ಚಿಕ್ಕಮಗಳೂರು: ಜು.2ರಿಂದ ಜು.19ರವರೆಗೆ ಲಾಕ್ಡೌನ್ ನಿರ್ಬಂಧಗಳಲ್ಲಿ ಸಡಿಲಿಕೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಜು.೫ರಿಂದ ೧೯ರವರೆಗೆ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜು.೫ ಸೋಮವಾರದಿಂದ ಜು.೧೯ರವರೆಗೆ ಬೆಳಗ್ಗೆ ೬ರಿಂದ ಸಂಜೆ ೫ರವರೆಗೆ ಎಲ್ಲ ಅಂಗಡಿ ಮುಂಗಟ್ಟುಗಳೂ ಸೇರಿದಂತೆ ಎಲ್ಲ ರೀತಿಯ ವ್ಯಾಪಾರ ಚಟುವಟಿಕೆಗಳನ್ನು ಆರಂಭಕ್ಕೆ ಜಿಲ್ಲಾಡಳಿತ ಅನುವು ಮಾಡಿಕೊಟ್ಟಿದೆ.
ಜು.೫ರಿಂದ ೧೯ರವರೆಗೆ ಬೆಳಗ್ಗೆ ೬ರಿಂದ ಸಂಜೆ ೫ರವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳು ಮತ್ತು ವಾಣಿಜ್ಯ ಮಳಿಗೆಗಳನ್ನು ತೆರೆದು ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು, ವ್ಯಾಪಾರಿಗಳು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಚಿತ್ರಮಂದಿರಗಳು, ಸಿನಿಮಾ ಹಾಲ್, ಪಬ್ಗಳ ಕಾರ್ಯಾರಂಭವನ್ನು ನಿರ್ಬಂಧಿಸಿದ್ದು, ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಸೇರಿದಂತೆ ಇತರ ಸಭೆ ಮತ್ತು ಸಮಾರಂಭಗಳನ್ನು ನಡೆಸಲು ನಿರ್ಬಂಧಿಸಲಾಗಿದೆ. ಶೈಕ್ಷಣಿಕ ಸಂಸ್ಥೆಗಳು, ಟುಟೋರಿಯಲ್ಗಳು ಕಾಲೇಜುಗಳನ್ನು ಮುಂದಿನ ಆದೇಶದವರೆಗೂ ತೆರೆಯುವುದನ್ನು ನಿರ್ಬಂಧಿಸಲಾಗಿದೆ. ಈಜುಕೊಳಗಳಲ್ಲಿ ಸ್ಪರ್ಧಾತ್ಮಕ ಉದ್ದೇಶಕ್ಕಾಗಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ತೆರೆಯಲು ಅವಕಾಶ ನೀಡಲಾಗಿದೆ. ಕ್ರೀಡಾ ಸಂಕೀರ್ಣ ಮತ್ತು ಕ್ರೀಡಾಂಗಣಗಳನ್ನು ಕ್ರೀಡಾಪಟುಗಳ ಕ್ರೀಡಾಭ್ಯಾಸಕ್ಕೆ ಮಾತ್ರ ಅನುಮತಿಸಲಾಗಿದೆ. ಪ್ರೇಕ್ಷಕರಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆಸನ ಸಾಮರ್ಧ್ಯದವರೆಗೆ ಸಾರ್ವಜನಿಕ ಸಾರಿಗೆ ಸಂಚರಿಸಲು ಅನುಮತಿಸಲಾಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿರುವ ಜಿಲ್ಲಾಧಿಕಾರಿ ಜಿಲ್ಲಾದ್ಯಂತ ಪ್ರತಿದಿನ ರಾತ್ರಿ ೯ಗಂಟೆಯಿಂದ ಬೆಳಗ್ಗೆ ೫ಗಂಟೆಯವರೆಗೂ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಿನಾಕಾರಣ ಜನ ಹಾಗೂ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆದರೆ ರೋಗಿಗಳು ಮತ್ತು ಅವರ ಪರಿಚಾರಕರು ತುರ್ತು ಸಂದರ್ಭಗಳಲ್ಲಿ ಓಡಾಡಲು ಅವಕಾಶ ನೀಡಲಾಗಿದೆ.
ರಾತ್ರಿ ವೇಳೆ ಕಾರ್ಯನಿರ್ವಹಿಸುವ ಕೈಗಾರಿಕೆಗಳು, ಕಂಪೆನಿಗಳು, ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಸಂಚರಿಸುವ ವೇಳೆ ಗುರುತಿನ ಚೀಟಿ ತೋರಿಸುವುದು ಕಡ್ಡಾಯವಾಗಿದೆ. ದೂರವಾಣಿ ಮತ್ತು ಅಂತರ್ಜಾಲ ಸೇವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಸಂಸ್ಥೆಯಿಂದ ಪಡೆದಿರುವ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸಬಹುದಾಗಿದೆ. ಈ ಸಂಸ್ಥೆಗಳು ಅಗತ್ಯ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕು. ಉಳಿದ ಸಿಬ್ಬಂದಿ ಮನೆಯಿಂದ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೆಡಿಕಲ್, ಫಾರ್ಮಸಿ ತುರ್ತು ಅಗತ್ಯ ಸೇವೆಗಳಿಗೆ ಸಂಪೂರ್ಣ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಎಲ್ಲಾ ರೀತಿಯ ಸರುಕು ಸಾಗಣೆ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಕ್ಕೆ ಹೋಗುವ ಖಾಸಗಿ ವಾಹನ ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಟಿಕೆಟ್ಗಳನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿರುವ ಅವರು, ಈ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಮದುವೆ ಸಮಾರಂಭದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ೧೦೦ ಜನರು ಭಾಗವಹಿಸಲು ಅನುಮತಿ ನೀಡಲಾಗಿದೆ. ಶವ ಸಂಸ್ಕಾರ ಕಾರ್ಯದಲ್ಲಿ ೨೦ ಜನರು ಭಾಗವಹಿಸಲು ಅವಕಾಶ ನೀಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶ, ದೇವರ ದರ್ಶನ, ಪೂಜೆ, ಪ್ರಾರ್ಥನೆ ಮತ್ತು ಆರಥಿ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ದೊಡ್ಡ ದೇವಸ್ಥಾನಗಳಲ್ಲಿ ೧೦೦ ಮಂದಿ ಹಾಗೂ ಸಣ್ಣ ದೇವಸ್ಥಾನ ಪ್ರಾರ್ಥನಾ ಮಂದಿರಗಳಲ್ಲಿ ೨೦ ಜನರು ಭಾಗವಹಿಸಲು ಅವಕಾಶ ನೀಡಲಾಗಿದೆ.