ವೈದ್ಯರಿಗೆ ಕಡ್ಡಾಯ ಗ್ರಾಮೀಣ ಸೇವೆ: ಒತ್ತಾಯಿಸದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ

Update: 2021-07-01 15:20 GMT

ಬೆಂಗಳೂರು, ಜು.1: ಎಂಬಿಬಿಎಸ್ ಪದವಿ ಪೂರ್ಣಗೊಳಿಸಿರುವ 180 ಮಂದಿ ವೈದ್ಯರು ಕಡ್ಡಾಯ ಗ್ರಾಮೀಣ ಸೇವೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, ಈ ವೈದ್ಯರಿಗೆ ಮುಂದಿನ ಎರಡು ವಾರಗಳ ಕಾಲ ಗ್ರಾಮೀಣ ಸೇವೆಗೆ ನೋಂದಾಯಿಸಿಕೊಳ್ಳಲು ಒತ್ತಾಯಿಸದಂತೆ ರಾಜ್ಯ ಸರಕಾರಕ್ಕೆ ಮಧ್ಯಂತರ ಆದೇಶ ನೀಡಿದೆ.

ಕಡ್ಡಾಯ ಗ್ರಾಮೀಣ ಸೇವೆ ಪ್ರಶ್ನಿಸಿ ವೈದ್ಯರಾದ ಡಾ.ಎನ್.ಪ್ರಾರ್ಥನಾ ಹಾಗೂ ಇತರೆ 180 ಮಂದಿ ವೈದ್ಯರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಈ ಮಧ್ಯಂತರ ಆದೇಶ ಜಾರಿ ಮಾಡಿದೆ. ಇದೇ ವೇಳೆ ನ್ಯಾಯಾಲಯದ ಈ ಮಧ್ಯಂತರ ಆದೇಶ ಅರ್ಜಿ ಸಲ್ಲಿಸಿರುವ 180 ಮಂದಿ ವೈದ್ಯರಿಗಷ್ಟೇ ಅನ್ವಯಿಸಲಿದೆ. ಉಳಿದಂತೆ ಕಡ್ಡಾಯ ಗ್ರಾಮೀಣ ಸೇವೆ ಸಂಬಂಧ ಸರಕಾರ ಹೊರಡಿಸಿರುವ ಆದೇಶಕ್ಕೆ ಅನ್ವಯಿಸದು ಎಂದು ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: 2021ರಲ್ಲಿ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿರುವ ವೈದ್ಯರು ಕಡ್ಡಾಯ ಗ್ರಾಮೀಣ ಸೇವೆಗೆ ನೋಂದಾಯಿಸಿಕೊಳ್ಳುವಂತೆ ರಾಜ್ಯ ಸರಕಾರ ಜೂ.8ರಂದು ಆದೇಶ ಹೊರಡಿಸಿತ್ತು. ಅಲ್ಲದೇ, ಜೂ.17ರಂದು ಮತ್ತೊಂದು ಅಧಿಸೂಚನೆ ಹೊರಡಿಸಿ, ಜೂ.30ರಿಂದಲೇ ಕಡ್ಡಾಯ ಗ್ರಾಮೀಣ ಸೇವೆ ಪ್ರಾರಂಭವಾಗಲಿದ್ದು ನೂತನ ವೈದ್ಯರು ನೋಂದಾಯಿಸಿಕೊಳ್ಳುವಂತೆ ಸೂಚಿಸಿತ್ತು.

ಸರಕಾರದ ಈ ಕ್ರಮ ನಮ್ಮ ಉನ್ನತ ವ್ಯಾಸಂಗಕ್ಕೆ ಅಡ್ಡಿಯಾಗಲಿದೆ. ಸ್ನಾತಕೋತ್ತರ ವೈದ್ಯಕೀಯ ಪದವಿ ಓದುವ ಆಕಾಂಕ್ಷೆ ಇಟ್ಟುಕೊಂಡಿರುವ ನಮಗೆ ಈ ಕಡ್ಡಾಯ ಸೇವೆಯಿಂದ ವಿನಾಯಿತಿ ಕೊಡಿಸಬೇಕು ಎಂದು ಅರ್ಜಿದಾರ ವೈದ್ಯರು ಕೋರಿದ್ದಾರೆ.

ಅಲ್ಲದೇ, ಖಾಸಗಿ ಮ್ಯಾನೇಜ್ಮೆಂಟ್ ಕೋಟಾದಡಿ ಸೀಟು ಪಡೆದು ವೈದ್ಯಕೀಯ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯಿಸಿಲ್ಲ. ಹೀಗಾಗಿ ಸರಕಾರದ ಆದೇಶ ಒಂದೇ ಬ್ಯಾಚ್‍ನಲ್ಲಿ ಓದಿದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡಿದೆ. ಅದೇ ರೀತಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾಯ್ದೆ-2019 ಜಾರಿಗೆ ಬಂದ ನಂತರ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಯನ್ನು ನಿಯಂತ್ರಿಸುವ ಅಧಿಕಾರ ರಾಜ್ಯ ಸರಕಾರಗಳಿಗೆ ಇಲ್ಲವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News