗಿ ಸುನಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ನಗರದ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.