ಮಡಿಕೇರಿ : ಎಸೆಸೆಲ್ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿ ಜು.12 : ಇದೇ ಜುಲೈ 19 ಮತ್ತು 22 ರಂದು ನಡೆಯುವ ಎಸೆಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಸಿದ್ಧತೆ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಎಸೆಸೆಲ್ಸಿ ಪರೀಕ್ಷೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶವಿಲ್ಲದೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅನುಸರಿಸಬೇಕಾದ ಕ್ರಮಗಳು, ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವ ಸಂದರ್ಭದಲ್ಲಿ ಥರ್ಮಲ್ ಸ್ಕ್ಯಾನರ್ ಮತ್ತು ಪಲ್ಸ್ ಆಕ್ಷಿಮೀಟರ್ ಮೂಲಕ ಪರೀಕ್ಷೆ ಮಾಡುವುದು, ಸ್ಯಾನಿಟೈಸರ್ ಮತ್ತು ಮಾಸ್ಕ್ ಬಳಸುವುದು, ಈಗಾಗಲೇ ಹೋಂ ಕ್ವಾರಂಟೈನ್ನಲ್ಲಿ ಇರುವ ವಿದ್ಯಾರ್ಥಿಗಳ ಮಾಹಿತಿ ಒದಗಿಸಬೇಕು. ಕೋವಿಡ್ ನಿಯಮ ಚಾಚು ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಪ್ರತೀ ತಾಲೂಕಿಗೆ ಆಂಬ್ಯುಲೆನ್ಸ್ ಹಾಗೂ ವೈದ್ಯಕೀಯ ತಂಡವನ್ನು ನೇಮಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪೂರ್ವ ಮತ್ತು ಪರೀಕ್ಷಾ ನಂತರ ಸ್ಯಾನಿಟೈಸರ್ ಮಾಡಲು ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮವಹಿಸುವಂತೆ ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪರೀಕ್ಷೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
6,906 ವಿದ್ಯಾರ್ಥಿಗಳು
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶ್ರೀಧರನ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 6906 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 3,462 ಬಾಲಕರು ಹಾಗೂ 3,384 ಬಾಲಕೀಯರು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಮಡಿಕೇರಿ ತಾಲೂಕಿನಲ್ಲಿ 2041, ಸೋಮವಾರಪೇಟೆ ತಾಲೂಕಿನಲ್ಲಿ 2,703 ಹಾಗೂ ವಿರಾಜಪೇಟೆ ತಾಲುಕಿನಲ್ಲಿ 2,162 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ 41 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಮಡಿಕೇರಿಯಲ್ಲಿ 13, ಸೋಮವಾರಪೇಟೆ ತಾಲೂಕಿನಲ್ಲಿ 17 ಹಾಗೂ ವಿರಾಜಪೇಟೆ ತಾಲೂಕಿನಲ್ಲಿ 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. 1 ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಡಿಡಿಪಿಐ ಅವರು ಮಾಹಿತಿ ನೀಡಿದರು.
ಎಸೆಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಿಗೆ 1352 ಮಂದಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ಇವರು ಪ್ರಥಮ ಹಂತದ ಲಸಿಕೆ ಪಡೆದಿದ್ದಾರೆ ಎಂದು ಅವರು ವಿವರಿಸಿದರು.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮಾಸ್ಕ್ ವಿತರಿಸಲಾಗುತ್ತದೆ ಎಂದು ಅವರು ತಿಳಿಸಿದರು, ಹಾಗೆಯೇ ಜುಲೈ 15 ಮತ್ತು 17 ರಂದು ಎಸ್ಎಸ್ಎಲ್ಸಿ ಪರೀಕ್ಷಾ ಪೂರ್ವದ ಅಣುಕು ಪರೀಕ್ಷೆ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಲಾಗುತ್ತದೆ, ವಿದ್ಯಾರ್ಥಿಗಳು ಪರೀಕ್ಷೆ ಸಂಬಂಧಿಸಿದಂತೆ ಯಾವುದೇ ಸಂಶಯ ಇದ್ದಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ಪರೀಕ್ಷ್ಷೆಯನ್ನು ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಶ್ರದ್ಧೆಯಿಂದ, ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ ಕಾರ್ಯ ನಿರ್ವಹಿಸಬೇಕು ಎಂದು ಶ್ರೀಧರನ್ ಅವರು ಕೋರಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಮಾತನಾಡಿ, ಈ ಬಾರಿಯ ಪರೀಕ್ಷೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಎಸೆಸೆಲ್ಸಿ ಪರೀಕ್ಷಾ ದಿನದಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಮ್ಮಿ ಸೀಕ್ಕ್ವೇರ ಅವರು ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಒದಗಿಸಲಾಗಿರುವ 7 ಸಾವಿರ ಮಾಸ್ಕ್ ಅನ್ನು ಜಿಲ್ಲಾಧಿಕಾರಿ ಅವರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಉಪ ಕಾರ್ಯದರ್ಶಿ ಲಕ್ಷ್ಮಿ, ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಕೆ.ಕಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರಿಶೈಲ ಬೀಳಗಿ, ಹೆಚ್.ಕೆ.ಪಾಂಡು, ಗುರುರಾಜ್, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಮುಖ್ಯೋಪಾಧ್ಯಾಯರು ಇತರರು ಇದ್ದರು.