`ಮೊಬೈಲ್ ನೆಟ್‍ವರ್ಕ್' ಸಮಸ್ಯೆ ಪರಿಹಾರಕ್ಕೆ ಕ್ರಮ:ಶಿಕ್ಷಣ ಸಚಿವ ಸುರೇಶ್ ಕುಮಾರ್

Update: 2021-07-12 11:51 GMT

ಬೆಂಗಳೂರು, ಜು. 12: `ಕೋವಿಡ್‍ನ ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ `ನೆಟ್‍ವರ್ಕ್' ಸಮಸ್ಯೆಯನ್ನು ಪರಿಹರಿಸುವ ಸಂಬಂಧದಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರೊಂದಿಗೆ ಸೋಮವಾರ ಸಮಾಲೋಚನೆ ನಡೆಸಿದರು. 

ಈಗಾಗಲೇ ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್‍ವರ್ಕ್ ಪೂರೈಕೆದಾರ ಕಂಪೆನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ, ಸಚಿವರ ಗಮನಕ್ಕೆ ತಂದಿದ್ದಾರೆ.

`ಪ್ರಸ್ತುತ ಮಳೆಗಾಲವಾದ್ದರಿಂದ ರಾಜ್ಯದ ಮಲೆನಾಡು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್‍ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ ಪರ್ಯಾಯ ಬೋಧನಾ ಕ್ರಮಗಳಾದ ಆನ್‍ಲೈನ್ ಬೋಧನಾ ಕ್ರಮ ಇಲ್ಲವೇ ದೂರದರ್ಶನ ಚಂದನಾ ಪಾಠಗಳಿಗೆ ತೊಂದರೆಯಾಗಿರುವುದರಿಂದ ಈ ಕುರಿತು ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟವನ್ನು ಕಾಪಾಡಬೇಕಾಗಿದೆ' ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

`ಕೊರೋನ ಕಾಲಘಟ್ಟದಂತಹ ಪರಿಸ್ಥಿತಿಯಲ್ಲಿ ಭೌತಿಕ ಶಾಲಾ ತರಗತಿಗಳು ಆರಂಭವಾಗುತ್ತಿರುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರ್ಯಾಯ ಬೋಧನಾ ಕ್ರಮಗಳನ್ನೇ ಅವಲಂಬಿಸಬೇಕಾಗಿದೆ, ಎಲ್ಲ ಮಕ್ಕಳಿಗೂ ಗುಣಮಟ್ಟದ ಬೋಧನೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವು ಆನ್‍ಲೈನ್ ವ್ಯವಸ್ಥೆಯನ್ನೇ ನೆಚ್ಚಿಕೊಂಡಿರುವಂತಹ ಸಂದರ್ಭದಲ್ಲಿ ಮೊಬೈಲ್ ನೆಟ್‍ವರ್ಕ್ ಅನ್ನು ಬಲಪಡಿಸುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಎಲ್ಲರಂತೆ ಶಿಕ್ಷಣ ದೊರೆತು ಕಲಿಕಾ ನಿರಂತರತೆಯಲ್ಲಿ ಅವರನ್ನು ತೊಡಗಿಸಬೇಕಾಗಿದೆ. ಈ ಕುರಿತು ಸಿಎಂ ಅವರು, ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಯುದ್ಧೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಗ್ರಾ.ಪಂ. ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ: `ಡಿಜಿಟಲ್ ಶಿಕ್ಷಣ ಇಲ್ಲವೇ ಆನ್‍ಲೈನ್‍ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು' ಎಂದು ಸುರೇಶ್ ಕುಮಾರ್ ವಿವರಿಸಿದ್ದಾರೆ.

ಈ ಸಂಬಂಧದಲ್ಲಿ ಸೋಮವಾರ ಸಿಎಂ ಸಲಹೆಗಾರರಾದ ಪ್ರಶಾಂತ್ ಪ್ರಕಾಶ್ ಮತ್ತು ರಾಜ್ಯ ಸರಕಾರದ ಶೈಕ್ಷಣಿಕ ಸಲಹೆಗಾರ ಪ್ರೊ.ದೊರೆಸ್ವಾಮಿಯವರೊದಿಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಚರ್ಚಿಸಿದ ಸುರೇಶ್ ಕುಮಾರ್, `ರಾಜ್ಯದಲ್ಲಿರುವ 5,766 ಗ್ರಾ.ಪಂ. ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ ಮೂಲಕ ದೂರದರ್ಶನ ಇಲ್ಲವೇ ಮೊಬೈಲ್ ವಂಚಿತ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚರ್ಚಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ' ಎಂದು ತಿಳಿಸಿದ್ದಾರೆ. 

ಈ ಸಂಬಂಧದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಗ್ರಾಮೀಣ ಮಕ್ಕಳ ಶಿಕ್ಷಣ ಮುಂದುವರಿಕೆ ಮತ್ತು ಕಲಿಕಾ ನಿರಂತರತೆಗೆ ಅನುಕೂಲವಾಗುವಂತಹ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ. ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಉತ್ತಮಗೊಳಿಸುವುದು ಸೇರಿ ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ ರೂಪಿಸುವ ಕುರಿತಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿದ ಕೂಡಲೇ ಆರ್‍ಡಿಪಿಆರ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಶಿಕ್ಷಣ ಇಲಾಖೆಯ ಟಾಸ್ಕ್ ಫೋರ್ಸ್ ಈ ಎಲ್ಲ ಅಂಶಗಳನ್ನು ಅವಲೋಕಿಸಿ ಪ್ರಾಯೋಗಿಕ ಕ್ರಮಗಳ ಕುರಿತಂತೆ ಕ್ರಿಯಾಯೋಜನೆ ರೂಪಿಸಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News