ದ್ವಿತೀಯ ಪಿಯುಸಿ ಫಲಿತಾಂಶ: ಮಾರ್ಗಸೂಚಿ ಪ್ರಕಟಿಸಿದ ಸಚಿವ ಸುರೇಶ್ ಕುಮಾರ್

Update: 2021-07-05 14:27 GMT

ಬೆಂಗಳೂರು, ಜು.5: ದ್ವಿತೀಯ ಪಿಯುಸಿ ಫಲಿತಾಂಶ ಸಂಬಂಧ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಸೋಮವಾರ ಈ ಕುರಿತು ಪ್ರಕಟನೆ ಬಿಡುಗಡೆ ಮಾಡಿರುವ ಅವರು, 2020-21ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸೆಸ್ಸೆಲ್ಸಿಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದ ಅವರು, ಒಂದು ವೇಳೆ ಘೋಷಿತ ಫಲಿತಾಂಶದಿಂದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮುಂದಿನ ದಿನಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ ಎಂದರು.

ಅಭ್ಯರ್ಥಿಗಳ ತೇರ್ಗಡೆ: ಕೋವಿಡ್-19 ಸೋಂಕು ಹಿನ್ನೆಲೆ 2020-21ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದ ಪುನರಾವರ್ತಿತ ಅಭ್ಯರ್ಥಿಗಳನ್ನು ಉತ್ತೀರ್ಣಗೊಳಿಸಲು ಇಲಾಖೆ ನಿರ್ಧರಿಸಿದೆ ಎಂದು ತಿಳಿಸಿದರು. ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು ಮತ್ತು ಶೇ.5ರಷ್ಟು ಕೃಪಾಂಕಗಳನ್ನು ನೀಡಿ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಅವರು ವಿವರಿಸಿದರು.

ಅಲ್ಲದೆ, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರ ಕೈಗೊಂಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಪುನರಾವರ್ತಿತ ಅಭ್ಯರ್ಥಿಗಳನ್ನೂ ಸಹ ಉತ್ತೀರ್ಣಗೊಳಿಸಬೇಕೆಂದು ಕೆಲವರು ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಪುನರಾವರ್ತಿತ ಅಭ್ಯರ್ಥಿಗಳನ್ನೂ ಈ ವರ್ಷದ ಮಟ್ಟಿಗೆ ಉತ್ತೀರ್ಣಗೊಳಿಸುವ ಸರಕಾರದ ನಿರ್ಧಾರವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದು, ಸರಕಾರದ ನಿಲುವನ್ನು ಹೈಕೋರ್ಟ್ ಸಮ್ಮತಿಸಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News