ಗೃಹ ಕಾರ್ಮಿಕರಿಗೆ ಕೋವಿಡ್ ನೆರವು ನೀಡಲು ಕಮಿಷನ್: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ

Update: 2021-07-01 15:24 GMT

ಬೆಂಗಳೂರು, ಜು.1: ಲಾಕ್‍ಡೌನ್ ಜಾರಿ ಹಿನ್ನೆಲೆಯಲ್ಲಿ ಸರಕಾರ ಘೋಷಿಸಿದ್ದ 2 ಸಾವಿರ ರೂ. ಪರಿಹಾರ ಪಡೆಯಲು ಅರ್ಜಿ ಸಲ್ಲಿಸುವ ಕಾರ್ಮಿಕರಿಂದ ಕಮಿಷನ್ ವಸೂಲಿ ಮಾಡಿರುವ ಬಗ್ಗೆ ಕಾನೂನು ಸೇವಾ ಪ್ರಾಧಿಕಾರ ನೀಡಿರುವ ವರದಿ ಆಧರಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಗೃಹ ಕಾರ್ಮಿಕರಿಗೆ ಕೋವಿಡ್ ಪರಿಹಾರ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ. ಹಾಗೆಯೇ, ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಹಲವಾರು ಷರತ್ತುಗಳನ್ನು ವಿಧಿಸಿದ್ದು, ಅವುಗಳನ್ನು ಪೂರೈಸಲು ಫಲಾನುಭವಿ ಕಾರ್ಮಿಕರಿಗೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಷರತ್ತುಗಳನ್ನು ಮಾರ್ಪಡಿಸುವಂತೆ ಸರಕಾರಕ್ಕೆ ನಿರ್ದೇಶಿಸಿದೆ.

ಪ್ರಕರಣ ಹಿನ್ನೆಲೆ: ಹಿಂದಿನ ವಿಚಾರಣೆ ವೇಳೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಸರಕಾರ ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕಾರ್ಮಿಕರು ನೆರವು ನೀಡಲು ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಕಾರ್ಮಿಕರಿಗೆ ತಲಾ 2 ಸಾವಿರ ನೀಡಲು ಮುಂದಾಗಿದೆ. ಈ ಹಣ ಪಡೆದುಕೊಳ್ಳಲು ಕಾರ್ಮಿಕರು ಸೇವಾ ಸಿಂಧು ಕೇಂದ್ರಗಳಿಗೆ ಅರ್ಜಿ ಸಲ್ಲಿಸಲು ತೆರಳಿದಾಗ ಅರ್ಜಿ ಪ್ರೊಸೆಸ್ ಫೀ, ಕಮಿಷನ್ ಎಂದು ತಲಾ 150 ರಿಂದ 200 ರೂಪಾಯಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾ ಪ್ರಾಧಿಕಾರಗಳಿಗೂ ಈ ಮಾಹಿತಿ ಖಚಿತವಾಗಿದೆ. ಹೀಗಾಗಿ, ಕಾರ್ಮಿಕರು ನೆರವು ಹಣ ಪಡೆದುಕೊಳ್ಳಲು ಷರತ್ತು ಹಾಗೂ ನಿಯಮಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ತಿಳಿಸಿತ್ತು.

ಕಾರ್ಮಿಕರು ಹಣ ಪಡೆದುಕೊಳ್ಳಲು ಕಮಿಷನ್ ನೀಡಬೇಕಾದ ವಿಚಾರವಾಗಿ ತೀವ್ರ ಬೇಸರ ವ್ಯಕ್ತಪಡಿಸಿದ್ದ ಸಿಜೆ ನೇತೃತ್ವದ ವಿಭಾಗೀಯ ಪೀಠ, 2 ಸಾವಿರ ರೂಪಾಯಿಯಷ್ಟು ಸಣ್ಣ ಪರಿಹಾರದ ಹಣ ಪಡೆದುಕೊಳ್ಳಲೂ ಕಮಿಷನ್ ಕೊಡಬೇಕಾಗಿ ಬಂದಿರುವುದು ನಿಜಕ್ಕೂ ಶೋಚನೀಯ. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಅರ್ಹ ಫಲಾನುಭವಿಗಳಿಗೆ ಯಾವುದೇ ಸಮಸ್ಯೆಯಾಗದೆ ಪರಿಹಾರ ಪಡೆದುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News