ಇದುವರೆಗೆ ಶೇ.65.14ರಷ್ಟು ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ: ಡಾ.ಅಶ್ವತ್ಥ ನಾರಾಯಣ

Update: 2021-07-08 13:00 GMT

ಬೆಂಗಳೂರು, ಜು. 8: `ವಿದ್ಯಾರ್ಥಿಗಳ ಲಸಿಕೀಕರಣಕ್ಕೆ ಇಂದಿನಿಂದಲೇ ಮತ್ತಷ್ಟು ಚುರುಕು ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲೇ ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದಲ್ಲದೆ, ಇದುವರೆಗೂ ಸರಕಾರಿ-ಅನುದಾನಿತ ಪದವಿ ಕಾಲೇಜುಗಳ ಶೇ.65.14ರಷ್ಟು ವಿದ್ಯಾರ್ಥಿ-ಸಿಬ್ಬಂದಿಗೆ ಕೋವಿಡ್ ಲಸಿಕೆ ಕೊಡಲಾಗಿದೆ' ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಗುರುವಾರ ಇಲ್ಲಿನ ಮತ್ತಿಕೆರೆಯ 3ನೆ ಮುಖ್ಯರಸ್ತೆಯಲ್ಲಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಡಾ. ಅಶ್ವತ್ಥನಾರಾಯಣ ಫೌಂಡೇಷನ್ ಹಾಗೂ ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್ ವತಿಯಿಂದ ಉಚಿತ ಲ್ಯಾಪ್‍ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, `ಪದವಿ ವಿದ್ಯಾರ್ಥಿಗಳಿಗೆ ಲಸಿಕೀಕರಣವನ್ನು ರಾಜ್ಯಾದ್ಯಂತ ಚುರುಕುಗೊಳಿಸಲು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರನಾಯಕ್ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಅವರು ಇಂದು ಎಲ್ಲ ಜಿಲ್ಲಾಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಸರಕಾರ ಈ ಬಗ್ಗೆ ವಿಶೇಷ ಒತ್ತು ನೀಡಿ ಆದ್ಯತಾ ಗುಂಪಿನಡಿಯಲ್ಲಿ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ' ಎಂದು ಹೇಳಿದರು.

ಖಾಸಗಿ ಕಾಲೇಜುಗಳಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ ಎಂಬ ಬಗ್ಗೆ ಅಂಕಿ-ಅಂಶ ಪಡೆದುಕೊಳ್ಳುತ್ತಿದ್ದೇವೆ. ಆ ಮಾಹಿತಿ ಸಿಕ್ಕಿದ ಕೂಡಲೇ ಉಳಿದ ಎಷ್ಟು ವಿದ್ಯಾರ್ಥಿಗಳಿಗೆ ಇನ್ನೆಷ್ಟು ದಿನದಲ್ಲಿ ಲಸಿಕೆ ನೀಡಲಾಗುವುದು ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಲಾಗುವುದು ಎಂದು ಡಾ.ಅಶ್ವತ್ಥ ನಾರಾಯಣ ಮಾಹಿತಿ ನೀಡಿದರು.

ವಿದ್ಯಾರ್ಥಿಗಳಿಗೆ ಲಸಿಕೆ ಅಂಕಿ-ಅಂಶ: ಇದೇ ವೇಳೆ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, `ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಈ ತಿಂಗಳ 7ರವರೆಗೆ ನೀಡಲಾಗಿರುವ ಲಸಿಕೆಯ ಅಂಶಗಳ ಮಾಹಿತಿಯನ್ನೂ ನೀಡಿದರು.

ರಾಜ್ಯದ ಆರು ಶೈಕ್ಷಣಿಕ ವಲಯಗಳ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ 4,90,799 ವಿದ್ಯಾರ್ಥಿಗಳಿದ್ದು, ಈವರೆಗೆ 3,13,898 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ಕೊಡಲಾಗಿದ್ದು, ಶೇ.63.96ರಷ್ಟು ಗುರಿ ತಲುಪಲಾಗಿದೆ. ಅದೇ ರೀತಿ ಒಟ್ಟು 29,241 ಸಿಬ್ಬಂದಿ ಇದ್ದು, ಈ ಪೈಕಿಗೆ 24,875 ಸಿಬ್ಬಂದಿಗೆ ಲಸಿಕೆ ನೀಡಲಾಗಿದ್ದು, ಶೇ.85.07ರಷ್ಟು ಗುರಿ ಸಾಧಿಸಲಾಗಿದೆ. ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ ಶೇ.65.14ರಷ್ಟು ಗುರಿ ತಲುಪಲಾಗಿದೆ ಎಂದು ಅವರು ವಿವರ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News